ಬಿಬಿಎಂಪಿ ಚುನಾವಣೆ ನಡೆಸಿ ಬೆಂಗಳೂರು ಉಳಿಸಿ: ಎಎಪಿ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 06: ಎರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿದೆ. ಬಿಜೆಪಿ ಈ ನಡೆ ಖಂಡಿಸಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಆಗ್ರಹಿಸಿ ಡಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ) ಮುಖಂಡರು ಮಂಗಳವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ವರೆಗೆ 'ಬಿಬಿಎಂಪಿ ಚುನಾವಣೆ ನಡೆಸಿ, ಬೆಂಗಳೂರು ಉಳಿಸಿ" ಎಂದು ಒಂದು ದಿನದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಸತ್ಯಾಗ್ರಹ ವೇಳೆ ಎಎಪಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಸೋಲಿನ ಭಯದಿಂದಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿಯು ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿದೆ. ಬಿಜೆಪಿಯ ಈ ಕುತಂತ್ರ ರಾಜಕೀಯದಿಂದಾಗಿ ಬೆಂಗಳೂರಿನ ಜನತೆ ನೂರಾರು ತೊಂದರೆ ಅನುಭವಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಾರ್ಪೊರೇಟರ್ಗಳೇ ಇಲ್ಲ. ಶಾಸಕರು ಹಾಗೂ ಸಂಸದರು ಇದ್ದರೂ ಕೈಗೆ ಸಿಗುವುದಿಲ್ಲ ಎಂದು ದೂರಿದರು.

ಬಿಜೆಪಿ ಸರ್ಕಾರ ಸ್ವಾರ್ಥಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನೇ ಬುಡಮೇಲು ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ಹಾಗೂ ಶಾಸಕರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ವಿರುದ್ಧ ಬೆಂಗಳೂರಿಗರ ನಿಲುವು ಸ್ಪಷ್ಟ
ಬಿಬಿಎಂಪಿ ಚುನಾವಣೆಗೆ ಒತ್ತಾಯಿಸಿ ಕಳೆದ ಮೂರು ದಿನಗಳು ಬೆಂಗಳೂರಿನಾದ್ಯಂತ ಎಎಪಿ ಕಾರ್ಯಕರ್ತರು ಸಹಿ ಸಂಗ್ರಹ ಅಭಿಯಾನ ನಡೆಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನರು ನಿಲುವು ತಾಳಿರುವುದು ಈ ವೇಳೆ ನಮ್ಮ ಗಮನಕ್ಕೆ ಬಂದಿದೆ. ಬೆಂಗಳೂರಿನಾದ್ಯಂತ ಆಮ್ ಆದ್ಮಿ ಪಾರ್ಟಿಗೆ ಜನಬೆಂಬಲ ಹೆಚ್ಚಾಗುತ್ತಿದೆ. ಇದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ ಎಂದರು.

ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ಪ್ರಾಮಾಣಿಕ ಆಡಳಿತವನ್ನು ತರಬೇಕೆಂಬ ಬೆಂಗಳೂರಿಗರ ನಿಲುವನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯು ಚುನಾವಣೆಯನ್ನು ಮುಂದೂಡುತ್ತಿದೆ. ಸರ್ಕಾರವು ಚುನಾವಣೆ ಮುಂದೂಡಲು ತೋರಿದ ಉತ್ಸಾಹವನ್ನು ಬೆಂಗಳೂರನ್ನು ಅಭಿವೃದ್ಧಿ ಪಡಿಸಲು ತೋರಿಸಿದ್ದರೆ, ಇದು ಇಂದು ಜಗತ್ತಿನ ನಂಬರ್ ಒನ್ ನಗರವಾಗುತ್ತಿತ್ತು ಎಂದು ತಿಳಿಸಿದರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ಆಗ್ರಹಿಸುತ್ತಿಲ್ಲ. ಆಮ್ ಆದ್ಮಿ ಪಾರ್ಟಿ ಒಂದೇ ನಿರಂತರವಾಗಿ ಹೋರಾಟ ಮಾಡುತ್ತಾ, ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸುತ್ತಿದೆ. ನಾವು ಚುನಾವಣೆಗೆ ಸಂಪೂರ್ಣ ಸಿದ್ಧವಾಗಿದ್ದು, ಯಾವಾಗ ಚುನಾವಣೆ ನಡೆದರೂ ನಾವೇ ಗೆಲ್ಲುವ ದೃಢ ವಿಶ್ವಾಸವಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಭರ್ಜರಿ ಬಹುಮತದಿಂದ ಜಯಗಳಿಸಲಿದೆ. ಬಿಬಿಎಂಪಿ ಚುನಾವಣೆಯಲ್ಲೂ ಅಂತಹದ್ದೇ ಫಲಿತಾಂಶ ಬರಲಿದೆ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಎಎಪಿ ಮುಖಂಡರಾದ ಜಗದೀಶ್ ವಿ ಸದಂ, ಅಶೋಕ್ ಮೃತ್ಯುಂಜಯ, ಗೋಪಿನಾಥ್, ಶ್ರೀನಿವಾಸ್ ರೆಡ್ಡಿ, ವೀಣಾ ಸೆರ್ರಾವ್, ಡಾ. ಕೇಶವ ಕುಮಾರ್ ಮತ್ತಿತರ ನಾಯಕರು ಭಾಗವಹಿಸಿದ್ದರು.












Click it and Unblock the Notifications