ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್ ಗೆ ವಿಟಿಯು ಗೌರವ ಡಾಕ್ಟರೇಟ್
ಬೆಳಗಾವಿ, ಜನವರಿ 03 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಪದ್ಮಶ್ರೀ ಎ.ಎಸ್. ಕಿರಣ್ ಕುಮಾರ್ ಹಾಗೂ ಮಹೀಂದ್ರ ಕಂಪನಿ ಚೇರ್ಮನ್ ಆನಂದ್ ಮಹೀಂದ್ರ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಕರಿಸಿದ್ದಪ್ಪ ಮಾತನಾಡಿ, ಜನವರಿ 9 ರಂದು ನಡೆಯುವ ವಿಟಿಯು 17ನೇ ಘಟಿಕೋತ್ಸವದಲ್ಲಿ ಇಸ್ರೋ ಅಧ್ಯಕ್ಷ ಪದ್ಮಶ್ರೀ ಎ.ಎಸ್. ಕಿರಣ್ ಕುಮಾರ್ ಹಾಗೂ ಮಹೀಂದ್ರ ಕಂಪನಿ ಚೇರಮೆನ್ ಆನಂದ್ ಮಹೀಂದ್ರ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದರು.
ಘಟಿಕೋತ್ಸವಕ್ಕೆ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರ ಬುದ್ಧೆ ಚಾಲನೆ ನೀಡಲಿದ್ದಾರೆ. ಆದಿಚುಂಚನಗಿರಿ ಇನ್ ಸ್ಟಿಟ್ಯೂಟ್ ಆಪ್ ಟೆಕ್ನಾಲಜಿ , ಬಿಇ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಚಿನ್ ಕೀರ್ತಿ ಎನ್ ಪ್ರಥಮ ರಾಂಕ್ ಪಡೆದು 13 ಚಿನ್ನದ ಪದಕ ಪಡೆದಿದ್ದಾರೆ ಅವರನ್ನು ಸನ್ಮಾನಿಸಲಾಗುತ್ತದೆ. ರಾಜ್ಯಪಾಲ ವಜುಭಾಯಿ ವಾಲಾ, ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭಾಗಿಯಾಗಲಿದ್ದಾರೆ ಎಂದರು.