7th Pay Commission: ಬೆಂಗಳೂರಲ್ಲಿ ನಿವೃತ್ತ ಸರ್ಕಾರಿ ನೌಕರರ ಬೃಹತ್ ಹೋರಾಟಕ್ಕೆ ಚಾಲನೆ: ಸರ್ಕಾರ ಸ್ಪಂದಿಸುತ್ತಾ?
ಬೆಂಗಳೂರು, ಫೆಬ್ರವರಿ 28: ಕರ್ನಾಟಕ ರಾಜ್ಯ ಸರ್ಕಾರದ ಸಾವಿರಾರು ನಿವೃತ್ತ ಅಧಿಕಾರಿಗಳ (ಪಿಂಚಣಿದಾರರು) ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. 7ನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಆರ್ಥಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಇಂದಿನಿಂದ ನಡೆಯಲಿರುವ ಈ ಹೋರಾಟಕ್ಕೆ ಶುಕ್ರವಾರ (ಫೆ.28) ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿದ್ದು, ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಅವರು ಚಾಲನೆ ನೀಡಿದರು.
ನೌಕರರ ಅನಿದಿಷ್ಟಾವಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ನ್ಯಾ.ಸಂತೋಷ್ ಹೆಗಡೆ ಅವರು, ಸಂವಿಧಾನದ 14 ಪರಿಚ್ಛದದ ಪ್ರಕಾರ ಯಾವುದೇ ಗುಂಪಿಗೆ ಸೇರಿದ ವ್ಯಕ್ತಿಗಳಿಗೆ ತಾರತಮ್ಯ ತೋರಬಾರದು. ಇದು ನಮ್ಮ ಮೂಲಭೂತ ಹಕ್ಕು. ಸರ್ಕಾರಿ ನಿವೃತ್ತ ನೌಕರರ ಬಗ್ಗೆ ಸರ್ಕಾರ ಬೇಧ ಭಾವ ಮಾಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಹೋರಾಟ ಅನಿವಾರ್ಯವಾಗಿದೆ.

ಪ್ರತಿಯೊಬ್ಬ ಪ್ರಜೆಯ ಹಿತ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನೌಕರರಿಗೆ ಕೂಡಲೇ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು. ನಿವೃತ್ತ ನೌಕರರನ್ನು ಎರಡು ರೀತಿಯಲ್ಲಿ ನೋಡುವುದು ಸರಿಯಲ್ಲ. ಸರ್ಕಾರ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಬೇಕು. ನಿಮ್ಮ ಹೋರಾಟಕ್ಕೆ ನನ್ನ ಬೆಂಬಲವಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದಾಗ ಮಾತ್ರ ನ್ಯಾಯ ಪಡೆಯಲು ಸಾಧ್ಯ ಎಂದು ಅವರು ಒತ್ತಾಯಿಸಿದರು.
ಹೋರಾಟ ಕುರಿತು ಅಣ್ಣಾ ಹಜಾರೆ ಪತ್ರ: ಸಿಎಂಗೆ ಒತ್ತಾಯ
ನಿವೃತ್ತ ನೌಕರರ ವೇದಿಕೆ ರಾಜ್ಯಾಧ್ಯಕ್ಷ ಡಾ. ಎಮ್.ಪಿ.ಎಮ್. ಷಣ್ಮುಖಯ್ಯ ಅವರು, ಇಂದಿನ ಪ್ರತಿಭಟನೆಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಪಾಲ್ಗೊಳ್ಳಬೇಕಿತ್ತು. ಆದರೆ ಅನಾರೋಗ್ಯ ಕಾರಣಗಳಿಂದ ಅವರು ಆಗಮಿಸಿಲ್ಲ. ಅವರು ಹೋರಾಟ ಬೆಂಬಲ ಸೂಚಿಸಿ ಪತ್ರ ಬರೆದಿದ್ದಾರೆ.

ಕಳೆದ 2002 ರ ಜುಲೈನಿಂದ 2024 ರ ಜುಲೈ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ನೌಕರರುಗಳಿಗೆ 7 ನೇ ವೇತನ ಆಯೋಗದ ಸೌಲಭ್ಯಗಳನ್ನು ಕಲ್ಪಿಸಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.
ನಿವೃತ್ತ ನೌಕರರಿಗೆ 7ನೇ ವೇತನ ಆಯೋಗದ ಪ್ರಕಾರ ನಿವೃತ್ತಿ ಸೌಲಭ್ಯ ನೀಡಲು ಪರಿಷ್ಕೃತ ಆದೇಶ ಹೊರಡಿಸಬೇಕು. ಈ ಹೋರಾಟ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದ 28 ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಆದರೆ ಫೆಬ್ರವರಿ 20ರ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಾರದ ಕಾರಣ ಅನಿರ್ದಿಷ್ಟ ಅವಧಿ ಮುಷ್ಕರ ನಡೆಸುತ್ತಿದ್ದೇವೆ. ಹೋರಾಟ ಕೈಬಿಡುವ ಮಾತೇ ಇಲ್ಲ ಎಂದು ಅವರು ಎಚ್ಚರಿಕೆ ಸಂದೇಶ ರವಾನಿಸಿದರು.
3-4 ದಶಕಗಳಿಂದ ಸರ್ಕಾರಿ ಸೇವೆ: ನಿವೃತ್ತಿ ಬಳಿಕ ನಿರ್ಲಕ್ಷ್ಯ
ನಿವೃತ್ತರಾದ ನಾವು ಮನೆಯಲ್ಲಿರುವುದಕ್ಕಿಂತ ಫ್ರೀಡಂಪಾರ್ಕ್ ನಲ್ಲಿ ಹೋರಾಟ ಮಾಡುವುದೇ ಲೇಸು. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಹಸ್ರಾರು ನೌಕರರು ಕುಟುಂಬ ಸಮೇತರಾಗಿ ಹೋರಾಟದಲ್ಲಿ ನಿರತರಾಗಿದ್ದಾರೆ. ಕಳೆದ 30-40 ವರ್ಷಗಳ ಕಾಲ ಸರ್ಕಾರಿ ಸೇವೆ ಮಾಡಿದ್ದು ನಮ್ಮ ನೆರವಿಗೆ ಸರ್ಕಾರ ಧಾವಿಸಬೇಕು. ಎಷ್ಟೋ ಜನ ನಿವೃತ್ತರು ಬಾಡಿಗೆ ಕಟ್ಟಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ 17 ಬಾರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ರಥಯಾತ್ರೆ ಮಾಡಿದ್ದೇವೆ. ಆದರೂ ಪ್ರಯೋಜನವಾಗದಿದ್ದಾಗ ಹೋರಾಟ ಅನಿವಾರ್ಯವಾಗಿದೆ.
ಒಟ್ಟು ಸುಮಾರು 26,000 ಮಂದಿ ನಿವೃತ್ತ ನೌಕರರಿದ್ದಾರೆ. ಅವರೆಲ್ಲ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಬೇಡಿಕೆ ಈಡೇರುವ ತನಕ ಹೋರಾಟ ಮುಂದುವರಿಯಲಿದೆ. 56 ಸಾವಿರ ಕೋಟಿ ರೂ. ಪಂಚ ಗ್ಯಾರೆಂಟಿಗಳಲ್ಲಿ ನಮಗೆ ಅನುಕೂಲವಾಗುವ ಗ್ಯಾರಂಟಿಯೊಂದನ್ನು ಸೇರಿಸಿ ಎಂದು ಅವರು ಕೋರಿದರು.












Click it and Unblock the Notifications