ಶಾಕಿಂಗ್ ಸುದ್ದಿ: ಬೆಂಗಳೂರಿನಲ್ಲಿ 5 ದಿನದಲ್ಲೇ 242 ಮಕ್ಕಳಿಗೆ ಕೊರೊನಾವೈರಸ್!
ಬೆಂಗಳೂರು, ಆಗಸ್ಟ್ 11: ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಾಗುತ್ತಿದೆ. ಕೊವಿಡ್-19 ಮೂರನೇ ಅಲೆಯು ಮಕ್ಕಳ ಪಾಲಿಗೆ ಅತಿಹೆಚ್ಚು ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇಂಥಹುದರ ಮಧ್ಯೆ ಬೆಂಗಳೂರಿನಲ್ಲಿ 5 ದಿನಗಳಲ್ಲೇ 242 ಮಕ್ಕಳಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.89ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.02ರಷ್ಟಿದೆ. ಒಂದು ದಿನದಲ್ಲಿ 1186 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1776 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36817 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಕರ್ನಾಟಕದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2919711ಕ್ಕೆ ಏರಿಕೆಯಾಗಿದೆ. ಒಟ್ಟು 2859552 ಸೋಂಕಿತರು ಗುಣಮುಖರಾಗಿದ್ದು. 23316 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಮಕ್ಕಳಿಗೆ ಮಹಾಮಾರಿ ಅಂಟಿಕೊಳ್ಳುತ್ತಿರುವುದು ಮತ್ತಷ್ಟು ಅಪಾಯವನ್ನು ಹೆಚ್ಚಿಸುತ್ತಿದೆ.

19 ವರ್ಷದೊಳಗಿನ 242 ಮಕ್ಕಳಿಗೆ ಕೊರೊನಾವೈರಸ್:
ಬೆಂಗಳೂರಿನಲ್ಲಿ ಮಕ್ಕಳಿಗೂ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆ ಅಪಾಯ ಹೆಚ್ಚಾಗುತ್ತಿದೆ. 19 ವರ್ಷದೊಳಗಿನ 242 ಮಕ್ಕಳಿಗೆಕೊವಿಡ್-19 ಸೋಂಕು ತಗುಲಿರುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ಅಂಕಿ-ಅಂಶಗಳ ಪ್ರಕಾರ, 9 ವರ್ಷದೊಳಗಿನ 106 ಮಕ್ಕಳಿಗೆ ಹಾಗೂ 9 ರಿಂದ 19 ವರ್ಷದೊಳಗಿನ 136 ಮಕ್ಕಳಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಆರೋಗ್ಯ ಇಲಾಖೆ ನೀಡಿದ ಎಚ್ಚರಿಕೆ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಿಗೆ ಅಪಾಯಕಾರಿ ಆಗಿರುತ್ತದೆ ಎಂದು ಈಗಾಗಲೇ ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಮಕ್ಕಳಿಗೆ ಕೊವಿಡ್-19 ಸೋಂಕು ಅಂಟಿಕೊಳ್ಳುತ್ತಿರುವುದರ ಪ್ರಮಾಣ ಹೆಚ್ಚಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಅಂಕಿ-ಸಂಖ್ಯೆಗಳು ಮೂರು ಪಟ್ಟು ಹೆಚ್ಚಾಗುವ ಅಪಾಯವಿದೆ ಎಂದು ಆರೋಗ್ಯ ಇಲಾಖೆ ಮತ್ತೊಮ್ಮೆ ಎಚ್ಚರಿಸಿದೆ. "ಮಕ್ಕಳನ್ನು ಮನೆಗಳಲ್ಲಿಯೇ ಸುರಕ್ಷಿತವಾಗಿ ಇಟ್ಟುಕೊಳ್ಳುವುದರ ಮೂಲಕ ಅಪಾಯದಿಂದ ರಕ್ಷಿಸಿಕೊಳ್ಳಬೇಕಾದ ಅಗತ್ಯವಿದೆ. ವಯಸ್ಕರಿಗೆ ಹೋಲಿಸಿದರೆ, ಮಕ್ಕಳಲ್ಲಿ ಅತಿಹೆಚ್ಚು ರೋಗನಿರೋಧಕ ಶಕ್ತಿ ಇರುವುದಿಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಮನೆಗಳಲ್ಲಿ ಸುರಕ್ಷಿತವಾಗಿಟ್ಟುಕೊಳ್ಳುವುದು ಹಾಗೂ ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಬಲುಮುಖ್ಯವಾಗಿರುತ್ತದೆ," ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ನೆರೆ ರಾಜ್ಯಗಳಿಂದ ಹೆಚ್ಚಿದ ಕೊರೊನಾವೈರಸ್ ಭೀತಿ:
ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರಿಂದ ಕೊರೊನಾವೈರಸ್ ಸಾಂಕ್ರಾಮಿಕ ರೋಗ ಹರಡುವ ಅಪಾಯ ಹೆಚ್ಚಿದೆ ಎಂದು ವಲಯವಾರು ಅಧಿಕಾರಿಗಳು ಹೇಳುತ್ತಿದ್ದಾರೆ. ಮಹಾರಾಷ್ಟ್ರ, ಕೇರಳ, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಿಂದ ಆಗಮಿಸುವ ವಲಸೆ ಕಾರ್ಮಿಕರು, ವ್ಯಾಪಾರಸ್ಥರು ಹಾಗೂ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯಿಂದ ಕೊವಿಡ್-19 ಸೋಂಕಿತ ಹರಡುವಿಕೆ ಆತಂಕ ಹೆಚ್ಚಾಗಿದೆ. ಈ ಪೈಕಿ ಅಂತರ್-ರಾಜ್ಯಗಳಿಂದ ಆಗಮಿಸಿದ ವೈದ್ಯಕೀಯ ಸಿಬ್ಬಂದಿಯಿಂದಲೇ ಹೆಚ್ಚು ಹೆಚ್ಚು ಸೋಂಕು ಹರಡಿರುವ ಬಗ್ಗೆ ಆತಂಕ ವ್ಯಕ್ತಪಡಿಸಲಾಗಿದೆ.
