ಜೂ.9ಕ್ಕೆ ಕಾಂಗ್ರೆಸ್ ಗೃಹಜ್ಯೋತಿ ಯೋಜನೆ ವಿರುದ್ಧ ಚೆಂಡುಹೂವು ಮುಡಿದು ಪ್ರತಿಭಟನೆ
ಬೆಂಗಳೂರು, ಜೂನ್ 07: ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಗೆ ಅಧಿಕೃತ ಮುದ್ರೆ ಬಿದ್ದರೂ ಸಹ ತೀವ್ರ ಚರ್ಚೆಗೆ, ಪ್ರತಿಭಟನೆಗಳಿಗೆ ಕಾರಣವಾಗಿವೆ. ಇದಕ್ಕೆ ಗ್ಯಾರಂಟಿಗಳಿಗೆ ವಿಧಿಸಿರುವ ಷರತ್ತುಗಳ ಕಾರಣ ಎಂದಿರುವ ಆಮ್ ಆದ್ಮಿ ಪಕ್ಷವು (AAP) ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಹಮ್ಮಿಕೊಂಡಿದೆ.
ಬುಧವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಅದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವು ತನ್ನ 5 ಗ್ಯಾರಂಟಿಗಳನ್ನು ನೇರವಾಗಿ ನೀಡದೆ ಅನೇಕ ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಜನರ ಕಿವಿಗಳಿಗೆ ಹೂವು ಮುಡಿಸುವ ಮೂಲಕ ಪರಮ ಅನ್ಯಾಯ ಮತ್ತು ಮೋಸವನ್ನು ಮಾಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿ ಮಾದರಿಯಲ್ಲಿ ಯಾವುದೇ ಷರತ್ತುಗಳಿಲ್ಲದೆ 200 ಯೂನಿಟ್ ವಿದ್ಯುತ್ ನೀಡಲಾಗದೆ ಅನೇಕ ಷರತ್ತುಗಳನ್ನು ವಿಧಿಸಿ ಬಡವರು ಬಡವರಾಗಿ ಇರುವಂತಹ ಗ್ಯಾರಂಟಿಯನ್ನು ಕಾಂಗ್ರೆಸ್ನವರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೂನ್ 9ರಂದು ಶುಕ್ರವಾರದಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪ್ರತಿಭಟನೆ ಅಂಗವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಚೆಂಡು ಹೂವು ಮುಡಿಸಿಕೊಂಡು ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ಮಾಡಲಿದ್ದಾರೆಂದು ಅವರು ಮಾಹಿತಿ ನೀಡಿದರು.
ಹಿಂದಿನಂತೆ ಭ್ರಷ್ಟಚಾರ ಮಾಡಿದರೆ ಜನರೇ ಉತ್ತರಿಸುತ್ತಾರೆ
ಇದೇ ವೇಳೆ ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಬಹುಮತ 40ಪರ್ಸೆಂಟ್ ಕಮಿಷನ್ ಹಾಗೂ ಜನ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ನೀಡಿದ ಮತವೆ ಹೊರತು ಕಾಂಗ್ರೆಸ್ ಪಕ್ಷಕ್ಕೆ ನೀಡಿರುವ ಮತವಲ್ಲ. ಈ ಹಿಂದಿನ ಅಧಿಕಾರವಧಿಯಲ್ಲಿ ಮಾಡಿದ್ದಂತಹ ಅನೇಕ ಭ್ರಷ್ಟಾಚಾರ ಪ್ರಕರಣಗಳು ಹಾಗೂ ಜನ ವಿರೋಧಿ ನೀತಿಯನ್ನು ಮತ್ತೊಮ್ಮೆ ಮುಂದುವರಿಸಿದಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ರಾಜ್ಯವು ಈಗಾಗಲೇ ಎಲ್ಲವನ್ನೂ ನೀಡಿದೆ. ಇವರು ರಾಜ್ಯದ ಜನತೆಗೆ ಮರಳಿ ನೀಡಿ ಋಣವನ್ನು ತೀರಿಸಿಕೊಳ್ಳುವಂತಹ ಅವಕಾಶವಿರುವಾಗ ಪ್ರಾಮಾಣಿಕವಾಗಿ ಯೋಜನೆಗಳನ್ನು ಜಾರಿಗೊಳಿಸಿ ಎಂದು ಆಗ್ರಹಿಸಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಿದ್ದಕ್ಕೆ ಬಿಜೆಪಿ ನಾಯಕರು ಟೀಕಿಸಿತ್ತದ್ದಾರೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗ್ಯಾರಂಟಿಗಳಿಗೆ ಷರತ್ತು ವಿಧಿಸಬಾರದು. ಚುನಾವಣೆ ಪೂರ್ವ ಮಾತನಾಡಿದಂತೆ ಜಾರಿಗೆ ತನ್ನಿ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವು ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹೇಗೆ ಹಣ ತರುತ್ತಾರೆ ಎಂದು ತಿಳಿಸಲಿ ಎಂದು ಆಗ್ರಹಿಸಿದ್ದಾರೆ.












Click it and Unblock the Notifications