ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ; ಸಿಎಂ ಯಡಿಯೂರಪ್ಪ ಏನಂದ್ರು?
ಬೆಂಗಳೂರು, ಏಪ್ರಿಲ್ 2: ಬೆಂಗಳೂರಿನಲ್ಲಿ ಕೊರೊನಾ ತಪಾಸಣೆಗೆ ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಕಡೆ ಸಣ್ಣಪುಟ್ಟ ಘಟನೆಗಳು ಆಗಿವೆ. ಅವರಿಗೆ ಮನವರಿಕೆ ಮಾಡಿಕೊಡಬೇಕಾಗುತ್ತೆ. ಜತೆಗೆ ದೆಹಲಿಗೆ ಹೋಗಿ ಬಂದವರು ಕೂಡ ಸಹಕರಿಸಬೇಕು. ಸ್ವಯಂಪ್ರೇರಿತರಾಗಿ ಹೊರಬಂದು ಪರೀಕ್ಷೆಗೆ ಸಹಕಾರ ಕೊಡಿ. ಸಾದಿಕ್ ಕಾಲೊನಿಯಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿರುವುದು ಸರಿ ಅಲ್ಲ ಎಂದು ಹೇಳಿದ್ದಾರೆ.
ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿತ್ತು.

ಥಣಿಸಂದ್ರ ಮುಖ್ಯ ರಸ್ತೆ ಸಾರಾಯಿಪಾಳ್ಯದ ಸಾದಿಕ್ ಕಾಲೊನಿಯಲ್ಲಿ ವ್ಯಕ್ತಿಯೊಬ್ಬನಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದರಿಂದ ವೈದ್ಯಕೀಯ ಸಿಬ್ಬಂದಿ ಆರೋಗ್ಯ ತಪಾಸಣೆಗೆ ತೆರಳಿದ್ದರು. ಈ ವೇಳೆ ಕೆಲವರು ಆಶಾ ಕಾರ್ಯಕರ್ತೆಯರ ಜೊತೆ ವಾಗ್ವಾದ ನಡೆಸಿದ್ದಾರೆ. ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ದೂರಿದ್ದಾರೆ.
ವಾಗ್ವಾದ ನಡೆದ ಸಂದರ್ಭದಲ್ಲಿ ಕೆಲವರು ಮೈಕ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ಕೊಡಬಾರದು, ಪೋನ್ ನಂಬರ್ ಕೊಡಬಾರದು ಎಂದು ಬೆದರಿಕೆ ಹಾಕಿ, ಕಾಗದಗಳನ್ನು ಹರಿದು ಹಾಕಿದ್ದಾರೆ ಎಂದು ಕೃಷ್ಣವೇಣಿ ಎನ್ನುವ ಆಶಾ ಕಾರ್ಯಕರ್ತೆಯರು ದೂರಿದ್ದಾರೆ.












Click it and Unblock the Notifications