ಉಪ ಚುನಾವಣೆ: ಆರ್ಆರ್ ನಗರ ಮತ ಎಣಿಕೆಗೆ ಸಕಲ ಸಿದ್ಧತೆ!
ಬೆಂಗಳೂರು, ನ. 09: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಚುನಾವಣೆಯಲ್ಲಿ 16 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಒಟ್ಟು 4,62,236 ಮತದಾರರಲ್ಲಿ 2,09,828(ಶೇ.45.48) ಮತದಾರರು ಮತದಾನ ಮಾಡಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿ ಜೆ. ಮಂಜುನಾಥ್ ತಿಳಿಸಿದ್ದಾರೆ.
Recommended Video
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಸಿದ್ಧತೆಗೆ ಸಂಬಂಧಿಸಿದಂತೆ ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಅವರು ಜ್ಞಾನಾಕ್ಷಿ ವಿದ್ಯಾನಿಕೇತನ್ ಶಾಲೆ(ಮತ ಎಣಿಕೆ ಕೇಂದ್ರ)ಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಶಿರಾ, ಆರ್ಆರ್ ನಗರ ಉಪ ಚುನಾವಣೆ ಮತ ಎಣಿಕೆ: ಗೆಲ್ಲೋದು ಇವರೇನಾ?
ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿದ್ದು, ಪ್ರತಿ ಟೇಬಲ್ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗಿದೆ. ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್ಗಳನ್ನು ಬೆಳಗ್ಗೆ 7 ಗಂಟೆಗೆ ಕೇಂದ್ರಕ್ಕೆ ಬರುವಂತೆ ತಿಳಿಸಿದ್ದಾರೆ.
ಪಾಸ್ ಇದ್ದವರಿಗೆ ಮಾತ್ರ ಪ್ರವೇಶ
ಯಾರಿಗೆ ಗುರುತಿನ ಚೀಟಿ ನೀಡಲಾಗಿದೆ ಅಂತಹವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶವಿದೆ. 4 ಕೊಠಡಿಗಳಲ್ಲಿ 28 ಎಣಿಕಾ ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 3 ಸಹಾಯಕ ಚುನಾವಣಾಧಿಕಾರಿಗಳನ್ನು ಎಣಿಕೆ ಕಾರ್ಯಕ್ಕಾಗಿ ನಿಯೋಜನೆ ಮಾಡಿಕೊಳ್ಳಲಾಗಿದೆ. ಎಣಿಕೆ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ 2 ಹಂತದ ತರಬೇತಿ ನೀಡಲಾಗಿದೆ ಎಂದು ಬೆಂಗಳೂರು ನಗರ ಚುನಾವಣಾಧಿಕಾರಿ ಮಂಜುನಾಥ್ ಅವರು ಹೇಳಿದ್ದಾರೆ.
ಬೆಳಗ್ಗೆ 8ಕ್ಕೆ ಮತ ಎಣಿಕೆ ಆರಂಭ
ಎಣಿಕೆ ಕಾರ್ಯಕ್ಕೆ ನಿಯೋಜನೆ ಮಾಡಿರುವ ಸಿಬ್ಬಂದಿಗೆ ಮತ ಎಣಿಕೆ ಕೇಂದ್ರಕ್ಕೆ ಬರುವವರೆಗೆ ಯಾವ ಟೇಬಲ್ನಲ್ಲಿ ಕೂರಲಿದ್ದೇವೆ ಎಂಬುದು ತಿಳಿದಿರುವುದಿಲ್ಲ. ನಾಳೆ ಬೆಳಗ್ಗೆ ಬಂದ ಬಳಿಕ ತಿಳಿಯಲಿದೆ ಎಂದು ವಿವರಿಸಿದರು. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಾಗುತ್ತದೆ. ನಂತರ 8ಕ್ಕೆ ಪೋಸ್ಟಲ್ ಬ್ಯಾಲೆಟ್ಗಳ ಎಣಿಕೆ ಪ್ರಾರಂಭವಾಗಲಿದ್ದು, 8.30ಕ್ಕೆ ಇ.ವಿ.ಎಂ ಎಣಿಕೆ ಪ್ರಾರಂಭವಾಗಲಿದೆ ಎಂದು ಜೆ. ಮಂಜುನಾಥ್ ವಿವರಿಸಿದ್ದಾರೆ.
Exit Poll : ಆರ್. ಆರ್. ನಗರದಲ್ಲಿ ಬಿಜೆಪಿ, ಕಾಂಗ್ರೆಸ್ ನೇರ ಹಣಾಹಣಿ
ವಿವಿ ಪ್ಯಾಟ್ಗಳ ಸ್ಲಿಪ್ ಮತ ಎಣಿಕೆ
ಒಟ್ಟು 25 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಅಲ್ಲದೆ ಚುನಾವಣಾ ಆಯೋಗದ ನಿರ್ದೇಶನದಂತೆ ಇ.ವಿ.ಎಂ ಎಣಿಕೆ ಮುಗಿದ ನಂತರ 1 ಮತಗಟ್ಟೆಯ ವಿ.ವಿ. ಪ್ಯಾಟ್ ಯಂತ್ರವನ್ನು ಚುನಾವಣಾ ವೀಕ್ಷಕರು ಆರಿಸಲಿದ್ದು, 4 ಮತಗಟ್ಟೆಗಳ ವಿ.ವಿ. ಪ್ಯಾಟ್ಗಳನ್ನು ಚುನಾವಣಾ ಅಭ್ಯರ್ಥಿಗಳು ಆರಿಸಲಿದ್ದಾರೆ. ಆ 5 ಮತಗಟ್ಟೆಗಳ ವಿ.ವಿ. ಪ್ಯಾಟ್ಗಳಲ್ಲಿರುವ ಸ್ಲಿಪ್ ಎಣಿಕೆ ಕಾರ್ಯ ಮಾಡಲಾಗುತ್ತದೆ.
ಮುಲಾಜಿಲ್ಲದೆ ಹೊರಗಡೆ ಕಳುಹಿಸುತ್ತೇವೆ
ಮತ ಎಣಿಕೆ ಕಾರ್ಯದಲ್ಲಿ ಕಾರ್ಯ ನಿರ್ವಹಿಸುವ ಯಾವುದೇ ಸಿಬ್ಬಂದಿ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಅಥವಾ ಬ್ಯಾಗ್ ತರುವ ಹಾಗಿಲ್ಲ. ಏಜೆಂಟ್ಗಳು ಕೂಡ ತರಲು ಅವಕಾಶವಿಲ್ಲ. ಮಾಧ್ಯಮದವರಿಗೆ ಮಾಧ್ಯಮ ಕೇಂದ್ರದ ವ್ಯವಸ್ಥೆ ಮಾಡಿದ್ದು, ಮಾಧ್ಯಮ ಕೇಂದ್ರದಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿರುತ್ತದೆ.
ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರೂ ಕೂಡ ಮಾಸ್ಕ್ ಧರಿಸಬೇಕು. ಹ್ಯಾಂಡ್ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಸಾಮಾಜಿಕ ಅಂತರ ಕೂಡ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಏಜೆಂಟ್ಗಳು ಅಶಿಸ್ತು ತೋರಿದರೆ ಮುಲಾಜಿಲ್ಲದೆ ಹೊರಗಡೆ ಕಳುಹಿಸುತ್ತೇವೆ ಎಂದರು.