ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಎಎಪಿಯಿಂದ ವಾಟ್ಸಪ್ ಸಹಾಯವಾಣಿ
ಬೆಂಗಳೂರು, ಅಕ್ಟೋಬರ್ 22: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ರಸ್ತೆಗುಂಡಿ ಹಬ್ಬ ಆಚರಿಸಿ ಯಶಸ್ವಿಯಾದ ಬಳಿಕ ಆಮ್ ಆದ್ಮಿ ಪಾರ್ಟಿ ಮುಂದಿನ ಹೆಜ್ಜೆ ಇಟ್ಟಿದೆ.
ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಹೋರಾಡಲು ಆಮ್ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಪಕ್ಷದ ಮುಖಂಡ ಹಾಗೂ ಖ್ಯಾತ ವಕೀಲ ಜಗದೀಶ್ ಕೆ.ಎನ್. ಮಹಾದೇವ್ ತಿಳಿಸಿದರು.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಮಹಾದೇವ್, "ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ. ರಸ್ತೆ ಗುಂಡಿಗಳ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ" ಎಂದು ಹೇಳಿದರು.

ವಾಟ್ಸಪ್ ಸಹಾಯವಾಣಿ
"ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್ ಸಹಾಯವಾಣಿ 95133 19676 ಸಂಖ್ಯೆಗೆ ಮೆಸೇಜ್ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ. ಬಿಬಿಎಂಪಿ, ಸ್ಥಳೀಯ ಶಾಸಕ, ಮಾಜಿ ಕಾರ್ಪೊರೇಟರ್, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಿಸಿ, ಕಾನೂನು ಹೋರಾಟ ಆರಂಭಿಸುತ್ತೇವೆ. ರಾಜಧಾನಿ ಬೆಂಗಳೂರು ಹಾಗೂ ಇಲ್ಲಿನ ಜನರ ಹಿತಕ್ಕಾಗಿ ಯಾವುದೇ ತೊಂದರೆ ತೆಗೆದುಕೊಳ್ಳಲು ನಾವು ಸಂಪೂರ್ಣ ಸಿದ್ಧವಿದ್ದೇವೆ," ಎಂದು ಜಗದೀಶ್ ಮಹಾದೇವ್ ಹೇಳಿದರು.

ನಗರಾಧ್ಯಕ್ಷ ಮೋಹನ್ ದಾಸರಿ
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, "ಬೆಂಗಳೂರಿನ ರಸ್ತೆಗುಂಡಿಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷವು ನಿರಂತರವಾಗಿ ಹೋರಾಡುತ್ತಿದೆ. ಹಲವು ಪ್ರತಿಭಟನೆ ಹಾಗೂ ರಸ್ತೆಗುಂಡಿ ಹಬ್ಬ ಎಂಬ ವಿನೂತನ ಚಳುವಳಿ ನಡೆಸಿ ಜನಜಾಗೃತಿ ಮೂಡಿಸಿದ್ದೇವೆ. ಈಗ ವಾಟ್ಸಪ್ ಸಹಾಯವಾಣಿ ಹಾಗೂ ಕಾರ್ಯಪಡೆಯ ಮೂಲಕ ಮತ್ತೊಂದು ಹಂತದ ಹೋರಾಟ ಆರಂಭಿಸುತ್ತಿದ್ದೇವೆ. ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರ್ಕಾರಗಳು ಬೆಂಗಳೂರಿನ ರಸ್ತೆಗಳಿಗಾಗಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,000 ಕೋಟಿ ಮೊತ್ತವನ್ನು, ಅಂದರೆ ದಿನಕ್ಕೆ ಸರಾಸರಿ 11 ಕೋಟಿ ರೂಪಾಯಿಯನ್ನು ಖರ್ಚು ಮಾಡಿವೆ. ಇದು ಜನರ ತೆರಿಗೆ ಹಣವಾಗಿದ್ದು, ಇದರಲ್ಲಾದ ಭ್ರಷ್ಟಾಚಾರವನ್ನು ಪ್ರಶ್ನಿಸುವ ಸಂಪೂರ್ಣ ಹಕ್ಕು ಜನರಿಗಿದೆ," ಎಂದು ಹೇಳಿದರು.

