ಮನೆಗೆ ಮಳೆ ನೀರು ನುಗ್ಗಿದರೆ 10,000 ಸಾವಿರ ಪರಿಹಾರ: ಡಿ.ಕೆ ಶಿವಕುಮಾರ್ ಘೋಷಣೆ
ಬೆಂಗಳೂರಲ್ಲಿ ಮಳೆ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ. ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿನ ಹಲವು ಮನೆಗಳಿಗೆ ಹಾನಿಯಾಗಿದ್ದು, ಜನ ಪರದಾಡುತ್ತಿದ್ದಾರೆ. ಇದೀಗ ಮಳೆ ಹಾನಿಯಿಂದ ಪರದಾಡುತ್ತಿರುವವರಿಗೆ ಪರಿಹಾರ ನೀಡುವ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗುಡ್ನ್ಯೂಸ್ ಕೊಟ್ಟಿದ್ದಾರೆ.
ಮನೆಗೆ ನೀರು ನುಗ್ಗಿ ತೊಂದರೆ ಎದುರಿಸುತ್ತಿರುವವರಿಗೆ ತಲಾ 10,000 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅಲ್ಲದೇ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದೆ. ರಾಜಕಾಲುವೆಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ನಡೆಯುತ್ತಿದೆ ಎಂದಿದ್ದಾರೆ.

ಮಳೆಯಿಂದ ಸಮಸ್ಯೆ ಆಗಿರುವ ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್ ಪುರಂನ ಹೊರಮಾವಿನ ಸಾಯಿ ಬಡಾವಣೆಗೆ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿಯ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು ರಾಜಕಾಲುವೆ ಸ್ವಚ್ಛತಾ ಕೆಲಸದ ವಿಚಾರವಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೆಲಸ ಮಾಡುತ್ತಿದ್ದಾರೆ. ಎನ್ಡಿಆರ್ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳ ಅಡಿ ಕೆರೆಗಳ ಸ್ವಚ್ಛತೆ, ಹೂಳು ತೆಗೆಯುವ ಕೆಲಸ ಮಾಡಲಾಗುವುದು. ಶೀಘ್ರದಲ್ಲೇ ಕೆರೆ ನಿರ್ವಹಣಾ ಸಮಿತಿಯ ಸಭೆ ಕರೆಯಲಾಗುವುದು ಎಂದೂ ಹೇಳಿದ್ದಾರೆ.
5 ಲಕ್ಷ ಪರಿಹಾರ: ಬೆಂಗಳೂರಿನಲ್ಲಿ ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರಲ್ಲಿ ಖಾಸಗಿಯವರು ರಾಜಕಾಲುವೆ ಒತ್ತುವರಿ ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದರಿಂದ ಕೆಲವು ಭಾಗದಲ್ಲಿ ರಾಜಕಾಲುವೆಗಳ ಒತ್ತುವರಿ ತೆರವು ಮಾಡಲು ಸಾಧ್ಯವಾಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ.
ಯಾವುದನ್ನೂ ಪರಿಗಣಿಸದೆ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಈ ಸಂಬಂಧ ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿ ಪಡಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ, ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶಿಸಿದ್ದೇನೆ ಎಂದಿದ್ದಾರೆ.
ಯಲಹಂಕದ ಕೇಂದ್ರಿಯ ವಿಹಾರದಲ್ಲಿ 8 ಬ್ಲಾಕ್ ಗಳಿದ್ದು ಸುಮಾರು 600 ಕ್ಕೂ ಹೆಚ್ಚು ಫ್ಲಾಟ್ ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯ ನಡೆಸುತ್ತಿದೆ. ಶೇ 95 ರಷ್ಟು ನಿವಾಸಿಗಳು ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎಂದು ಹೇಳಿದ್ದಾರೆ.
ಅವರನ್ನು ಇಲ್ಲಿಯೇ ಬಿಡಲು ಆಗುವುದಿಲ್ಲ. ಏಕೆಂದರೆ ಕುಡಿಯಲು ನೀರಿಲ್ಲ, ತಿನ್ನಲು ಆಹಾರವಿಲ್ಲ ಹೀಗಿದ್ದಾಗ ಏನಾದರೂ ತೊಂದರೆ ಆದರೆ ನಾವು ಜವಾಬ್ದಾರರಾಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications