ಬಸವರಾಜ ಬೊಮ್ಮಾಯಿ ಸಂಪುಟ; ಬೆಂಗಳೂರಿಗೆ 7 ಸಚಿವ ಸ್ಥಾನ
ಬೆಂಗಳೂರು, ಆಗಸ್ಟ್ 04; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. 29 ಶಾಸಕರು ಬುಧವಾರ ಮಧ್ಯಾಹ್ನ 2.15ಕ್ಕೆ ಸಚಿವರಾಗಿ ಸಂಪುಟವನ್ನು ಸೇರುತ್ತಿದ್ದಾರೆ. ಬೆಂಗಳೂರು ನಗರದ 7 ಶಾಸಕರು ಸಚಿವರಾಗುತ್ತಿದ್ದಾರೆ.
ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಬೆಂಗಳೂರು ನಗರದಿಂದ ಸಚಿವರಾಗಿದ್ದ ಅರವಿಂದ ಲಿಂಬಾವಳಿ, ಎಸ್. ಸುರೇಶ್ ಕುಮಾರ್ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆದಿಲ್ಲ. ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಸಚಿವರಾಗುತ್ತಿದ್ದಾರೆ.
ಉಳಿದಂತೆ ಬೆಂಗಳೂರು ನಗರದ ಹಿರಿಯ ಶಾಸಕರಾದ ಆರ್. ಅಶೋಕ, ವಿ. ಸೋಮಣ್ಣ ಸಚಿವರಾಗುತ್ತಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ ಕೆ. ಗೋಪಾಲಯ್ಯ, ಬೈರತಿ ಬಸವರಾಜ, ಡಾ. ಸಿ. ಎನ್. ಅಶ್ವತ್ಥ ನಾರಾಯಣ ಬೊಮ್ಮಾಯಿ ಸಂಪುಟದಲ್ಲಿಯೂ ಮುಂದುವರೆಯಲಿದ್ದಾರೆ.
ಒಕ್ಕಲಿಗ ಸಮುದಾಯದ ಆರ್. ಅಶೋಕ ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ನಾಯಕರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲು ಒಪ್ಪಿಗೆ ನೀಡಿಲ್ಲ. ಬೆಂಗಳೂರು ನಗರದಿಂದ ಸಚಿವರಾಗುತ್ತಿರುವ ಶಾಸಕರ ಪಟ್ಟಿ ಇಲ್ಲಿದೆ...

ಆರ್. ಅಶೋಕಗೆ ಮತ್ತೆ ಸಚಿವ ಸ್ಥಾನ
ಆರ್. ಅಶೋಕ ಪದ್ಮನಾಭನಗರ ಕ್ಷೇತ್ರದ ಶಾಸಕರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ. ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು. ಸಾರಿಗೆ, ಗೃಹ ಖಾತೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರುತ್ತಿದ್ದಾರೆ.

ಬೊಮ್ಮಾಯಿ ಸಂಪುಟಕ್ಕೆ ವಿ. ಸೋಮಣ್ಣ
ವಿ. ಸೋಮಣ್ಣ ಸಚಿವರಾಗಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುತ್ತಿದ್ದಾರೆ. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಯಡಿಯೂರಪ್ಪ ಆಪ್ತರಾದ ವಿ. ಸೋಮಣ್ಣ ಯಡಿಯೂರಪ್ಪ ಸಂಪುಟದಲ್ಲಿ ವಸತಿ ಸಚಿವರಾಗಿದ್ದರು.

ಡಾ. ಸಿ. ಎನ್. ಅಶ್ವತ್ಥ ನಾರಾಯಣ
ಡಾ. ಸಿ. ಎನ್. ಅಶ್ವತ್ಥ ನಾರಾಯಣ ಯಡಿಯೂರಪ್ಪ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು. 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಬಿಜೆಪಿ ಹೈಕಮಾಂಡ್ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಮನಿರತ್ನಗೆ ಸಚಿವ ಸ್ಥಾನ
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಸಚಿವರಾಗುತ್ತಿದ್ದಾರೆ. ಯಡಿಯೂರಪ್ಪ ಸಂಪುಟವನ್ನೇ ಅವರು ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಬಸವರಾಜ ಬೊಮ್ಮಾಯಿ ಸಂಪುಟವನ್ನು ಅವರು ಸೇರುತ್ತಿದ್ದಾರೆ.

ಬೈರತಿ ಬಸವರಾಜಗೆ ಸಚಿವ ಸ್ಥಾನ
ಕೆ. ಆರ್. ಪುರ ಕ್ಷೇತ್ರದ ಶಾಸಕ ಬೈರತಿ ಬಸವರಾಜ ಬಸವರಾಜ ಬೊಮ್ಮಾಯಿ ಸಂಪುಟ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರವನ್ನು ಅವರು ವಹಿಸಿದ್ದರು. ಯಡಿಯೂರಪ್ಪ ಸಂಪುಟದಲ್ಲಿಯೂ ನಗರಾಭಿವೃದ್ಧಿ ಸಚಿವರಾಗಿದ್ದರು. ಈಗ ಮತ್ತೆ ಸಚಿವ ಸ್ಥಾನ ಒಲಿದು ಬಂದಿದೆ.

ಕೆ. ಗೋಪಾಲಯ್ಯ
ಜೆಡಿಎಸ್ ಬಿಟ್ಟು ಬಿಜೆಪಿ ಸೇರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಲ್ಲಿ ಕೆ. ಗೋಪಾಲಯ್ಯ ಸಹ ಒಬ್ಬರು. ಯಡಿಯೂರಪ್ಪ ಸರ್ಕಾರದಲ್ಲಿಯೂ ಗೋಪಾಲಯ್ಯ ಸಚಿವರಾಗಿದ್ದರು. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕರಾದ ಗೋಪಾಲಯ್ಯ ಬಸವರಾಜ ಬೊಮ್ಮಾಯಿ ಸಂಪುಟವನ್ನು ಸೇರುತ್ತಿದ್ದಾರೆ.
Recommended Video

ಎಸ್. ಟಿ. ಸೋಮಶೇಖರ್ಗೆ ಸಚಿವ ಸ್ಥಾನ
ಬೆಂಗಳೂರಿನ ಯಶವಂತಪುರ ಕ್ಷೇತ್ರದ ಶಾಸಕ ಎಸ್. ಟಿ. ಸೋಮಶೇಖರ್ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರವನ್ನು ಅವರು ವಹಿಸಿದ್ದರು. ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದರು. ಸಚಿವರ ಕಾರ್ಯವೈಖರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು.












Click it and Unblock the Notifications