ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ 30 ಬಾಂಗ್ಲಾ ಪ್ರಜೆಗಳ ಬಂಧನ
ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 30 ಮಂದಿಯನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿದೇಶಿ ಪ್ರಜೆಗಳ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಪೌರತ್ವ ನೋಂದಣಿ ( ಎನ್ಆರ್ಸಿ) ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು.
ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಬಗ್ಗೆ ಸಂಸದ ತೇಜಸ್ವಿ ಆತಂಕ
ಇದರ ಬೆನ್ನಲ್ಲೇ ಕರ್ನಾಟದಲ್ಲೂ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಈ ಹಿಂದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಎನ್ಆರ್ಸಿಯಲ್ಲಿ ತನ್ನ ಹೆಸರು ಇರದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಕೆಲವು ನಿದರ್ಶನಗಳು ಕೂಡ ಇದೆ ಆದರೆ ಎನ್ಆರ್ಸಿ ಮಾಡಿಸುವುದರಿಂದ ಅಕ್ರಮ ವಾಸಿಗಳು ಎಷ್ಟು ಮಂದಿ ಇದ್ದಾರೆ ಎಂಬ ಕುರಿತು ಮಾಹಿತಿ ಲಭ್ಯವಾಗಲಿದೆ.
ಬಂಧಿತರ ವಿರುದ್ಧ ವಿದೇಶಿಯರ ನೋಂದಣೆ ಕಾಯ್ದೆ ಅನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ವಲಸಿಗರು ವಾಸವಾಗಿದ್ದು ಅಪರಾಧ ಚಟುವಟಿಕೆಗಳಲ್ಲೂ ತೊಡಗಿಕೊಂಡಿರುವ ಬೆಗೆಗಿನ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.