ಅಪಾಯಕಾರಿ ಗುಂಡಿಗಳನ್ನು ಗುರುತಿಸಿ
ಅಪಾಯಕಾರಿ ಗುಂಡಿಗಳನ್ನು ಗುರುತಿಸಿ, ಅದರ ಸುತ್ತ ರಂಗೋಲಿ ಹಾಕಿ, ದೀಪ ಹಚ್ಚುವ ಮೂಲಕ ರಸ್ತೆಗುಂಡಿಗಳ ಹಬ್ಬ ನೆರವೇರಲಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು 20,000 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದರೂ ರಾಜಧಾನಿಯ ರಸ್ತೆಗಳು ದುಸ್ಥಿತಿಯಲ್ಲಿ ಇರುವುದರ ಕುರಿತು ಜಾಗೃತಿ ಮೂಡಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳಲು ಕಳಪೆ ಕಾಮಗಾರಿ ಮಾಡಿರುವುದನ್ನು ಆಮ್ ಆದ್ಮಿ ಪಾರ್ಟಿಯು ಜನರ ಮುಂದೆ ಬಯಲು ಮಾಡಲಿದೆ ಎಂದು ಮೋಹನ್ ದಾಸರಿ ಹೇಳಿದರು.
Recommended Video

ಬಿಬಿಎಂಪಿಗೆ ಸರ್ಕಾರ ಗಡುವು ನೀಡಿತ್ತು
ಸೆಪ್ಟಂಬರ್ 20 ರವೆರೆಗೆ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ ಸರ್ಕಾರ ಗಡುವು ನೀಡಿತ್ತು. ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ 1,344 ಕಿಮೀ ವ್ಯಾಪ್ತಿಯಲ್ಲಿ ಟೆಂಡರ್ ಶ್ಯೂರ್ ಮತ್ತು ವೈಟ್ ಟಾಪಿಂಗ್ ಕೆಲಸಗಳು ನಡೆಯುತ್ತಿವೆ. ಜಯಮಹಲ್, ಮರಿಗೌಡ, ರಿಚ್ಮಂಡ್, ಗೊರಗುಂಟೆಪಾಳ್ಯ, ರಾಜಕುಮಾರ ಸಮಾಧಿ ಎದುರಿನ ರಸ್ತೆ ಮತ್ತು ಯಶವಂತಪುರದಿಂದ ಗೊರಗುಂಟೆಪಾಳ್ಯದವರೆಗೆ ರಸ್ತೆಗಳು ಹಾಳಾಗಿವೆ ಎಂದು ಬಿಬಿಎಂಪಿ ಆಯುಕ್ತರು ಒಪ್ಪಿಕೊಂಡಿದ್ದಾರೆ, ಈ ರಸ್ತೆಗಳಲ್ಲಿ ಸದ್ಯ ಡಾಂಬರೀಕರಣ ನಡೆಯುತ್ತಿದೆ ಎಂದು ಹೇಳಿದ್ದಾರೆ. ಆದರೆ ಇದುವರೆಗೂ ಎಷ್ಟು ರಸ್ತೆಗುಂಡಿಗಳನ್ನು ಮುಚ್ಚಿದ್ದಾರೆ ಎಂಬ ಬಗ್ಗೆ ಆಯುಕ್ತರು ಮತ್ತು ಬಿಬಿಎಂಪಿ ಎಂಜಿನಿಯರ್ಗಳು ಮಾಹಿತಿ ನೀಡಲಿಲ್ಲ, ಕೇವಲ ಇನ್ನೂ 198 ರಸ್ತೆಗುಂಡಿ ಮಾತ್ರ ಮುಚ್ಚಬೇಕು ಎಂದು ಹೇಳಿದ್ದಾರೆ.












Click it and Unblock the Notifications