ಮಾಡಾಳು ವಿರೂಪಾಕ್ಷಪ್ಪ ಲಂಚ ಪ್ರಕರಣ: ಸರ್ಕಾರ ಮರು ತನಿಖೆ ಮಾಡಲು ಆಗ್ರಹ
ಬೆಂಗಳೂರು, ಡಿಸೆಂಬರ್ 22: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲು ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಕೆ. ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧದ ಲಂಚ ಪ್ರಕರಣ ಪ್ರಮುಖ ಕಾರಣವಾಗಿದೆ. ಕ್ಷುಲ್ಲಕ ಲೋಪದಿಂದ ಅವರ ವಿರುದ್ಧದ ಪ್ರಕರಣ ರದ್ದಾಗಿದೆ. ಆದ್ದರಿಂದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತಕ್ಕೆ ಮರು ತನಿಖೆಗೆ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿದೆ.
ಹೌದು, ಈ ಕುರಿತು ಆಮ್ ಆದ್ಮಿ ಪಕ್ಷವು ಮರುತನಿಖೆಗೆ ಆಗ್ರಹಿಸಿದೆ. ಶುಕ್ರವಾರ ಪಕ್ಷದ ಜಗದೀಶ್ ಸದಂ ಮಾತನಾಡಿ, ಕೆ. ಮಾಡಾಳು ವಿರೂಪಾಕ್ಷಪ್ಪಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪರಮಾಪ್ತರಾಗಿದ್ದರು. ಅವರು ಶಾಸಕರು ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಅಧ್ಯಕ್ಷರಾಗಿದ್ದ ವೇಳೆ ಅವರ ಮೇಲೆ ನಡೆದ ಲೋಕಾಯುಕ್ತ ದಾಳಿ ನಡೆದಿತ್ತು. ಇದು ಸಹ ಬಿಜೆಪಿಗೆ ಸೋಲಿಗೆ ಕಾರಣವಾಯಿತು ಎಂದರು.

ಸುಗಂಧ ದ್ರವ್ಯಕ್ಕೆ ಸಂಬಂಧಪಟ್ಟ ಕಚ್ಛಾ ವಸ್ತುಗಳನ್ನು ಮಾರಾಟ ಮಾಡಲು ಗುತ್ತಿಗೆ ನೀಡುವ ವಿಚಾರದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಲಂಚ ಕೇಳಿದ್ದಾಗಿ ಶ್ರೇಯಸ್ ಕಶ್ಯಪ್ ಎನ್ನುವವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಾಡಾಳ್ ಅವರ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರು ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು.
ಸಮಜಾಯಿ ನೀಡಲಾಗಿತ್ತು
40 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಲಾಗಿತ್ತು. ತದ ನಂತರ ಮಾಡಾಳ್ ವಿರೂಪಾಕ್ಷಪ್ಪನವರ ಮನೆ ಮೇಲೆ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಕೂಡ 8 ಕೋಟಿ ರೂಪಾಯಿ ಹಣ ಪತ್ತೆಯಾಗುತ್ತದೆ. ಆದರೆ ಅಡಿಕೆ ಮಾರಿದ ಹಣ ಎಂದು ಅವರು ಸಮಜಾಯಿಷಿ ನೀಡಿದ್ದರು.
ಇಷ್ಟೆಲ್ಲಾ ದೊಡ್ಡ ಹಗರಣ ಆದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ನಾವು ಕೂಡ ನಿರೀಕ್ಷೆ ಮಾಡಿದ್ದೆವು. ಆದರೆ ಈ ಪ್ರಕರಣದಲ್ಲಿ ಸ್ಪೀಕರ್ ಪ್ರಾಸಿಕ್ಯೂಷನ್ ಅನುಮತಿ ಪಡೆದಿರಲಿಲ್ಲ ಎಂದು ಕಾರಣ ನೀಡಿ ಮೂರು ದಿನಗಳ ಹಿಂದೆ ಹೈಕೋರ್ಟ್ ಪ್ರಕರಣ ವಜಾ ಮಾಡಿದೆ ಎಂದು ವಿವರಿಸಿದರು.

ಅನುಮತಿ ಇಲ್ಲದೇ ಕೇಸ್ ದಾಖಲಾಯಿತಾ?
ಪ್ರಾಸಿಕ್ಯೂಷನ್ ಅನುಮತಿ ಪಡೆದು ಪ್ರಕರಣ ತನಿಖೆ ಮಾಡಬೇಕು ಎನ್ನುವ ಕನಿಷ್ಠ ಜ್ಞಾನ ಅಂದಿನ ಸರ್ಕಾರಕ್ಕೆ ಇರಲಿಲ್ಲವಾ? ಪ್ರಾಸಿಕ್ಯೂಷನ್ ಅನುಮತಿ ನೀಡದೇ ಯಾಕೆ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ? ಇಷ್ಟೊಂದು ದೊಡ್ಡ ಪ್ರಕರಣ ವಜಾ ಆಗಿರುವುದು ನೀಚ ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ, ಬಿಜೆಪಿ ವಿಪಕ್ಷವಾಗಿದೆ. ಎರಡೂ ಪಕ್ಷಗಳು ಹೊಂದಾಣಿಕೆ ರಾಜಕಾರಣ ಮಾಡುತ್ತಿವೆ ಎಂದು ಮಾಧ್ಯಮಗಳೇ ವರದಿ ಮಾಡಿವೆ. ಈ ಪ್ರಕರಣ ಗಮನಿಸಿದರೆ ಅದು ನಿಜ ಅನಿಸುತ್ತದೆ. ಚುನಾವಣೆಗೆ ಮೊದಲು ಕಾಂಗ್ರೆಸ್ ಆಮ್ ಆದ್ಮಿ ಪಕ್ಷದ ಜೊತೆ ಹೋರಾಟ ಮಾಡಿತ್ತು, ಆದರೆ ಇಂದು ಪ್ರಕರಣದ ತನಿಖೆಗೆ ಅನುಮತಿ ನೀಡದೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಅವರು ಪ್ರಾಸಿಕ್ಯೂಷನ್ ಅನುಮತಿ ನೀಡಿ ಈ ಪ್ರಕರಣವನ್ನು ಮರು ತನಿಖೆಗೆ ಆದೇಶ ನೀಡಬೇಕು ಎಂದು ತಿಳಿಸಿದರು.
ಎಎಪಿ ಯುವ ಘಟಕದ ಅಧ್ಯಕ್ಷರು ಮತ್ತು ವಕೀಲರಾದ ಲೋಹಿತ್ ಕುಮಾರ್ ಅವರು, ಚುನಾವಣೆ ಘೋಷಣೆಯಾದ ಬಳಿಕ ನಡೆದ ಅತಿ ದೊಡ್ಡ ಹಗರಣ ಇದು. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ದಾವಣಗೆರೆಗೆ ಬಂದರೂ ಇದರ ಬಗ್ಗೆ ಅಪ್ಪಿ ತಪ್ಪಿಯೂ ಮಾತನಾಡಲಿಲ್ಲ ಎಂದರು.












Click it and Unblock the Notifications