₹2,296 ಕೋಟಿ ರೂ. ಮೊತ್ತದ ಕಾಮಗಾರಿ ಬೆಂಗಳೂರಿನಲ್ಲಿ ಅನುಷ್ಠಾನ: ಇನ್ಫ್ರಾಸ್ಟ್ರಕ್ಚರ್ ಅಪ್ಡೇಟ್ಸ್
ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ಹಾಗೂ 2296 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್ ಸಿಕ್ಕಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಕತ್ತರಿಸುವಿಕೆಗೆ ಅನುಮತಿ ಪಡೆಯುವುದು, ರಸ್ತೆ ಮೇಲ್ಮೈ ದುರಸ್ತಿ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದ್ದು, ಕೆಲವೊಂದು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ 2296 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಲು ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

2296 ಕೋಟಿ ರೂ. ಮೊತ್ತದ ಕಾಮಗಾರಿ ತಕ್ಷಣ ಪ್ರಾರಂಭಿಸಲು ಸೂಚನೆ: ಮುಖ್ಯಮಂತ್ರಿಗಳ ವಿವೇಚನಾ ನಿಧಿಯಡಿ ರೂ. 1055 ಕೋಟಿ ಮೊತ್ತದ ವಾರ್ಡ್ ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಮತ್ತು ವಿಶೇಷ ಮೂಲಭೂತ ಸೌಕರ್ಯಕ್ಕೆ ಬಂಡವಾಳ ಬೆಂಬಲ ಯೋಜನೆಯಡಿಯಲ್ಲಿ ರೂ. 1241.57 ಕೋಟಿ ಮೊತ್ತದ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ಸೇರಿದಂತೆ ಕೆಲವೊಂದು ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಸ್ತಾಪಗಳು ಸಲ್ಲಿಕೆಯಲ್ಲಿವೆ. ಈ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ ಕೈಗೊಂಡು ತಕ್ಷಣ ಕಾರ್ಯಾರಂಭ ಮಾಡುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸೂಚನೆ ನೀಡಿದ್ದಾರೆ.
ನಗರದ ಮುಖ್ಯ, ಉಪ-ಮುಖ್ಯ ಹಾಗೂ ವಾರ್ಡ್ ಮಟ್ಟದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಆದ್ಯತೆ ಮೇರೆಗೆ ಮುಚ್ಚಬೇಕು. ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ರಸ್ತೆಗಳಲ್ಲಿಯೂ ಎಲ್ಲೆಲ್ಲಿ ಗುಂಡಿಗಳು ಬಿದ್ದಿರುವುದೋ, ಅವುಗಳನ್ನು ಸಂಬಂಧಿಸಿದ ಗುತ್ತಿಗೆದಾರರೇ ಕೂಡಲೇ ಮುಚ್ಚಬೇಕು. ಗುತ್ತಿಗೆದಾರರು ಕ್ರಮವಹಿಸದಿದ್ದರೆ, ಈ ರಸ್ತೆ ಗುಂಡಿಗಳನ್ನು ಪಾಲಿಕೆಯೇ ಮುಚ್ಚಿ, ಅದರ ಮೊತ್ತವನ್ನು ಗುತ್ತಿಗೆದಾರರ ಬಿಲ್ಗಳಿಂದ ಕಡಿತ ಮಾಡುವಂತೆ ಸೂಚಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.
ಇನ್ನು ಬೆಂಗಳೂರಿನ ಐದು ನಗರ ಪಾಲಿಕೆಗಳ ಹಿರಿಯ ಅಧಿಕಾರಿಗಳು ರಸ್ತೆಗಳನ್ನು ಸ್ವತಃ ವೀಕ್ಷಣೆ ಮಾಡಿ, ರಸ್ತೆ ಗುಂಡಿಗಳನ್ನು ಗುರುತಿಸಿ, ತ್ವರಿತಗತಿಯಲ್ಲಿ ಮುಚ್ಚುವ ಕೆಲಸ ಕೈಗೊಳ್ಳಬೇಕು. ಬಾಕಿ ಇರುವ ಗುಂಡಿಗಳನ್ನು ಗುಣಮಟ್ಟ ಕಾಪಾಡಿಕೊಂಡು ಶೀಘ್ರದಲ್ಲಿ ಮುಚ್ಚಲು ಕ್ರಮವಹಿಸಬೇಕು. ಅಲ್ಲದೇ ಮುಖ್ಯ ಹಾಗೂ ಉಪ-ಮುಖ್ಯ ರಸ್ತೆಗಳ ಅಭಿವೃದ್ಧಿಗೆ 694 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಈಗಾಗಲೇ ಬಹುತೇಕ ಪ್ರದೇಶಗಳಲ್ಲಿ ಡಾಂಬರೀಕರಣ ಕಾರ್ಯಗಳು ನಡೆಯುತ್ತಿವೆ. ಬಾಕಿ ಉಳಿದಿರುವ ರಸ್ತೆಗಳ ಅಭಿವೃದ್ಧಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ.
ಇನ್ನು ಬೆಂಗಳೂರು ನಗರದಲ್ಲಿ ವಿವಿಧ ಏಜೆನ್ಸಿಗಳು ಹಾಗೂ ಸಾರ್ವಜನಿಕರು ಯಾವುದೇ ಅನುಮತಿ ಇಲ್ಲದೆ ರಸ್ತೆಗಳನ್ನು ಕತ್ತರಿಸುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸಂದರ್ಭಗಳಲ್ಲಿ ಅನುಮತಿಯಿಲ್ಲದೆ ರಸ್ತೆ ಕತ್ತರಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಮುಂದುವರೆದು, ಮಾರ್ಕ್ಸ್ ಪೋರ್ಟಲ್ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬರುವವರೆಗೆ, ಎಲ್ಲಾ ಐದು ನಗರ ಪಾಲಿಕೆಗಳ ಆಯುಕ್ತರು ಪ್ರತಿ ವಾರ ಸಭೆ ನಡೆಸಿ ರಸ್ತೆ ಕತ್ತರಿಸುವಿಕೆಗೆ ಅನುಮತಿ ನೀಡುವ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.
ಕತ್ತರಿಸಿದ ರಸ್ತೆ ಭಾಗ ಸರಿಯಾಗಿ ಮುಚ್ಚಬೇಕು: ಮುಂದುವರಿದು ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಿವಿಧ ಇಲಾಖೆಗಳು ರಸ್ತೆಗಳನ್ನು ಕತ್ತರಿಸಿ ಕಾಮಗಾರಿ ಪೂರ್ಣಗೊಳಿಸಿದ ಬಳಿಕ, ಕತ್ತರಿಸಿದ ಭಾಗವನ್ನು ಗುಣಮಟ್ಟ ಕಾಪಾಡಿಕೊಂಡು ಸರಿಯಾಗಿ ಮುಚ್ಚುವಂತೆ ಸೂಚಿಸಲಾಯಿತು. ಯಾವುದೇ ಇಲಾಖೆಯಾಗಲಿ, ಕಾಮಗಾರಿ ಮುಗಿದ ಕೂಡಲೇ ರಸ್ತೆ ದುರಸ್ತಿ ಸರಿಯಾಗಿ ಮಾಡಲಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.












Click it and Unblock the Notifications