114 ಕಿ.ಮೀ ಎಲಿವೆಟೆಡ್ ಕಾರಿಡಾರ್, ಸುರಂಗ ಮಾರ್ಗ & ಬೆಂಗಳೂರು ವಿಭಜನೆ ಬಗ್ಗೆ ಡಿ.ಕೆ ಶಿವಕುಮಾರ್ ಬಿಗ್ ಅಪ್ಡೇಟ್ಸ್!
ಬೆಂಗಳೂರು ವಿಭಜನೆ ಹಾಗೂ ಗ್ರೇಟರ್ ಬೆಂಗಳೂರು ರಚನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂದು ಮಾಡಲಾಗಿದ್ದು. ಈಗ ಇರುವ ಪಾಲಿಕೆಯು ಮುಂದಿನ ದಿನಗಳಲ್ಲಿ ಮೂರು ವಿಭಜನೆ ಆಗಲಿದೆ. ಇದೇ ವರ್ಷ ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ ಎಂದು ಹೇಳಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಿ ಮೂರು ಪಾಲಿಕೆಗಳನ್ನಾಗಿ ಮಾಡುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಇದರ ಭಾಗವಾಗಿ ಸಿದ್ಧತೆಗಳು ಶುರುವಾಗಿದೆ ಎಂದು ಹೇಳಲಾಗಿದೆ. ಬೆಂಗಳೂರು ವಿಭಜನೆಗೆ ವಿರೋಧದ ನಡುವೆಯೂ ಭರ್ಜರಿ ಸಿದ್ಧತೆಗಳನ್ನು ರಾಜ್ಯ ಸರ್ಕಾರವು ಮಾಡಿಕೊಳ್ಳುತ್ತಿದೆ. ರಾಜ್ಯದ ಪ್ರಮುಖ ಹಾಗೂ ಹೆಚ್ಚು ಆದಾಯ ಬರುವ ಪಾಲಿಕೆ ಈಗಾಗಲೇ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ.

ಸುರಂಗ ಮಾರ್ಗಕ್ಕೆ ಇಷ್ಟರಲ್ಲೇ ಟೆಂಡರ್: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್ಎಸ್ನಲ್ಲಿ ಕಾವೇರಿ ಆರತಿ ನಡೆಸುವ ಬಗ್ಗೆಯೂ ಅವರು ಮಾತನಾಡಿದ್ದಾರೆ. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಎನ್ನುವ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದಿದ್ದಾರೆ.
ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದಿದ್ದಾರೆ.
ಮುಂದುವರಿದು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದಿದ್ದಾರೆ.
ಕಸ ವಿಲೇವಾರಿ & ಸ್ವಚ್ಛ ಬೆಂಗಳೂರು ಕಾರ್ಯಕ್ರಮ: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲಿ 2ರಿಂದ 4 ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್ಗಳನ್ನು ಕರೆಯಲು ಮುಂದಾಗಿದ್ದೇವೆ. ಸುಮಾರು 4000 ಕೋಟಿ ರೂಪಾಯಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದು ಹೇಳಿದ್ದಾರೆ.
ಮುಂದುವರಿದು ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಸಹ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ನೀಡಲಾಗುವ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ, ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ ಎಂದಿದ್ದಾರೆ. ಇನ್ನು ಇಂಟಿಗ್ರೇಟ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಮಾಡಲು 15 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದರು.

