ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ : ದೇವೇಗೌಡ
ಬೆಂಗಳೂರು.ಮಾ.14: ರಾಜ್ಯ ಮಟ್ಟದ ಜೆಡಿಎಸ್ ಸಭೆ ಮಾ.19 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಅಲ್ಲದೇ ಜಿಲ್ಲಾ ಹಾಗೂ ತಾಲೂಕು ಚುನಾವಣಾ ಫಲಿತಾಂಶದಿಂದ ಕುಗ್ಗಿದ ಕಾರ್ಯಕರ್ತರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಹಾಗೂ ಪಕ್ಷದ ಸಂಘಟನೆಗಾಗಿ ಮಾ.26ರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಧಿಕಾರಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತೇವೆ. ಪಕ್ಷದ ಸಂಘಟನೆಗಾಗಿ ಸಾರಥ್ಯ ವಹಿಸುತ್ತೇವೆ.
ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಜೆಡಿಎಸ್ ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ 2018 ಚುನಾವಣೆಯಲ್ಲಿ ಪಕ್ಷ ಗೆಲ್ಲದಿದ್ದರೆ ಅವರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಆದರೆ ಆ ಬಗ್ಗೆ ಈಗಲೇ ಊಹಿಸಲು ಸಾಧ್ಯವಿಲ್ಲ' ಎಂದರು.[ವಿಜಯ್ ಮಲ್ಯ 'ಮಣ್ಣಿನ ಮಗ' ಎಂದ ದೇವೇಗೌಡ]

ನಾನು ಮತ್ತು ನನ್ನ ಮಗ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸದಿದ್ದರೂ ಪಕ್ಷ ಕಟ್ಟುವ ಕೆಲಸದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತೇವೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲವಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.[ನೀರಾವರಿ ಯೋಜನೆ ಪೂರೈಸಿ.. ದೆಹಲಿಯಲ್ಲಿ ಗುಡುಗಿದ ಗೌಡ್ರು]
ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಅಧಿಕಾರ ಹೊಂದಾಣಿಕೆಗೆ ಸಂಬಂಧಿಸಿದಂತೆ, ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಪಕ್ಷದ ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ಶಾಸಕರಿಗೆ ಬಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ತುಮಕೂರಿನಲ್ಲಿ ಕಾಂಗ್ರೆಸ್, ಮೈಸೂರಿನಲ್ಲಿ ಬಿಜೆಪಿ, ರಾಯಚೂರಿನಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಅಭಿಪ್ರಾಯಗಳು ಕೇಳಿಬಂದಿವೆ. ಸ್ಥಳೀಯ ಮುಖಂಡರು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಪುನಃ ಕೇಂದ್ರ ರಾಜಕೀಯಕ್ಕೆ ಹೋಗುವುದಿಲ್ಲ ಎಂದು ದೇವೇಗೌಡರು ಸ್ಪಷ್ಟಪಡಿಸಿದರು.












Click it and Unblock the Notifications