ರೈತರ ಬದುಕನ್ನು ಬೀದಿಗೆ ತಳ್ಳುತ್ತಿರುವ ಬಿಜೆಪಿ: ಮೋಹನ್ ದಾಸರಿ
ಬೆಂಗಳೂರು, ಡಿ. 14: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಕರೆಯಂತೆ ಮೂರು ಕೃಷಿ ಕಾಯ್ದೆಗಳ ಮಾರಕ ತಿದ್ದುಪಡಿಯನ್ನು ಹಿಂಪಡೆಯಲು ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಮ್ ಆದ್ಮಿ ಪಕ್ಷದಿಂದ ಹಮ್ಮಿಕೊಳ್ಳಲಾಗಿತ್ತು.
ರೈತರ ಬದುಕನ್ನೇ ಕಿತ್ತುಕೊಳ್ಳುವ ಮೂರು ಮಸೂದೆಗಳನ್ನು ತಿದ್ದುಪಡಿ ಮಾಡಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದೇಶದ ಬಹು ಜನರನ್ನು ಬೀದಿಗೆ ತಳ್ಳಲು ಯೋಜನೆ ರೂಪಿಸಿದೆ ಇದನ್ನು ಆಮ್ ಆದ್ಮಿ ಪಕ್ಷ ಸಹಿಸುವುದಿಲ್ಲ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮೌರ್ಯ ಸರ್ಕಲ್ ಬಳಿ ಆಮ್ ಆದ್ಮಿ ಪಕ್ಷದಿಂದ ಹಮ್ಮಿಕೊಂಡಿರುವ ಒಂದು ದಿನದ ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದರು.

ಇಡೀ ದೇಶದ ಹಾಗೂ ನಮ್ಮ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಮ್ ಆದ್ಮಿ ಪಕ್ಷದಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ತಿದ್ದುಪಡಿಗಳನ್ನು ಹಿಂಪಡೆಯದೇ ಹೋದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತರ ಜಮೀನು ಗುತ್ತಿಗೆ ಪಡೆದುಕೊಳ್ಳುವ ಕಂಪೆನಿಗಳು ನಿಧಾನಕ್ಕೆ ರೈತರ ಜಮೀನನ್ನೇ ಕಸಿಯುತ್ತವೆ. ಇದು ಇಡೀ ದೇಶದ ಭೂಮಿಯನ್ನು ಉಳ್ಳವರ ಕೈಗೆ ಕೊಡುವ ಹುನ್ನಾರ ಎಂದರು.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಧಮನಕಾರಿಯಾಗಿ ಹತ್ತಿಕ್ಕಲು ಹೊರಟಿರುವ ಕೇಂದ್ರ ಸರ್ಕಾರದ ನಡೆ ನಾಚಿಕೆಗೇಡು, ಜನ ಸಂಕಷ್ಟದಲ್ಲಿ ಇರುವಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಂಸತ್ ಭವನ ಕಟ್ಟಬೇಕಿತ್ತೇ ಎಂದು ಕಿಡಿಕಾರಿದರು.
ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ ಮಾತನಾಡಿ, ಈ ದೇಶದ ಬೆನ್ನೆಲುಬಾದ ರೈತನಿಗೆ ಅವಮಾನ ಮಾಡಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ರೈತ, ಕಾರ್ಮಿಕ, ಮಹಿಳಾ ಶಕ್ತಿಗಳು ಒಂದಾಗಬೇಕು ಇದಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು ಎಂದರು.
ನರೇಂದ್ರ ಮೋದಿ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು ಅದಾನಿ, ಅಂಬಾನಿಗಳ ಪರವಾಗಿ ಕೆಲಸ ಮಾಡುತ್ತಿದೆ ಹೊರತು ರೈತರ ಪರವಾಗಿ ನಿಂತಿಲ್ಲ ಎಂದು ಹೇಳಿದರು.
ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಸಹ ಸಂಚಾಲಕಿ ಶಾಂತಲಾ ದಾಮ್ಲೆ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್.ವಿ, ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಅಧ್ಯಕ್ಷೆ ಸುಮನ್ ಪ್ರಶಾಂತ್ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications