ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್ಗೆ ಗುದ್ದಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು, ಸೆಪ್ಟೆಂಬರ್ 03: ಬೆಂಗಳೂರಿನಲ್ಲಿ ಇಂದು ಮುಂಜಾನೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದ ಭೀಕರ ಘಟನೆ ಬೆಂಗಳೂರಿನ ಯಶವಂತಪುರ ಸರ್ಕಲ್ ಬಳಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳ ಸ್ಥಿತಿ ಚಿಂತಾ ಜನಕವಾಗಿದೆ ಎಂದು ತಿಳಿದು ಬಂದಿದೆ.
ಯಶವಂತಪುರ ಸರ್ಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಇಂದು (ಸೆಪ್ಟೆಂಬರ್ 03) ಮಂಗಳವಾರ ಮುಂಜಾನೆ 3.45ಕ್ಕೆ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ವೇಳೆ ಬೈಕ್ಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅಪಘಾತ ನಡೆದ ಸ್ಥಳಕ್ಕೆ ಬಂದ ಯಶವಂತಪುರ ಸಂಚಾರಿ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರ ಐವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡವರ ಪೈಕಿ ಓರ್ವ ಸಾವು
ಬೈಕ್ ಸವಾರ ಮಂಜುನಾಥ ಸೇರಿ ಐವರು ಈ ಅಪಘಾತದಲ್ಲಿ ಗಾಯಗೊಂಡಿದ್ದರು. ಎಲ್ಲರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ದುರಾದೃಷ್ಟವಶಾತ್ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಶಬರೀಶ್ ಎನ್ನುವಾತ ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಉಳಿದವರಿಗೆ ಚಿಕಿತ್ಸೆ ಮುಂದುವರೆದಿದೆ. ಅದರಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಪರಿಶೀಲನೆ ವೇಳೆ ಕಾರಿನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಕುಡಿದು ಕಾರು ಚಾಲನೆ ಮಾಡಿದ ಪರಿಣಾಮ ಈ ಘಟನೆ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ವರದಿ ನಂತರವೇ ಅಪಘಾತಕ್ಕೆ ಅಸಲಿ ಕಾರಣ ತಿಳಿದು ಬರಬೇಕಿದೆ.












Click it and Unblock the Notifications