ಬೆಂಗಳೂರು: ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ 60 ವಿದ್ಯಾರ್ಥಿಗಳಿಗೆ ಕೊರೊನಾ
ಬೆಂಗಳೂರು, ಸೆಪ್ಟೆಂಬರ್ 29: ಕೊರೊನಾ ಸೋಂಕು ರಾಜ್ಯದಲ್ಲಿ ಕಡಿಮೆಯಾಗುತ್ತಿದೆ, ಆದರೆ ಇದೀಗ ಶಾಲಾ ಕಾಲೇಜುಗಳನ್ನು ಆರಂಭಿಸಿರುವ ಕಾರಣ ಸೋಂಕು ಮತ್ತಷ್ಟು ಹೆಚ್ಚಾಗುವ ಆತಂಕ ಕಾಡುತ್ತಿದೆ.
ಇದೀಗ ಆನೇಕಲ್ ಬಳಿಯ ಒಂದೇ ಕಾಲೇಜಿನ 60 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಚೈತನ್ಯ ರೆಸಿಡೆನ್ಶಿಯಲ್ ಕಾಲೇಜಿನ ಹಾಸ್ಟೆಲ್ನಲ್ಲಿದ್ದ 60 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಆನೇಕಲ್ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಲ್ಲಾ ತರಗತಿಗಳನ್ನು ಮೊಟಕುಗೊಳಿಸಿದ ಕಾಲೇಜು ಆಡಳಿತ ಮಂಡಳಿ, 335 ವಿದ್ಯಾರ್ಥಿಗಳ ಪೈಕಿ 54 ಮಂದಿಯನ್ನು ಆಸ್ಪತ್ರೆಗೆ ಸೇರಿಸಿದರೆ, ಉಳಿದ ವಿದ್ಯಾರ್ಥಿಗಳು ಕ್ವಾರಂಟೈನ್ನಲ್ಲಿದ್ದಾರೆ. ಕೊರೊನಾ ಪಾಸಿಟಿವ್ ಬಂದ ವಿದ್ಯಾರ್ಥಿನಿಯರಲ್ಲಿ ಬಹುತೇಕರು ಕರ್ನಾಟಕದವರು, 8 ವಿದ್ಯಾರ್ಥಿಗಳಿಗೆ ಅತಿಯಾದ ವಾಂತಿ ಭೇದಿ ಕಾಣಿಸಿಕೊಂಡಿದೆ.

ಕರ್ನಾಟಕ ಹಾಗೂ ತಮಿಳುನಾಡು ಭಾಗದ 300ಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿದ್ದು, ಸೋಮವಾರ ಹಾಗೂ ಮಂಗಳವಾರ ಒಟ್ಟು ಎರಡು ದಿನಗಳಲ್ಲಿ 60 ಮಂದಿಗೆ ಸೋಂಕು ಇರುವುದು ತಿಳಿದುಬಂದಿದೆ. ಹಾಸ್ಟೆಲ್ನ ಸಿಬ್ಬಂದಿಗೆ ಸೋಂಕು ದೃಢಪಟ್ಟಿಲ್ಲ. ವಿದ್ಯಾರ್ಥಿಗಳಿಂದಲೇ ಎಲ್ಲರಿಗೂ ಹರಡಿರುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 629 ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ.
ಕೊರೊನಾಗೆಇಂದು 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,763ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು 229 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,45,900ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 782 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,24,102ಕ್ಕೆ ಏರಿಕೆಯಾಗಿದೆ. ಇನ್ನು12,634ಸಕ್ರಿಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 93,014 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 629 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.67ಕ್ಕೆ ಇಳಿದಿದೆ.
ರಾಜ್ಯದಲ್ಲಿ ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.












Click it and Unblock the Notifications