ಡಿಕೆ ಶಿವಕುಮಾರ್ ಕೊಟ್ಟಿರುವ ಪ್ರಮುಖ ಸೂಚನೆಗಳು
- ಬೆಂಗಳೂರಿನ ಫುಟ್ಪಾತ್ ಅಂಗಡಿಗಳನ್ನು ತೆರವು ಮಾಡಲಾಗುವುದು. 27,665 ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ ತಳ್ಳುವ ವಾಹನ ನೀಡಲು ಸಿದ್ಧ.
- ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ಗಳನ್ನು ಕತ್ತರಿಸಲು ಸೂಚನೆ
- ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ
- ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ರೂ. ಪರಿಹಾರ
- ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಬೆಂಗಳೂರಿನ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು.
- ಮಳೆ ಪೀಡಿತ ಪ್ರದೇಶಗಳ ಶಾಸಕರ ಜತೆ ಚರ್ಚೆ ಮಾಡಿ ತುರ್ತು ಕೆಲಸ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಇದಕ್ಕೆ ಅಗತ್ಯವಿರುವ ಬಜೆಟ್ನ್ನು ಸರ್ಕಾರದಿಂದ ಒದಗಿಸಲಾಗುತ್ತದೆ.
- ಟ್ಯಾಂಕರ್ ನೀರಿನ ವಿಚಾರವಾಗಿ ದೂರು ಬಂದಿರುವ ಪ್ರದೇಶಗಳಲ್ಲಿ ಆಯಾ ಋತುವಿಗೆ ತಕ್ಕಂತೆ ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನ
- ರಾಜಕಾಲುವೆ ಸುತ್ತಮುತ್ತಲಿನ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲಾಗಿದೆ. ಈಗಾಗಲೇ 300 ಕಿ.ಮೀ. ಉದ್ದದ ರಸ್ತೆ ಗುರುತಿಸಿದ್ದು, ಶಾಸಕರು ಕೂಡ ಸುಮಾರು 300 ಕಿ.ಮೀ ಉದ್ದದಷ್ಟು ರಸ್ತೆ ನಿರ್ಮಾಣಕ್ಕೆ ಶಿಫಾರಸ್ಸು ನೀಡಬಹುದು ಎಂದಿದ್ದಾರೆ.
- ಇನ್ನು ಮುಂದೆ ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ ಪಾರ್ಕಿಂಗ್ಗೆ ಅವಕಾಶ ಇರುವುದಿಲ್ಲ
- ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು ಒಳಚರಂಡಿ ಹಾಗೂ ನೀರುಗಾಲುವೆಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ ಎಂದು ಕೆಲವು ಶಾಸಕರು ಹೇಳಿದ್ದಾರೆ. ಈ ರೀತಿ ಎಳೆದಿರುವ ಕೇಬಲ್ಗಳನ್ನು ಕತ್ತರಿಸಿ ಹಾಕಲು ಸೂಚನೆ.
- ಚರಂಡಿಗಳಲ್ಲಿ ಹೂಳೆತ್ತಲು ಸೂಚನೆ.
- ರಸ್ತೆಗಳಲ್ಲಿ ಹಳೆ ವಾಹನಗಳನ್ನು ನಿಲ್ಲಿಸಿ ಹೋಗುತ್ತಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯಿಂದ 100 ಎಕರೆ ಜಾಗ ಒದಗಿಸಿ, ಆ ಎಲ್ಲಾ ವಾಹನಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ.
- ಪಾಲಿಕೆ ಕಾನೂನಿನ ಪ್ರಕಾರ, 21 ದಿನಗಳ ಕಾಲ ರಸ್ತೆಯಲ್ಲಿ ನಿಲ್ಲಿಸಿರುವ ವಾಹನ ತೆಗೆಯದಿದ್ದರೆ ಅದನ್ನು ಅನಾಥ ವಾಹನ ಅಥವಾ ವಾರಸುದಾರರು ಇಲ್ಲದ ವಾಹನ ಅಂತ ಪರಿಗಣಿಸಿ ಹರಾಜು ಹಾಕಲು ಅವಕಾಶವಿದೆ. ಇನ್ನು ಪೊಲೀಸರು ನಿಗದಿ ಮಾಡುವ ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದಿದ್ದಾರೆ.
- ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆಗಳಲ್ಲಿ ಸರ್ವೀಸ್ ರಸ್ತೆಗಳನ್ನು ಮುಖ್ಯ ರಸ್ತೆ ಜತೆ ವಿಲೀನ ಮಾಡಿ ಸುಗಮವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.












Click it and Unblock the Notifications