ಬೆಂಗಳೂರು ಮಳೆ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರಿನಲ್ಲಿನ ಮಳೆ ಪರಿಸ್ಥಿತಿ ಹಾಗೂ ಮೂಲಸೌಲಭ್ಯ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಬೆಂಗಳೂರು ಜಲಮಂಡಳಿ, ರಾಜ್ಯ ಮಳೆ ಹಾಗೂ ಪ್ರವಾಹದ ಹಾನಿ ಕುರಿತು ಸಚಿವರು , ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಂಗಳೂರು ಮತ್ತು ರಾಜ್ಯದ ಪ್ರವಾಹ ನಿರ್ವಹಣೆಗೆ, ವಿಶೇಷವಾಗಿ ರಸ್ತೆ, ಸೇತುವೆ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್, ಶಾಲಾ ಕೊಠಡಿ ದುರಸ್ತಿ ಸೇರಿದಂತೆ ಮೂಲಸೌಲಭ್ಯದ ನಿರ್ವಹಣೆಗೆ ರಾಜ್ಯ ಸರ್ಕಾರ 600 ಕೋಟಿ ರೂ.ಗಳ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿಗೆ 300 ರೂ.ಗಳನ್ನು ನೀಡಲಾಗಿದ್ದು, 664 ಕೋಟಿ ಡಿ.ಸಿಗಳ ಬಳಿ ಇದ್ದು, ಮೂಲಭೂತ ಸೌಕರ್ಯಕ್ಕೆ 500 ಕೋಟಿ ರೂ.ಗಳನ್ನು ಈಗಾಗಲೇ ನೀಡಲಾಗಿದೆ. ಬೆಂಗಳೂರಿನ ಪರಿಸ್ಥಿತಿಗೆ ಸಂಬಂಧಿಸಿದಂತೆ, 1500 ಕೋಟಿ ರೂ.ಗಳನ್ನು ರಾಜಕಾಲುವೆಗಳ ನಿರ್ಮಾಣಕ್ಕೆ ಈಗಾಗಲೇ ನೀಡಲಾಗಿದ್ದು, ಮಳೆ ನಿಂತ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು ಎಂದರು.
ಬೆಂಗಳೂರಿನ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿ ಬೆಂಗಳೂರಿನಲ್ಲಿ ಒಂದು ಎಸ್ ಡಿ ಆರ್ ಎಫ್ ಕಂಪನಿಯನ್ನು ಸ್ಥಾಪಿಸಲು , ಸಲಕರಣೆಗಳನ್ನು ಒದಗಿಸಲು 9.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಎಎಸ್ಡಿಆರ್ಎಫ್ ಕಂಪನಿ ಬೆಂಗಳೂರಿಗೆ ಸೀಮಿತವಾಗಿ ಕೆಲಸ ಮಾಡಲಿದೆ. ಇಡೀ ರಾಜ್ಯದಲ್ಲಿ ಮಾಜಿ ಯೋಧರನ್ನು ಒಳಗೊಂಡಂತೆ ಇನ್ನೆರಡು ಕಂಪನಿಗಳನ್ನು ಮುಂದಿನ ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದರು.
ಟಿ ಕೆ ಹಳ್ಳಿ ಪಂಪ್ ಹೌಸ್ ಎರಡು ದಿನಗಳೊಳಗೆ ಕಾರ್ಯಾರಂಭ:
ಟಿಕೆಹಳ್ಳಿಗೆ ಪರಿಶೀಲನೆಗೆ ತೆರಳಲಾಗಿದ್ದು, ಬೆಂಗಳೂರು ನಗರ ಕಾವೇರಿ ನೀರನ್ನು ಪಂಪ್ ಮಾಡುವ ಕುಡಿಯುವ ನೀರಿನ ಘಟಕ ಇದಾಗಿದೆ. ಅದರ ಬಳಿ ಇರುವ ಭೀಮೇಶ್ವರ ನದಿ ಉಕ್ಕಿ ಹರಿದು, ಸುತ್ತಮುತ್ತಲಿನ ಕೆರೆಗಳು ತುಂಬಿ ಟಿ ಕೆ ಹಳ್ಳಿ ಪಂಪ್ ಹೌಸ್ ಗೆ ನುಗ್ಗಿದೆ. 