67ನೇ ಕರ್ನಾಟಕ ರಾಜ್ಯೋತ್ಸವ: ಬೆಂಗಳೂರಲ್ಲಿ 'ನನ್ನ ನಾಡು ನನ್ನ ಹಾಡು- ಕೋಟಿ ಕಂಠ ಗಾಯನ'
ಬೆಂಗಳೂರು, ಅಕ್ಟೋಬರ್ 12: ಬೆಂಗಳೂರಿನಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ 'ನನ್ನ ನಾಡು ನನ್ನ ಹಾಡು- ಕೋಟಿ ಕಂಠ ಗಾಯನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಬಿಬಿಎಂಪಿ ಅಕ್ಟೋಬರ್ 28 ರಂದು ನಗರದಲ್ಲಿ 'ನನ್ನ ನಾಡು ನನ್ನ ಹಾಡು- ಕೋಟಿ ಕಂಠ ಗಾಯನ' ಕಾರ್ಯಕ್ರಮ ಆಯೋಜಿಸಿದೆ. ಈ ಕುರಿತು ಅಧಿಕಾರಿಗಳಿಗೆ ನಿರ್ದೇಶಿಸಲು ತುಷಾರ್ ಗಿರಿನಾಥ್ ಆನ್ಲೈನ್ನಲ್ಲಿ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಮುಖ್ಯ ಆಯುಕ್ತರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ 'ಕೋಟಿ ಕಂಠ ಗಾಯನ' ಕಾರ್ಯಕ್ರಮವನ್ನು (ಏಕ ಕಾಲದಲ್ಲಿ) ನಡೆಸಲಾಗುವುದು. ಪಾಲಿಕೆಯ ಎಲ್ಲಾ ವಲಯಗಳ ವಿವಿಧ ಪ್ರಮುಖ ಸ್ಥಳಗಳನ್ನು ಗುರುತಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆ
ಬಿಬಿಎಂಪಿಯ ಎಲ್ಲಾ ಎಂಟು ವಲಯಗಳ ಪ್ರಮುಖ ಸ್ಥಳಗಳಾದ ಪಾಲಿಕೆ ಕೇಂದ್ರ ಕಛೇರಿ ಆವರಣ, ಹಲಸೂರು ಕೆರೆ, ಸ್ವಾತಂತ್ರ್ಯ ಉದ್ಯಾನವನ, ಕಿತ್ತೂರು ರಾಣಿ ಚೆನ್ನಮ್ಮ ಮೈದಾನ, ಹೊಯ್ಸಳ ಮೈದಾನ, ಮೆಜೆಸ್ಟಿಕ್ ಬಸ್ ನಿಲ್ದಾಣ, ವಿವಿಧ ಬೃಹತ್ ವಸತಿ ಸಮುಚ್ಛಯಗಳು ಸೇರಿದಂತೆ ಇನ್ನಿತರೆ ಪ್ರಮುಖ ಸ್ಥಳಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪರ ಆರು ಗೀತೆ ಹಾಡಬೇಕು
ಕಾರ್ಯಕ್ರಮದಲ್ಲಿ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಸೇರಿದಂತೆ ಆಯ್ದ 6 ಹಾಡುಗಳನ್ನು ಹಾಡಬೇಕಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸುವ ಸ್ಥಳಗಳಲ್ಲಿ ಸ್ಟೇಜ್, ಬ್ಯಾಕ್ ಡ್ರಾಪ್, ಸ್ಪೀಕರ್, ನುರಿತ ಗಾಯಕರು, ಹಾಡುಗಳ ಟ್ಯೂನ್ ಲಿರಿಕ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಿ
ಕಾರ್ಯಕ್ರಮದಲ್ಲಿ ಭಾಗವಹಿಸುವವರೆಲ್ಲರೂ ನೋಂದಣಿ ಮಾಡಿಕೊಳ್ಳಬೇಕಿದ್ದು, ಅದಕ್ಕಾಗಿ ಕನ್ನಡ ಸಂಸ್ಕೃತಿ ಇಲಾಖೆಯು ಸಿದ್ದಪಡಿಸಿರುವ ಲಿಂಕ್ಗೆ https://kannadasiri.karnataka.gov.in/kkg/public/ ಅಥವಾ ಕ್ಯೂರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಣಿಯಾಗಬಹುದಾಗಿದೆ. ಸದರಿ ಲಿಂಕ್ ನಲ್ಲಿ ಏಕವ್ಯಕ್ತಿ ಹಾಗೂ ಸಂಸ್ಥೆಗಳು ನೋಂದಣಿಯಾಗಲು ಅವಕಾಶ ಕಲ್ಪಿಸಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಈ ಬಗ್ಗೆ ಮಾಹಿತಿ ನೀಡುವಂತೆ ವಲಯ ಜಂಟಿ ಆಯುಕ್ತರಿಗಳಿಗೆ ಹೊಣೆ ವಹಿಸಿದರು.

ಪಾಲಿಕೆ ಎಲ್ಲ ಅಧಿಕಾರಿ, ಸಿಬ್ಬಂದಿ ಪಾಲ್ಗೊಳ್ಳಬೇಕು
ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲಿಕೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗ, ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜಿನ ಸುಮಾರು 10 ಸಾವಿರ ವಿಧ್ಯಾರ್ಥಿಗಳು, ಶಾಲಾ ಮುಖ್ಯಸ್ಥರು, ಶಿಕ್ಷಕರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ ಹಾಗೂ ಎಲ್ಲಾ ವರ್ಗದ ಅಧಿಕಾರಿಗಳು ಸದರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜೊತೆಗೆ ಸ್ಥಳೀಯ ನಾಗರಿಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (ಆರ್ಡಬ್ಲ್ಯೂಎ) ಭಾಗವಹಿಸುವಂತೆ ತಿಳಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ನಿರ್ದೇಶಿಸಿದರು.
ಈ ಆನ್ಲೈನ್ ಸಭೆಯಲ್ಲಿ ಎಲ್ಲಾ ವಲಯ ವಿಶೇಷ ಆಯುಕ್ತರು ಹಾಗೂ ಎಂಟು ವಲಯದ ವಲಯ ಜಂಟಿ ಆಯುಕ್ತರುಗಳು ಭಾಗವಹಿಸಿದ್ದರು. ಕನ್ನಡ ರಾಜ್ಯೋತ್ಸವ ವೇಳೆ ಬಿಬಿಎಂಪಿಯಿಂದ ಮಾತ್ರವಲ್ಲದೇ ಅನೇಕ ಸಂಘ, ಸಂಸ್ಥೆಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳಿಂದ ಕನ್ನಡ ರಾಜ್ಯೋತ್ಸವ ಈ ಭಾರಿ ಅದ್ಧೂರಿಯಾಗಿ ನಡೆಯಲಿದೆ.












Click it and Unblock the Notifications