Hit and Run: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್: ಪಾದಚಾರಿ ಸಾವು
ಬೆಂಗಳೂರು, ನವೆಂಬರ್ 10: ಬೆಂಗಳೂರಿನಲ್ಲಿ ಇತ್ತೀಚಿಗೆ ಹಿಟ್ ಆ್ಯಂಡ್ ರನ್ ಪ್ರಕರಣಗಳು ನಡೆಯುತ್ತಲೇ ಇದೆ. ತಡರಾತ್ರಿ ಸಂಭವಿಸುವ ಅಪಘಾತಗಳಲ್ಲಿ ಹಿಟ್ ಆ್ಯಂಡ್ ರನ್ ಹೆಚ್ಚಾಗುತ್ತಿದ್ದು, ಅಪಘಾತದ ನಂತರ ಚಾಲಕರು ಸ್ಥಳದಿಂದ ಪರಾರಿಯಾಗುತ್ತಿದ್ದಾರೆ. ಇದೇ ರೀತಿಯ ಮತ್ತೊಂದು ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ನಡೆದಿದೆ.
ಪಾದಚಾರಿಗೆ ಡಿಕ್ಕಿ ಹೊಡೆದು ಲಾರಿ ಸಮೇತ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿರುವ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ನಡೆದಿದ್ದು, ಒರಿಸ್ಸಾ ಮೂಲದ ವ್ಯಕ್ತಿ ಬಲಿಯಾಗಿದ್ದಾನೆ.

ನಿರಂಜನ್ ಹಿಟ್ ಆ್ಯಂಡ್ ರನ್ನಿಂದ ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಒರಿಸ್ಸಾ ಮೂಲದ ನಿರಂಜನ್ ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದು ಚಂದಾಪುರದಲ್ಲಿ ಕುಟುಂಬ ಸಮೇತ ವಾಸವಿದ್ದಾರೆ. ನಿನ್ನೆ ರಾತ್ರಿ ಕೆಲಸ ಮುಗಿಸಿ ನಿರಂಜನ್ ಬರುತ್ತಿದ್ದ ವೇಳೆ ವೇಗವಾಗಿ ಬಂದ ಈಚರ್ ಲಾರಿ ಡಿಕ್ಕಿಯಾಗಿದೆ.
ಅಪಘಾತದ ಭೀಕರತೆಗೆ ನಿರಂಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಾದಚಾರಿಗೆ ಡಿಕ್ಕಿ ಹೊಡೆದ ಕೂಡಲೇ ಲಾರಿ ಚಾಲಕ ಗಾಡಿ ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದಿಂದ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಚಾರ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಸೂರ್ಯನಗರ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಲ್ಲದೇ ಅಪಘಾತ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮೈಸೂರು: ಬೈಕ್ ಬುಲೆರೋ ನಡುವೆ ಡಿಕ್ಕಿ ಇಬ್ಬರು ಸಾವು
ಬೈಕ್ ಬುಲೆರೋ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಿರಿಯಾಪಟ್ಟಣ ಕಡೆಯಿಂದ ಹುಣಸೂರಿಗೆ ತೆರಳುತ್ತಿದ್ದ ಆಂಧ್ರಪ್ರದೇಶ ಮೂಲದ ಬೊಲೆರೋ ವಾಹನ ಹುಣಸೂರಿನಿಂದ ಅತ್ತಿಗುಪ್ಪೆ ಕಡೆ ಬರುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಎರಡು ವಾಹನಗಳು ಮುಖಾಮುಖಿ ಅಪಘಾತದಲ್ಲಿ ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), ನಾಗರಾಜು(57) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications