Breaking: ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 17 ಆರೋಪಿಗಳಿಗೆ ಸೆಪ್ಟೆಂಬರ್ 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು (ಸೋಮವಾರ) ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಎ2 ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರೆ. ಉಳಿದ ಆರೋಪಿಗಳು ಮೈಸೂರು, ಬೆಳಗಾವಿಯ ಹಿಂಡಲಗಾ, ಶಿವಮೊಗ್ಗ ಮತ್ತು ತುಮಕೂರು ಜೈಲುಗಳಲ್ಲಿ ಇಡಲಾಗಿದೆ. ಇಂದು ಎಲ್ಲಾ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ನಲ್ಲಿ ವಿಚಾರಣೆ ನಡೆಯಿತು. ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಿದರು. ಪೆನ್ಡ್ರೈವ್, ಹಾರ್ಡ್ಡಿಸ್ಕ್ ಸೇರಿದಂತೆ ಹಲವು ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಜಡ್ಜ್ ಸಾಕ್ಷಿಗಳನ್ನು ಪರಿಶೀಲನೆ ಮಾಡಲಿದ್ದಾರೆ.
ಚಾರ್ಜ್ಶೀಟ್ನಲ್ಲಿ ಏನಿದೆ?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ಶೀಟ್ನಲ್ಲಿನ ಅನೇಕ ವಿವರಗಳು ಬಹಿರಂಗವಾಗಿದ್ದು, ದರ್ಶನ್ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿರುವುದನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ಪವಿತ್ರಾ ಗೌಡ ಕೂಡ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ದರ್ಶನ್ ಜೊತೆಗಿನ ಪರಿಚಯ, ಗೆಳೆತನ ಲಿವಿ ಇನ್ ರಿಲೇಷನ್ಶಿಪ್ ಬಗ್ಗೆ ಮಾಹಿತಿ ನೀಡಿದ್ದಾರೆ. ರೇಣುಕಾಸ್ವಾಮಿ ಗೌತಮ್ ಎನ್ನುವ ಹೆಸರಿನಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂದು ಪವಿತ್ರಾ ಗೌಡ ಹೇಳಿದ್ದಾರೆ.
ಚಾರ್ಜ್ಶೀಟ್ನಲ್ಲಿ ರೇಣುಕಾಸ್ವಾಮಿ ಕಿಡ್ನಾಪ್ಗೆ ಮಾಡಿದ ಪ್ಲಾನ್ನಿಂದ ಆತನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದು, ಆತ ಸಾವನ್ನಪ್ಪಿದ್ದು ಬಳಿಕ ಶವವನ್ನು ಸಾಗಿಸಲು, ಕೃತ್ಯವನ್ನು ಮುಚ್ಚಿಹಾಕಲು ಮಾಡಿದ ಪ್ರಯತ್ನಗಳ ಬಗ್ಗೆ ಕೂಡ ಆರೋಪಿಗಳು ಮಾಹಿತಿ ನೀಡಿದ್ದು, ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಜಾಮೀನು ಅರ್ಜಿ ಹಾಕ್ತಾರಾ?
ನಟ ದರ್ಶನ್ ಪರ ವಕೀಲರು ಚಾರ್ಜ್ಶೀಟ್ ಅನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ ಬಳಿಕ ಜಾಮೀನು ಅರ್ಜಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸೆಪ್ಟೆಂಬರ್ 12ರಂದು ಮತ್ತೆ ವಿಚಾರಣೆ ನಡೆಯಲಿದ್ದು, ಚಾರ್ಜ್ಶೀಟ್ನಲ್ಲಿರುವ ಕೆಲವು ಅಂಶಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವ ಸಾಧ್ಯತೆ ಕೂಡ ಇದೆ.












Click it and Unblock the Notifications