2 ಪಂಪ್ ಹೌಸ್ ಗಳಿಗೆ ನೀರು ತುಂಬಿ ಹಾನಿಯಾಗಿದೆ. ಈಗಾಗಲೇ ನೀರನ್ನು ತೆರವುಗೊಳಿಸಲು ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾವೇರಿ 4ನೇ ಸ್ಟೇಜ್ 2ನೇ ಫೇಸ್ ಪಂಪ್ ಹೌಸ್, 550 ಎಂಎಲ್ಡಿ ನೀರು ಸಾಮರ್ಥ್ಯವಿರುವ ಪಂಪ್ ಹೌಸ್ ನಲ್ಲಿ ನಾಳೆ ಬೆಳಿಗ್ಗೆಯೊಳಗೆ ನೀರನ್ನು ತೆಗೆದು, ಯಂತ್ರಗಳನ್ನು ದುರಸ್ತಿಗೊಳಿಸಲಾಗುವುದು. ಕಾವೇರಿ ಸ್ಟೇಜ್ 3 ರ ನೀರು ಪಂಪ್ ಹೌಸ್ ನಲ್ಲಿ ನೀರನ್ನು ತೆಗೆದು 2 ದಿನಗಳಲ್ಲಿ ಕೆಲಸ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ಬೆಂಗಳೂರಿನ ನೀರು ಸರಬರಾಜು ವ್ಯತ್ಯಯವಾಗದಂತೆ ಪ್ರಯತ್ನ:
ಬೆಂಗಳೂರಿನ ನೀರಿನ ಸರಬರಾಜಿಗೆ ಪರ್ಯಾಯ ವ್ಯವಸ್ಥೆಯಾಗಿ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 8000 ಬೋರ್ ವೆಲ್ ಗಳು ಬೆಂಗಳೂರು ಜಲಮಂಡಳಿಯ ಅಧೀನದಲ್ಲಿದ್ದು, ಅವುಗಳನ್ನು ಪುನ:ಪ್ರಾರಂಭಿಸಿ, ಪಂಪ್ ಹೌಸ್ ನಿಂದ ಕಾವೇರಿ ನೀರಿಗೆ ವ್ಯತ್ಯಯವಾಗುವ ಸಮಯದಲ್ಲಿ ಇವುಗಳಿಂದ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು. ನೀರು ಸರಬರಾಜು ವ್ಯತ್ಯಯವಾದ ಪ್ರದೇಶಗಳಿಗೆ ಬಿಬಿಎಂಪಿಯ ಬೋರ್ ವೆಲ್ಗಳಿಂದಲೂ ನೀರನ್ನು ಸರಬರಾಜು ಮಾಡಲು ಸೂಚಿಸಲಾಗಿದೆ. ಬೋರ್ವೆಲ್ ನೀರು ಇಲ್ಲದಿರುವ ಕಡೆಗಳಲ್ಲಿ ಸರ್ಕಾರದಿಂದಲೇ ಟ್ಯಾಂಕರ್ ಗಳನ್ನು ಸರಬರಾಜು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಯಾವುದೇ ಭಾಗದಲ್ಲಿ ನೀರು ಸರಬರಾಜು ವ್ಯತ್ಯಯವಾಗದಂತೆ ಸರ್ಕಾರ ಸರ್ವಪ್ರಯತ್ನ ಮಾಡಲಿದೆ ಎಂದರು.
ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ:
ಬೆಂಗಳೂರು ವಿಸ್ತಾರವಾಗಿದೆ. ಟಿಎಂಸಿ, 110 ಹಳ್ಳಿಗಳು ಸೇರ್ಪಡೆಯಾಗಿದ್ದು, ಅಲ್ಲಿನ ಮೂಲಸೌಲಭ್ಯಗಳೂ ಬೆಂಗಳೂರಿನ ವ್ಯಾಪ್ತಿಗೆ ಬಂದಿರುವುದರಿಂದ ಹಲವು ಸಮಸ್ಯೆಗಳು ಈಗ ತಲೆಎತ್ತಿವೆ. ಬೆಂಗಳೂರಿನ ವಿವಿಧ ವಲಯಗಳನ್ನು ಸಚಿವರುಗಳಿಗೆ ನೀಡಲಾಗಿದೆ. ಸಮಸ್ಯೆಗಳ ನಿವಾರಣೆಗೆ ಸಚಿವರು, ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರೀ ಮಳೆಯ ಈ ಸಂದರ್ಭದಲ್ಲಿ ಬೆಂಗಳೂರಿನ ಮಹಾಜನತೆ ಸರ್ಕಾರದೊಂದಿಗೆ ಸಹಕರಿಸಬೇಕು. ಸರ್ಕಾರ ಇವೆಲ್ಲವನ್ನೂ ಸಮರ್ಥವಾಗಿ ನಿರ್ವಹಿಸಲಿದೆ. ರಸ್ತೆ,ಕಾಲುವೆಗಳು, ರಾಜಕಾಲುವೆ ಒತ್ತುವರಿ ತೆರವು, ಕೆರೆಗಳಿಗೆ ಗೇಟ್ ಹಾಕಿಸುವುದು ಸೇರಿದಂತೆ ನಗರದ ಮೂಲಸೌಲಭ್ಯಗಳನ್ನು ದುರಸ್ತಿಗೊಳಿಸಲಾಗುವುದು. ಬೆಂಗಳೂರಿಗೆ ಅಲ್ಪಸಮಯದಲ್ಲಿ ದೊಡ್ಡ ಪ್ರಮಾಣ ಮಳೆ ಬಂದಿರುವ ಈ ಸವಾಲನ್ನು ನಾವೆಲ್ಲರೂ ಸೇರಿ ಎದುರಿಸಬೇಕಿದೆ ಎಂದು ತಿಳಿಸಿದರು.