ಸ್ಮಾರ್ಟ್ ಸಿಟಿ ನಿರ್ಮಾಣದಲ್ಲಿ ಅರ್ಧ ನಮ್ಮ ಪಾಲು: ಸಿದ್ದರಾಮಯ್ಯ
ಕೇಂದ್ರ ಸರ್ಕಾರದ ಪ್ರತಿಷ್ಠಿತ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾಗುವ ನಗರಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರವೂ ಶೇ.50ರಷ್ಟು ವೆಚ್ಚ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿ, ಡಿಸೆಂಬರ್,3: ಕೇಂದ್ರ ಸರ್ಕಾರ ರಾಜ್ಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಮಾರ್ಟ್ ಸಿಟಿ ನಗರ ಯೋಜನೆ ಅನುಷ್ಠಾನದಕ್ಕೆ ರಾಜ್ಯ ಸರ್ಕಾರವೂ ಸಹ ಶೇ.50 ರಷ್ಟು ವೆಚ್ಚ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವತಿಯಿಂದ ನಿರ್ಮಿಸಲಾಗುತ್ತಿರುವ ಬೆಳಗಾವಿ ನಗರದ ನೂತನ ಕೇಂದ್ರ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಈ ಯೋಜನೆಯಡಿ ರಾಜ್ಯ ಸರ್ಕಾರದ ನೆರವೂ ಗಣನೀಯವಾಗಿರುವುದರಿಂದ ಇದು ಕೇವಲ ಕೇಂದ್ರ ಸರ್ಕಾರದ ಯೋಜನೆ ಎಂಬಂತೆ ಬಿಂಬಿತವಾಗಬಾರದು ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಲ್ಲೂ ರಾಜ್ಯ ಸರ್ಕಾರದ ಅರ್ಧ ಪಾಲು ಇರುವುದರಿಂದ ಯೋಜನೆಯ ಹೆಸರಿನಲ್ಲಿ ರಾಜ್ಯದ ಹೆಸರೂ ಬರಬೇಕು ಎಂದು ಅವರು ಪ್ರತಿಪಾದಿಸಿದರು.
ಜನರಿಗೆ ಉತ್ತಮ ಗುಣಮಟ್ಟದ ಜೀವನ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಜತೆ ರಾಜ್ಯ ಸರ್ಕಾರವು ಕೈಜೋಡಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಹೈಟೆಕ್ ಬಸ್ ನಿಲ್ದಾಣ ಕಾಮಗಾರಿ ವರ್ಷದಲ್ಲಿ ಪೂರ್ಣ
ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಉತ್ತರ ಕರ್ನಾಟಕದ ಪ್ರಮುಖ ನಗರ ಬೆಳಗಾವಿಯಲ್ಲಿ 2018ರ ಜನವರಿ ವೇಳೆಗೆ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ನೂತನ ಬಸ್ ನಿಲ್ದಾಣದ ಮೊದಲ ಹಂತದ ಕಾಮಗಾರಿಗೆ ಸರ್ಕಾರ 30 ಕೋಟಿ ರೂಪಾಯಿ ಒದಗಿಸಿದ್ದು, 2018ರ ಜನವರಿ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು.
ಬೆಳಗಾವಿ ಜನರ ಆಶಯದ ಮೇರೆಗೆ ಸುಸಜ್ಜಿತ ಬಸ್ ನಿಲ್ದಾಣವನ್ನು ಸರ್ಕಾರ ನಿರ್ಮಿಸುತ್ತಿದೆ. ಈ ಹೈಟೆಕ್ ಬಸ್ ನಿಲ್ದಾಣವು ಸ್ಮಾರ್ಟ್ ಸಿಟಿಗೆ ಗರಿಯಾಗಲಿದೆ ಎಂದು ಅವರು ಹೇಳಿದರು.