ಕೊನೆಗೂ ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ
ಬೆಂಗಳೂರು, ನ 17: ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನದ ಮುನ್ನಾದಿನ, ಬಾಕಿಯಿದ್ದ ಒಂದು ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯ ಯಶವಂತಪುರ ( ಸಂ: 153) ಕ್ಷೇತ್ರದಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ, ಪಿ.ನಾಗರಾಜ್ ಅವರ ಹೆಸರನ್ನು ಅಂತಿಮಗೊಳಿಸಿದೆ.
ಕ್ಷೇತ್ರದಿಂದ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಎಸ್.ಟಿ.ಸೋಮಶೇಖರ್ ಮತ್ತು ಟಿ.ಎನ್. ಜವರಾಯಿಗೌಡ, ಜೆಡಿಎಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸುತ್ತಿದ್ದಾರೆ.

ಎಐಸಿಸಿನ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್, ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕೊನೆ ಗಳಿಗೆಯಲ್ಲಿ ಯಶವಂತಪುರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿದ್ದ ರಾಜಕುಮಾರ್, ಸ್ಪರ್ಧಿಸಲು ನಿರಾಕರಿಸಿದ್ದರು.
ಹಾಗಾಗಿ, ಅಭ್ಯರ್ಥಿಯನ್ನು ಫೈನಲ್ ಮಾಡಲು, ರಾಜ್ಯ ಕಾಂಗ್ರೆಸ್ ಹರಸಾಹಸ ಪಟ್ಟು, ಕೊನೆಗೆ ಪಿ. ನಾಗರಾಜ್ ಅವರಿಗೆ ಟಿಕೆಟ್ ನೀಡಿದೆ.
ಒಟ್ಟು 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ನವೆಂಬರ್ 18 ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿದೆ. ಡಿಸೆಂಬರ್ 9ರಂದು ಮತ ಎಣಿಕೆ ನಡೆಯಲಿದೆ.
ಎಂ. ರಾಜಕುಮಾರ್ ಮತ್ತು ಪಾಳ್ಯ ನಾಗರಾಜ್ ಇಬ್ಬರಲ್ಲಿ ಒಬ್ಬರು ಯಶವಂತಪುರದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ರಾಜಕುಮಾರ್ ಟಿಕೆಟ್ ನಿರಾಕರಿಸಿದ್ದರಿಂದ, ಅಭ್ಯರ್ಥಿ ಯಾರು ಎನ್ನುವ ವಿಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.












Click it and Unblock the Notifications