ಸರ್ಕಾರದ ಸಾಧನೆಯ ಅಂಕಿ ಅಂಶಗಳನ್ನು ತನ್ನಿ : ಯಡಿಯೂರಪ್ಪ ಸವಾಲು
ಬಳ್ಳಾರಿ, ಆಗಸ್ಟ್ 26 : 'ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಸಾಧನೆಯ ವಿವರಗಳ ಅಂಕಿ ಅಂಶಗಳನ್ನು ತನ್ನಿ, ಯಾವ ಸರ್ಕಾರ ಜನಪರವಾದದ್ದು ಎಂಬ ಬಗ್ಗೆ ಚರ್ಚೆ ಮಾಡೋಣ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಗುರುವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ಸಮಾರಂಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿಫಲತೆಗಳನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟರು.[ಅಂಕೋಲಾದ ಗದ್ದೆಗೆ ಇಳಿದು ನಾಟಿ ಮಾಡಿದ ಯಡಿಯೂರಪ್ಪ]
'ರಾಜ್ಯದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ಗೆ ಮತ ಹಾಕಿದ್ದರು. ಆದರೆ, ಅಧಿಕಾರಕ್ಕೆ ಬಂದು ಮೂರುವರೆ ವರ್ಷಗಳು ಕಳೆದರೂ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸಿಲ್ಲ. ಜನಪರ ಆಡಳಿತ ನಡೆಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ' ಎಂದು ಯಡಿಯೂರಪ್ಪ ದೂರಿದರು.[ಸಿದ್ದರಾಮಯ್ಯ ಸರ್ಕಾರದ 10 ಸಾಧನೆಗಳು]
'ಎಲ್ಲಾ ಇಲಾಖೆಗಳಲ್ಲಿ ಭ್ರಷ್ಟಾಚಾರವಿದೆ. ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರೈತರ ಆತ್ಮಹತ್ಯೆ ತಡೆಯಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ' ಎಂದು ಯಡಿಯೂರಪ್ಪ ಆರೋಪಿಸಿದರು....[ಸಿದ್ದರಾಮಯ್ಯ ಸರ್ಕಾರವನ್ನು ಕಾಡಿದ 10 ವಿವಾದಗಳು]
ಬಿಜೆಪಿ ಸಾಧನೆಯನ್ನು ಒಮ್ಮೆ ನೋಡಿ
'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನಡೆಸಲು ವಿಫಲವಾಗಿದೆ. ಬಿಜೆಪಿ ಸರ್ಕಾರದ ಮೂರುವರೆ ವರ್ಷಗಳ ಸಾಧನೆ ನೋಡಿ. ನಿಮ್ಮ ಸರ್ಕಾರದ ಸಾಧನೆಯನ್ನು ನೋಡಿ. ಯಾರ ಆಡಳಿತ ಉತ್ತಮವಾಗಿತ್ತು? ಎಂಬುದು ತಿಳಿಯಲಿದೆ' ಎಂದು ಯಡಿಯೂರಪ್ಪ ಸವಾಲು ಹಾಕಿದರು.
ಆಣೆಕಟ್ಟು ಪ್ರಸ್ತಾವನೆ ಮರೆತ ಸರ್ಕಾರ
'ಕೊಪ್ಪಳ ಜಿಲ್ಲೆಯ ನವಿಲೆಯಲ್ಲಿ ತುಂಗಭದ್ರಾ ನದಿಗೆ ಅಣೆಕಟ್ಟು ನಿರ್ಮಿಸಲು ಯೋಜನೆಯನ್ನು ಬಿಜೆಪಿ ಸರ್ಕಾರ ರೂಪಿಸಿತ್ತು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅದನ್ನು ಮರೆತಿದೆ. ಇದು ಸರ್ಕಾರಕ್ಕೆ ರೈತರ ಮೇಲಿರುವ ಕಾಳಜಿಯನ್ನು ತೋರಿಸುತ್ತದೆ' ಎಂದು ಯಡಿಯೂರಪ್ಪ ಟೀಕಿಸಿದರು.
'ಮೋದಿ ಜೊತೆ ಕೈ ಜೋಡಿಸೋಣ'
'ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ನೀವು ಅವರ ಜೊತೆ ಕೈ ಜೋಡಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಬಿಜೆಪಿ ಸರ್ಕಾರ ರಚನೆಗೆ ಸಹಕಾರ ನೀಡಿ' ಎಂದು ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆ ನೀಡಿದರು.
ಯಾರು-ಯಾರು ಪಾಲ್ಗೊಂಡಿದ್ದರು
ಬಳ್ಳಾರಿ ಸಂಸದ ಬಿ.ಶ್ರೀರಾಮುಲು, ಸಂಸದರಾದ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ.ರವಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.