ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಾಡಪ್ರಭು ಕೆಂಪೇಗೌಡ 513ನೇ ಜಯಂತಿ ಕಾರ್ಯಕ್ರಮ
ಬೆಂಗಳೂರು, ಜೂನ್ 27: ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ. ಆದಿ ಚುಂಚನಗಿರಿ ಮಠದ ಡಾ. ನಿರ್ಮಲಾನಂದ ಶ್ರೀ, ಗುರುಗುಂಡ ಮಠದ ನಂಜಾವಧೂತ ಶ್ರೀ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಕೇಂದ್ರ ಸಚಿವ ಎಂ.ರಾಜೀವ್ ಚಂದ್ರಶೇಖರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಉನ್ನತ ಶಿಕ್ಷಣ ಮತ್ತು ಐಟಿ/ಬಿಟಿ ರಾಜ್ಯ ಸಚಿವ ಡಾ. ಸಿ.ಎಸ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ:
ಇನ್ನು ಇದೇ ಮೊದಲಬಾರಿಗೆ ರಾಜ್ಯ ಸರ್ಕಾರವು ನಾಡಪ್ರಭು ಕೆಂಪೇಗೌಡರ ಗೌರವಾರ್ಥ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ' ನೀಡಲು ನಿರ್ಧರಿಸಿದೆ. ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯು 5 ಲಕ್ಷ ನಗದನ್ನು ಒಳಗೊಂಡಿರುತ್ತದೆ.

ಮೊದಲ ಬಾರಿಯ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ'ಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ ಮಾನದಂಡದ ಆಧಾರದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ'ಯನ್ನು ಮೂವರು ಗಣ್ಯರಿಗೆ ಪ್ರದಾನ ಮಾಡಲಿದ್ದಾರೆ.
ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್.ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.












Click it and Unblock the Notifications