ಬೆಳಗಾವಿ ಕಾಂಗ್ರೆಸ್ ಅಸಮಾಧಾನ : ರಮೇಶ್ v/s ಡಿ.ಕೆ.ಶಿವಕುಮಾರ್!
Recommended Video
ಬೆಳಗಾವಿ, ಸೆಪ್ಟೆಂಬರ್ 05 : ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿನ ಅಸಮಾಧಾನ ಇನ್ನೂ ಬಗೆಹರಿದಿಲ್ಲ. 'ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾ ರಾಜಕೀಯ ಬೆಳವಣಿಗೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು' ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಸತೀಶ್ ಜಾರಕಿಹೊಳಿ ಅವರ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮುನಿಸಿಕೊಂಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಹ ಈ ಬಿಕ್ಕಟ್ಟು ಬಗೆಹರಿಸಲು ಪ್ರಯತ್ನ ನಡೆಸಿದ್ದಾರೆ.
ಬೆಳಗಾವಿ ಕಾಂಗ್ರೆಸ್ ಸಂಘರ್ಷ : ಇನ್ನೂ ಶಮನವಾಗದ ಬಿಕ್ಕಟ್ಟು!
ಸಚಿವ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. 'ನಮ್ಮ ಜಿಲ್ಲೆ ನಾವು ನೋಡಿಕೊಳ್ಳಬೇಕು' ಎಂದು ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನಿಗೆ ನಿಂತ ವೀರಶೈವ ಮಹಾಸಭಾ!
'ಡಿ.ಕೆ.ಶಿವಕುಮಾರ್ ಸೇರಿದಂತೆ ಯಾರೇ ಆಗಲಿ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ' ಎಂದು ರಮೇಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ಬಂದ ಬಳಿಕ ಜಾರಕಿಹೊಳಿ ಸಹೋದರರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ...
ಏನಿದು ಜಾರಕಿಹೊಳಿ ಬ್ರದರ್ಸ್ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಕದನ?
ರಮೇಶ್ ಜಾರಕಿಹೊಳಿ ಹೇಳಿದ್ದೇನು?
'ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಅಂತೆಯೇ ನಾನು ಬೆಂಗಳೂರಿನ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಿದರೆ ತಪ್ಪಾಗುತ್ತದೆ. ನಮ್ಮ ಜಿಲ್ಲೆ ನಾವು ನೋಡಿಕೊಳ್ಳಬೇಕು' ಎಂದು ಸಚಿವ ರಮೇಶ್ ಜಾರಕಿಹೊಳಿ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗಾಗಿ ಹೇಳಿಕೆ ನೀಡಿದ್ದಾರೆ.
ನಾವು ಕರೆದಾಗ ಬೇಕಿದ್ದರೆ ಬರಲಿ
'ಸಮಸ್ಯೆಗಳನ್ನು ಪರಿಹರಿಸಿಕೊಡಿ ಎಂದು ನಾವು ಕರೆದಾಗ ಬೇಕಿದ್ದರೆ ಬರಲಿ. ಅವರಾಗಿಯೇ ಮಧ್ಯಪ್ರವೇಶಿಸುವುದು ಸರಿಯಲ್ಲ. ಅವರೂ ಸೇರಿದಂತೆ ಯಾರೇ ಆದರೂ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಲು ಬಿಡುವುದಿಲ್ಲ' ಎಂದು ರಮೇಶ್ ಜಾಕಿಹೊಳಿ ಹೇಳಿದರು.
'ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ ಇರುವ ಕುರಿತು ಈಗಾಗಲೇ ಚರ್ಚಿಸಿದ್ದೇವೆ. ಎಲ್ಲವೂ ಸರಿಯಾಗಿದೆ. ರಾಜಕಾರಣದಲ್ಲಿ ವಾಗ್ವಾದ ನಡೆಯುವುದು ಸಹಜ ಮತ್ತು ಸಾಮಾನ್ಯ. ಅದನ್ನು ವೈರತ್ವ ಎಂದುಕೊಂಡರೆ ಮೂರ್ಖತನ' ಎಂದು ಸಚಿವರು ತಿಳಿಸಿದರು.
ಕಾಂಗ್ರೆಸ್ ಹಾಳಾಗುತ್ತದೆ
'ಬೆಳಗಾವಿ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಉತ್ತಮವಾಗಿದೆ. ಷೋ ಪೀಸ್ಗಳ ಮಾತು ಕೇಳಿದರೆ ಕಾಂಗ್ರೆಸ್ ಹಾಳಾಗುತ್ತದೆ. ಬೆಂಗಳೂರಿಗೆ ಹೋಗಿ ಪೋ ಮಾಡಿದರೆ ಪಕ್ಷ ಬೆಳೆಯುವುದಿಲ್ಲ' ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಮೇಶ್ ಜಾಕಿಹೊಳಿ ಟೀಕಿಸಿದರು.
'ಭಿನ್ನಮತ ಇದ್ದರೇನೆ ಅದು ಪ್ರಜಾಪ್ರಭುತ್ವ ಎನಿಸಿಕೊಳ್ಳುತ್ತದೆ. ನಾವು ಹೇಳಿದ್ದಕ್ಕೆಲ್ಲಾ ತಲೆ ಅಲ್ಲಾಡಿಸುವವರು ಇದ್ದರೆ ಹಿಟ್ಲರ್ ಆಡಳಿತವಾಗುತ್ತದೆ ಎಂದು ಜಾರಕಿಹೊಳಿ ಹೇಳಿದರು.
'ಪಕ್ಷ ಹೇಳಿದ ಕೆಲಸ ಮಾಡುವೆ'
ಬೆಳಗಾವಿ ಕಾಂಗ್ರೆಸ್ ವಿವಾದದ ಬಗ್ಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 'ನನಗೆ ಯಾವ ಜಿಲ್ಲೆಯ ರಾಜಕಾರಣವೂ ಬೇಡ. ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಮಾಡುತ್ತೇನೆ' ಎಂದು ಹೇಳಿದ್ದಾರೆ.
ಸಹೋದರರ ಜೊತೆ ಸಭೆ ನಡೆಸಿ
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಬೆಳಗಾವಿ ಕಾಂಗ್ರೆಸ್ ವಿವಾದದ ಬಗ್ಗೆ ರಮೇಶ್ ಜಾರಕಿಹೊಳಿ ಅವರ ಜೊತೆ ಸಭೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಲ್ಲಿದ್ದು, ಅವರು ವಾಪಸ್ ಆದ ಬಳಿಕ ಸಭೆ ನಡೆಯುವ ನಿರೀಕ್ಷೆ ಇದೆ.