ನಿವೇಶನ ಹಂಚಿಕೆ: ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು ಆಗಸ್ಟ್ 26: ''ನಿಯಮ ಬಾಹಿರವಾಗಿ ನಿವೇಶನ ಹಂಚಿಕೆ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಶುಕ್ರವಾರ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ'' ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಹೇಳಿದರು.
ಬೆಂಗಳೂರಿನಲ್ಲಿ ಈ ಕುರಿತು ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ವ್ಯಾಪಕ ಭ್ರಷ್ಟಾಚಾರಕ್ಕೆ ಕಾರಣವಾಗಿದ್ದ ಜಿ-ವರ್ಗದ ಸೈಟು ಹಂಚಿಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಿದೆ. ಹೀಗಿದ್ದರೂ ಸಹ ಬದಲಿ ನಿವೇಶನ ಹಂಚಿಕೆ ಎಂಬ ವಾಮ ಮಾರ್ಗವನ್ನು ಹುಡುಕಿಕೊಂಡು ಗೃಹಸಚಿವ ಆರಗ ಜ್ಞಾನೇಂದ್ರ ಹಾಗೂ ಇನ್ನಿತರ ಪ್ರಭಾವಿಗಳಿಗೆ ಕೋಟ್ಯಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ನೀತಿಗೆ ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿತ್ತು ಎಂದರು.
ಸುಪ್ರೀಂ ಚಾಟಿ ಬೆನ್ನಲ್ಲೇ ಬಿಡಿಎ ಆಯುಕ್ತ ರಾಜೇಶ್ ಗೌಡ ಎಂ.ಬಿ ವರ್ಗಾವಣೆ
ಈ ಅಕ್ರಮಕ್ಕೆ ಕಾರಣರಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಮೌಖಿಕ ಆದೇಶ ನೀಡಿದೆ. ನಿವೇಶನ ಪಡೆದ ಪ್ರಭಾವಿ ಅಧಿಕಾರಿಗಳು ಮತ್ತು ಗೃಹ ಸಚಿವರ ಪೈಕಿ ಸದ್ಯ ಲೋಕಾಯುಕ್ತರನ್ನು ಭೇಟಿಯಾಗಿ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಲಾಗಿದೆ ಎಂದು ಅವರು ವಿವರಿಸಿದರು.
ಬಿಡಿಎ ಕಮಿಷನರ್ ರಾಜೇಶ್ ಗೌಡರಿಗೆ ಸುಪ್ರೀಂ ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಪ್ರತಿಕ್ರಿಯಿಸಿ, ಇದು ಕೇವಲ ಆರಗ ಜ್ಞಾನೇಂದ್ರ ಅವರಿಗೆ ಮಾತ್ರ ಅಲ್ಲ, ಸಾಮಾನ್ಯರಿಗೂ ಕೊಡುವಾಗಲೂ ಆಗಿದೆ. ನಮ್ಮ ಬಿಡಿಎ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ನಾನು ಈಗಾಗಲೇ ಆರಗ ಜ್ಞಾನೇಂದ್ರ ಅವರಿಗೆ ಮಾತನಾಡಿದ್ದೇನೆ. ಅವರಿಗೆ ಕೊಟ್ಟಿರುವ ನಿವೇಶನವನ್ನು ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.
ಸಂತ್ರಸ್ತರಿಗೆ ಮನೆ ಕಟ್ಟಿಕೊಡುವಲ್ಲಿ ಬಿಜೆಪಿ ವಿಫಲ
ಕಳೆದ 4 ವರ್ಷಗಳಿಂದ ಅತಿವೃಷ್ಟಿ ಹಾವಳಿಯಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದರು ಸಹ ಅವರುಗಳಿಗೆ ಸೂಕ್ತ ಮನೆಗಳನ್ನು ಕಟ್ಟಿಕೊಡಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದರೆ ಬಿಜೆಪಿ ಸರ್ಕಾರ ಕಮಿಷನ್ ಆಸೆಗೆ ಮಂತ್ರಿಗಳು ಸೇರಿದಂತೆ ಪ್ರಭಾವಿಗಳಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಹಂಚಿಕೆ ಮಾಡಿದೆ. ಇದು ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ದಂಧೆಯ ಮತ್ತೊಂದು ರೂಪವಾಗಿದೆ ಎಂದು ಅವರು ಆರೋಪಿಸಿದರು.
ಕೋರ್ಟ್ ಆದೇಶ ಪಾಲಿಸದ ಬಿಜೆಪಿ
ಸುಪ್ರೀಂಕೋರ್ಟ್ 2021ರ ಅಕ್ಟೋಬರ್ 29 ರಂದು ಹೊರಡಿಸಿದ ಆದೇಶಕ್ಕೆ ವ್ಯತಿರಿಕ್ತವಾಗಿ ಈ ರೀತಿಯ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆರ್ಎಂವಿ ಬಡಾವಣೆ ಯಂತಹ ಪ್ರತಿಷ್ಠಿತ ಜಾಗ ಹಂಚಲಾಗಿದೆ. ಈ ನಿವೇಶನ ಹಂಚಿಕೆ ಅವ್ಯವಹಾರ ಪ್ರಕ್ರಿಯೆಯಲ್ಲಿ ಮಂತ್ರಿಗಳು ಸೇರಿದಂತೆ ಅನೇಕರು ಮುಳುಗಿರುವುದು ನಾಚಿಕೆಗೇಡಿನ ಸಂಗತಿ. ದೇಶದ ಅತ್ಯುನ್ನತ್ತ ನ್ಯಾಯಾಲಯಗಳ ಆದೇಶಗಳಿಗೂ ಸಹ ಕಿಂಚಿತ್ತೂ ಕಿಮ್ಮತ್ತನ್ನು ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿಲ್ಲವೆಂದು ಅವರು ವಿಷಾದ ವ್ಯಕ್ತಪಡಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿದ ಗೃಹ ಸಚಿವ
ಎಎಪಿ ರಾಜ್ಯ ವಕ್ತಾರ ಹಾಗೂ ಹಿರಿಯ ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯಿ ಮಾತನಾಡಿ, ರಾಜ್ಯದಲ್ಲಿ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಳುಗೆಡವಿದ್ದಾರೆ. ಅಲ್ಲದೇ ಉಂಡೂ ಹೋದ ಕೊಂಡೂ ಹೋದ ಎಂಬಂತೆ ಆರಗ ಜ್ಞಾನೇಂದ್ರಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಪ್ರಸಕ್ತ ಪ್ರಕರಣದಿಂದ ಸ್ಪಷ್ಟವಾಗುತ್ತಿದೆ ಎಂದರು.
ಗೃಹ ಸಚಿವರನ್ನು ವಜಾಗೊಳಿಸಿ
ಈ ಎಲ್ಲ ಅಕ್ರಮ, ಅಧಿಕಾರ ದುರ್ಬಳಕೆ ಗಮನಿಸಿ ಕೂಡಲೇ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಭ್ರಷ್ಟಾಚಾರ ಮತ್ತು ಪ್ರಕರಣದ ಹೊಣೆ ಹೊತ್ತು ಆರಗ ಜ್ಞಾನೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಅವರು ಆಗ್ರಹಿಸಿದರು. ಒಂದು ವೇಳೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಪಕ್ಷದ ವತಿಯಿಂದ ತೀವ್ರವಾಗಿ ಹೋರಾಟಕ್ಕೆ ನೀರ್ಧರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.