ಬೆಂಗಳೂರಿನಲ್ಲಿ ಕೊವಿಡ್-19 ಸೋಂಕಿನ ಭೀತಿ ಸೃಷ್ಟಿ:
ಸಿಲಿಕಾನ್ ಸಿಟಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಏರುಮುಖವಾಗುತ್ತಿದ್ದಂತೆ ರಾಜ್ಯ ರಾಜಧಾನಿಯಲ್ಲಿ ಮೂರನೇ ಅಲೆಯ ಭೀತಿ ಸೃಷ್ಟಿಯಾಗುತ್ತಿದೆ. ಅಪಾರ್ಟ್ ಮೆಂಟ್, ಕಂಟೇನ್ಮೆಂಟ್, ಕಾಂಪ್ಲೆಕ್ಸ್ ಹಾಗೂ ಜನ ನಿಬಿಡ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಪ್ರತಿಯೊಬ್ಬರ ಪ್ರಯಾಣದ ಹಿನ್ನೆಲೆಯನ್ನು ಕೆದುಕಿ ನೋಡಲಾಗುತ್ತಿದೆ. ರಾಜರಾಜೇಶ್ವರಿ ನಗರ ಮತ್ತು ಯಲಹಂಕದ ಇತರ ವಲಯಗಳಲ್ಲಿ ಇರುವಂತೆ ಪ್ರಕರಣಗಳ ಸಂಖ್ಯೆಯು ಹೆಚ್ಚಾಗಿಲ್ಲ, ಆದರೂ ಒಂದು ಕಾಳಜಿಯಿದೆ ಎಂದು ವಲಯದ ಜಂಟಿ ಆಯುಕ್ತರಾದ ಎಂ ರಾಮಕೃಷ್ಣ ಹೇಳಿದ್ದಾರೆ. ಒಟ್ಟು 2.5 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಶೇ.104ರಷ್ಟು ಫಲಾನುಭವಿಗಳಿಗೆ ಮೊದಲ ಡೋಸ್ ನೀಡಲಾಗಿದೆ. ಈ ಪೈಕಿ 18-44 ವಯೋಮಾನದ ಶೇ.38ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ಪಡೆದುಕೊಂಡವರ ಪ್ರಮಾಣವನ್ನು ಬಹಿರಂಗಪಡಿಸಲು ವಲಯ ಅಧಿಕಾರಿಗಳು ನಿರಾಕರಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಪ್ರಕರಣಗಳ ಏರಿಳಿತ:
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 296 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1230782ಕ್ಕೆ ಏರಿಕೆಯಾಗಿದೆ. 1 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15915ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8378 ಸಕ್ರಿಯ ಪ್ರಕರಣಗಳಿವೆ.
ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣ ಎಷ್ಟಿದೆ?:
ಕರ್ನಾಟಕದಲ್ಲಿ ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 17910 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,14,282 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,32,192 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 74,00,716 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,25,77,799 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,99,78,515 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.
ಕರ್ನಾಟಕದಲ್ಲಿ ಲಸಿಕೆ ವಿತರಣೆ ವಿವರ:
ರಾಜ್ಯದಲ್ಲಿ ಈವರೆಗೂ 7,61,616 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,55,187 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,31,828 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,79,230 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,24,61,055 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 56,13,110 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,57,18,122 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 73,88,422 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications