ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಆನಂದ್ ಸಿಂಗ್!
Recommended Video
ಬಳ್ಳಾರಿ, ಸೆಪ್ಟೆಂಬರ್ 05 : ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದರು. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಬುಧವಾರ ಹೊಸಪೇಟೆಯಲ್ಲಿ ಶಾಸಕ ಆನಂದ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸುವ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಮಾತನಾಡಿದ ಅವರು, 'ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ' ಎಂದು ಘೋಷಿಸಿದರು.
2018ರ ಚುನಾವಣೆಯಲ್ಲಿ ಆನಂದ್ ಸಿಂಗ್ ವಿಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. 83,214 ಮತಗಳನ್ನು ಪಡೆದು ಜಯಗಳಿಸಿದ್ದರು. ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿಯ ಎಚ್.ಆರ್.ಗವಿಯಪ್ಪ 74,986 ಮತಗಳನ್ನು ಪಡೆದಿದ್ದರು.
ಕುತೂಹಲ ಕೆರಳಿಸಿದ ಆನಂದ್ ಸಿಂಗ್ -ಡಿಕೆಶಿ ಭೇಟಿ
ಎರಡು ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಆನಂದ್ ಸಿಂಗ್, ಬಿಜೆಪಿ ಸರ್ಕಾರದಲ್ಲಿ ಸಚಿವರೂ ಆಗಿದ್ದರು. ಪಕ್ಷದಲ್ಲಿ ನನನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷ ಬಿಟ್ಟಿದ್ದರು. ನಂತರ ಕಾಂಗ್ರೆಸ್ ಸೇರಿ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಆನಂದ್ ಸಿಂಗ್ ಎಂಟ್ರಿಯಿಂದ ಬಿರುಕುಗೊಂಡ ಬಳ್ಳಾರಿ ಕಾಂಗ್ರೆಸ್
ಆನಂದ್ ಸಿಂಗ್ ಹೇಳಿದ್ದೇನು?
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಆನಂದ್ ಸಿಂಗ್, 'ಚುನಾವಣಾ ರಾಜಕಾರಣದಿಂದ ನಿವೃತ್ತಿ ತೆಗೆದುಕೊಳ್ಳುತ್ತಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಇನ್ನು ಬೇರೆಯವರಿಗೆ ಅವಕಾಶ ಮಾಡಿಕೊಡುತ್ತೇನೆ' ಎಂದರು.
'ವಾಲ್ಮೀಕಿ ಸಮುದಾಯದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ನಿಮ್ಮ ಪ್ರೀತಿಗೆ ನಾನು ಚಿರ ಋಣಿಯಾಗಿದ್ದೇನೆ' ಎಂದು ಹೇಳಿದರು.
ರಾಜಕೀಯ ಚಿತ್ರಣ ಬದಲು
ಆನಂದ್ ಸಿಂಗ್ ಅವರು ಬಿಜೆಪಿಯಿಂದ 2 ಬಾರಿ ಗೆದ್ದು ಬಂದಿದ್ದರು. ಮಾಜಿ ಸಚಿವರಾದ ಜನಾರ್ದನ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರ ಜೊತೆ ಗುರುತಿಸಿಕೊಂಡಿದ್ದರು. ಬಿ.ಶ್ರೀರಾಮುಲು ಅವರು ಬಿಜೆಪಿ ತೊರೆದು ಬಿಎಸ್ಆರ್ ಕಾಂಗ್ರೆಸ್ ಕಟ್ಟಿದಾಗ ಆನಂದ್ ಸಿಂಗ್ ಅವರ ಜೊತೆ ಹೋಗದೇ ಬಿಜೆಪಿಯಲ್ಲಿಯೇ ಉಳಿದಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ತೊರೆದಿದ್ದರು. ಕಾಂಗ್ರೆಸ್ ಪಕ್ಷ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು
ಆನಂದ್ ಸಿಂಗ್ 2008ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 52,418 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಸರ್ಕಾರದಲ್ಲಿ ಸಚಿವರೂ ಆಗಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಕಣಕ್ಕಿಳಿದು 69,995 ಮತಗಳನ್ನು ಪಡೆದಿದ್ದರು.
2018ರ ಚುನಾವಣೆಯಲ್ಲಿ ಆನಂದ್ ಸಿಂಗ್ ವಿಜಯನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, 83,214 ಮತಗಳನ್ನು ಪಡೆದು ಜಯಗಳಿಸಿದ್ದರು.
ಜೈಲು ಸೇರಿದ್ದರು ಆನಂದ್ ಸಿಂಗ್
2015ರಲ್ಲಿ ಶಾಸಕ ಆನಂದ್ ಸಿಂಗ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರು ಅಲ್ಲಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ರಾಜೀನಾಮೆಯನ್ನು ಅಂಗೀಕಾರ ಮಾಡಿರಲಿಲ್ಲ.
ಆನಂದ್ ಸಿಂಗ್ ಬಿಜೆಪಿ ಬಿಟ್ಟು ಹೋಗುತ್ತಿದ್ದಂತೆ ಪಕ್ಷ ವಿಜಯನಗರದಲ್ಲಿ ಎಚ್.ಆರ್.ಗವಿಯಪ್ಪ ಅವರನ್ನು ಕಣಕ್ಕಿಳಿಸಿತು. ಆದರೆ, ಆನಂದ್ ಸಿಂಗ್ ಅವರ ಜನಪ್ರಿಯತೆ ಕಾರಣದಿಂದಾಗಿ ಅವರು 2018ರ ಚುನಾವಣೆಯಲ್ಲಿ ಗೆದ್ದುಬಂದರು.
ಡಿ.ಕೆ.ಶಿವಕುಮಾರ್ ಆಪ್ತರು
ಶಾಸಕ ಆನಂದ್ ಸಿಂಗ್ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರು. ಕರ್ನಾಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಅವರು ಭಾರಿ ಸುದ್ದಿ ಮಾಡಿದ್ದರು. ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಅಂತಿಮವಾಗಿ ಡಿ.ಕೆ.ಶಿವಕುಮಾರ್ ಅವರ ಜೊತೆ ಸದನಕ್ಕೆ ಆಗಮಿಸಿದ್ದರು. ಆನಂದ್ ಸಿಂಗ್ ಬಿಜೆಪಿ ಪಾಳಕ್ಕೆ ಹೋಗದಂತೆ ಡಿ.ಕೆ.ಶಿವಕುಮಾರ್ ತಡೆದಿದ್ದರು.