ವಿಧಾನಸಭೆ ಚುನಾವಣೆ: 2018ರಲ್ಲಿ ಕಳೆದುಕೊಂಡ 50 ಸ್ಥಾನ ಮರಳಿ ಪಡೆಯಲು ಬಿಜೆಪಿ ಕಾರ್ಯತಂತ್ರ
ಬೆಂಗಳೂರು, ಸೆಪ್ಟೆಂಬರ್ 5: 2023ರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಈಗಿನಿಂದಲೇ ತಯಾರಿ ಆರಂಭಿಸಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ 50 ಸ್ಥಾನಗಳನ್ನು ಗೆಲ್ಲುವತ್ತ ಬಿಜೆಪಿ ಕಣ್ಣಿಟ್ಟಿದೆ. ಅದರಲ್ಲೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತ ಮತ್ತು ಎರಡನೇ ಸ್ಥಾನ ಪಡೆದಿರುವ ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲಲು ರಣತಂತ್ರ ರೂಪಿಸಲು ಮುಂದಾಗಿದೆ.
ಮುಂದಿನ ವಾರ ನಡೆಯಲಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಅಂತಹ ಕ್ಷೇತ್ರಗಳನ್ನು ಗೆಲ್ಲಲು ಅಗತ್ಯವಿರುವ ಮಾರ್ಗಸೂಚಿಯನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿರುವ ಕ್ಷೇತ್ರಗಳಲ್ಲಿ ಬಿಜೆಪಿ ತನ್ನ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಗುರುತಿಸಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಬಿಜೆಪಿ 120 ಸ್ಥಾನಗಳನ್ನು ಹೊಂದಿದ್ದು, ಮುಂಬರುವ ಚುನಾವಣೆಯಲ್ಲಿ ಈ ಸ್ಥಾನಗಳನ್ನು ಉಳಿಸಿಕೊಳ್ಳುವುದರ ಜೊತೆ 50 ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರಗಳನ್ನು ರೂಪಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
"ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಮುಗಿದ ನಂತರ ಬಿಜೆಪಿ ಚುನಾವಣಾ ತಯಾರಿ ಕೆಲಸ ಪ್ರಾರಂಭಿಸುತ್ತದೆ, ಏಕೆಂದರೆ ಸಾರ್ವತ್ರಿಕ ಚುನಾವಣೆಗಳಿಗೆ ಮೊದಲು ಕೇವಲ ಎರಡು ಕಾರ್ಯಕಾರಿಣಿಗಳು ಮಾತ್ರ ರಾಜ್ಯದಲ್ಲಿ ನಡೆಯಲಿವೆ." ಆದ್ದರಿಂದ ಈಗಿನಿಂದಲೇ ಕೆಲಸಗಳನ್ನು ಆರಂಭಿಸಲು, ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ.

ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ
ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚಿಸಲಾಗಿದೆ.
ಪಕ್ಷದ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿಗೆ ನೇಮಕಗೊಂಡ ನಂತರ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಸಭೆ ನಡೆದಿದೆ. ಮುಂಬರುವ ತಿಂಗಳುಗಳಲ್ಲಿ ಪಕ್ಷವು ಅಳವಡಿಸಿಕೊಳ್ಳಬಹುದಾದ ವಿವಿಧ ಕಾರ್ಯತಂತ್ರಗಳ ಕುರಿತು ಅನೌಪಚಾರಿಕ ಚರ್ಚೆಗಳು ನಡೆದಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಲಾ 50 ಕ್ಷೇತ್ರಗಳಲ್ಲಿ ಬೊಮ್ಮಾಯಿ ಮತ್ತು ಯಡಿಯೂರಪ್ಪ ಪ್ರವಾಸ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಸೆಪ್ಟೆಂಬರ್ 7 ರಿಂದ ತಲಾ 50 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ತಿಳಿಸಿದ್ದಾರೆ.
ಪಕ್ಷದ ಭವಿಷ್ಯವನ್ನು ಹೆಚ್ಚಿಸುವ ರಾಜ್ಯವ್ಯಾಪಿ ಕಾರ್ಯತಂತ್ರದ ಭಾಗವಾಗಿ, ಪಕ್ಷವು ಮೈಸೂರಿನಲ್ಲಿ ದಲಿತ ಮೋರ್ಚಾ ಸಮಾವೇಶ, ಬೆಳಗಾವಿಯಲ್ಲಿ ಯುವಮೋರ್ಚಾ ಸಮಾವೇಶ ಮತ್ತು ಹುಬ್ಬಳ್ಳಿಯಲ್ಲಿ ಮಹಿಳಾ ಮೋರ್ಚಾ ಸಮಾವೇಶವನ್ನು ನಡೆಸುವುದರ ಜೊತೆಗೆ ರೈತ ಮೋರ್ಚಾ ಸಮಾವೇಶವನ್ನು ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿಯಿಂದ ಪಕ್ಷಕ್ಕೆ ಸ್ಥೈರ್ಯ
ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿತ್ತು, ಪಕ್ಷದಲ್ಲಿ ತಲ್ಲಣ ಉಂಟಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಸಮಾವೇಶದಲ್ಲಿ ಪಾಲ್ಗೊಂಡಿರುವುದು ಮಂಗಳೂರಿನ ಬಿಜೆಪಿ ಪಾಳಯಕ್ಕೆ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಮಹೇಶ್ ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸರ್ಕಾರ ಹಿಂದೂಗಳ ರಕ್ಷಣೆ ಮಾಡುತ್ತಿಲ್ಲ ಎಂದು ಹಿಂದೂ ಸಂಘಟನೆಗಳೇ ಆಡಳಿತಾರೂಢ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದವು, ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಲವು ಯುವ ಮುಖಂಡರು ಪಕ್ಷದ ವಿವಿಧ ಸ್ಥಾನಗಳಿಗೆ ರಾಜೀನಾಮೆಗೆ ಮುಂದಾಗಿದ್ದರು.

ಸರ್ಕಾರದ ಸಾಧನೆ ತಿಳಿಸಲು ಜನೋತ್ಸವ ಸಮಾವೇಶ
ರಾಜ್ಯ ಬಿಜೆಪಿ ಸರ್ಕಾರದ ಕಾರ್ಯಸಾಧನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಆರು ಜನೋತ್ಸವ ಸಮಾವೇಶಗಳನ್ನು ಬಿಜೆಪಿ ಆಯೋಜಿಸಿದೆ. ಅದರಲ್ಲಿ ಮೊದಲನೇ ಜನೋತ್ಸವ ಸಮಾವೇಶ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಮೊದಲ ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನ ಸೇರುತ್ತಾರೆ ಎಂದು ಬಿಜೆಪಿ ನಾಯಕರು ನಿರೀಕ್ಷಿಸಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ಸರ್ಕಾರಕ ಕೆಲಸಗಳನ್ನು ಪ್ರಚಾರ ಮಾಡಲು ಜನೋತ್ಸವದ ಸಮಾವೇಶವನ್ನು ಆಯೋಜನೆ ಮಾಡಿದೆ.












Click it and Unblock the Notifications