ಬೆಂಗಳೂರಿನಲ್ಲಿ ಮಳೆ ಹಾನಿ ನಿಯಂತ್ರಿಸಲು ₹5,000 ಕೋಟಿ ಶಾಶ್ವತ ಯೋಜನೆ
ಬೆಂಗಳೂರು, ಡಿಸೆಂಬರ್, 13: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಗಂಟೆ ಮಳೆಯಾದರೆ ಸಾಕು ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿಬಿಡುತ್ತವೆ. ಇದೀಗ ಇದನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಶಾಶ್ವತ ಯೋಜನೆ ರೂಪಿಸಿದೆ. ಹಾಗಾದರೆ ಆ ಕ್ರಮ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರಿನಲ್ಲಿ ಮಳೆಯಿಂದ ಸಂಭವಿಸುವ ಹಾನಿ ನಿಯಂತ್ರಣ ಮಾಡಲು 5,000 ಕೋಟಿ ರೂಪಾಯಿಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ಅವರು ಇಂದು (ಡಿಸೆಂಬರ್ 13) ವಿಧಾನಸಭೆ ಕಲಾಪದಲ್ಲಿ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗುವ ಹಾನಿಯನ್ನು ನಿಯಂತ್ರಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಶಾಶ್ವತ ಯೋಜನೆ ರೂಪಿಸಿದ್ದು, 5,000 ಕೋಟಿ ರೂಪಾಯಿ ಮಂಜೂರು ಮಾಡಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮಳೆಯಾದಾಗಲೆಲ್ಲ ಹಾನಿಗೆ ಒಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ.
ಭಾರೀ ಮಳೆ ವೇಳೆ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಈ ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿಲೋ ಮೀಟರ್ ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿಲೋ ಮೀಟರ್ ಕಿರು ಕಾಲುವೆಗಳು ಸೇರಿದಂತೆ ಒಟ್ಟು 1,100 ಕಿಲೋ ಮೀಟರ್ ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ.
ಈಗಾಗಲೇ 700 ಕಿಲೋ ಮೀಟರ್ ಅಭಿವೃದ್ಧಿಪಡಿಸಲಾಗಿದ್ದು, ಇನ್ನೂ 300 ಕಿಲೋ ಮೀಟರ್ ರಾಜಕಾಲುವೆಯನ್ನು ಒಂದು ವರ್ಷದ ಒಳಗೆ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿಯೇ ಡಿಸಾಸ್ಟರ್ ಮಿಟಿಗೇಶನ್ ಫಂಡ್ ಅಡಿ 240 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯಿಂದ ಸಂಭವಿಸುವ ಹಾನಿಯನ್ನು ನಿಯಂತ್ರಿಸಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೇ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ. ವಿಶ್ವಬ್ಯಾಂಕ್ನಿಂದ 3,000 ಕೋಟಿ ರೂಪಾಯಿ ಸಾಲ ಪಡೆದು, ಬಿಬಿಎಂಪಿ ಮೂಲಕ 2,000 ಕೋಟಿ ರೂಪಾಯಿ ವೆಚ್ಚದಲ್ಲಿ ಎಲ್ಲಾ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆ ಆಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದ ಕಡೆ ಒಳಚರಂಡಿ ವ್ಯವಸ್ಥೆಯನ್ನ ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೇಜ್ ಟ್ರೀಟ್ಮೆಂಟ್ ವಾಟರ್ ಲೈನ್ಗೆ ಸೇರ್ಪಡೆ ಆಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 1,000 ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಇನ್ನಿತರೆ ಕಾಮಗಾರಿಗಳಿಗಾಗಿ 2,000 ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧಾರ ಮಾಡಲಾಗಿದೆ. ಇನ್ನುಳಿದಂತೆ 2,000 ಕೋಟಿ ರೂಪಾಯಿ ಅನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧಾರ ಮಾಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಹಾನಿಗೊಳಗಾಗುವ ಪ್ರಮುಖ ರಸ್ತೆಗಳನ್ನು ಈಗಾಗಲೇ ಗುರುತಿಸಲಾಗಿದೆ. ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂಪಾಯಿ ಯೋಜನೆ ರೂಪಿಸಿ ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ರಾಜ್ಯ ಸರ್ಕಾರ ಶಾಶ್ವತ ಯೋಜನೆಗಳನ್ನು ರೂಪಿಸಿದ್ದು, ಹಂತ-ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣಬೈರೇ ಗೌಡ ಅವರು ಹೇಳಿದ್ದಾರೆ.












Click it and Unblock the Notifications