ಕಾವೇರಿ ಕಣಿವೆಯಲ್ಲಿ ನೀರಿನ ಸಂಗ್ರಹ ಕುಸಿತ: ಶೀಘ್ರ ಸರ್ವಪಕ್ಷಗಳ ಸಭೆ
ಕಾವೇರಿ ಕಣಿವೆಯ ಅಣೆಕಟ್ಟುಗಳಲ್ಲಿ ನೀರಿನ ಕೊರತೆ. ಈ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರದಿಂದ ಸರ್ವಪಕ್ಷಗಳ ಸಭೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಎಂ.ಬಿ. ಪಾಟೀಲ್ ಹೇಳಿಕೆ.
ಬೆಂಗಳೂರು, ಆಗಸ್ಟ್ 2: ಕಾವೇರಿ ಕಣಿವೆಯಲ್ಲಿ ಮುಂಗಾರು ಮಳೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಕಣಿವೆ ವ್ಯಾಪ್ತಿಯ ನಾಲ್ಕು ಜಲಾಶಯಗಳಲ್ಲಿ ನೀರಿನ ಶೇಖರಣೆ ಪ್ರಮಾಣ ಗಣನೀಯವಾಗಿ ಕುಸಿತಗೊಂಡಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಮಾಹಿತಿಯನ್ನು ಬಿಡುಗಡೆ ಮಾಡಿ ಸಧ್ಯದ ಪರಿಸ್ಥಿತಿಯಲ್ಲಿ ಬೆಳೆಗಳಿಗೆ ನೀರು ಬಿಡುಗಡೆ ಮಾಡುವುದು ಕಷ್ಟಸಾಧ್ಯ. ಈ ಬಗ್ಗೆ ಶೀಘ್ರದಲ್ಲಿ ಸರ್ವಪಕ್ಷಗಳ ಮುಖಂಡರು, ನೀರಾವರಿ ತಜ್ಞರು, ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ವಿವರ ನೀಡುವುದಾಗಿ ಸಚಿವರು ತಿಳಿಸಿದರು.

ರೈತರು ಬೆಳೆಗಳಿಗೆ ನೀರು ಬಿಡಗಡೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಕನಿಷ್ಠ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆಯೂ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ಸುಮಾರು 131 ಟಿ.ಎಂ.ಸಿ. ನೀರು ಅಗತ್ಯ ಇದೆ. ನಮ್ಮಲ್ಲಿ ಈಗಿರುವ ದಾಸ್ತಾನು 43.30 ಟಿ.ಎಂ.ಸಿ. ನೀರಿದೆ. ಬೆಂಗಳೂರು ನಗರ ಸೇರಿದಂತೆ ಈ ಬಾಗದ ಜನರಿಗೆ ಕುಡಿಯುವ ನೀರು ಒದಗಿಸಲು ಕನಿಷ್ಠ 34 ಟಿ.ಎಂ.ಸಿ. ನೀರಿನ ಅಗತ್ಯತೆ ಇದೆ. ಎಲ್ಲಾ ಸಾಧಕ-ಬಾಧಕ ಕುರಿತಂತೆ ಎಲ್ಲಾ ಮುಖಂಡರೊಂದಿಗೆ ಚರ್ಚಿಸಿ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.
ತಮಿಳುನಾಡಿಗೆ ಕಳೆದ ಎರಡು ತಿಂಗಳಿಂದ ಕೇವಲ 7 ಟಿ.ಎಂ.ಸಿ. ನೀರನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಕ್ಷಗಳ ಮುಖಂಡರು ನೀಡುವ ಸಲಹೆಗಳನ್ನು ಆಧರಿಸಿ ರೈತನಾಯಕರಿಗೆ ವಿವರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.












Click it and Unblock the Notifications