Airlift: ಯಾವೊಬ್ಬ ಪ್ರಯಾಣಿಕನೂ ಕ್ವಾರಂಟೈನ್ ತಪ್ಪಿಸಿಕೊಳ್ಳುವಂತಿಲ್ಲ
ಬೆಂಗಳೂರು, ಮೇ 8: ವಿದೇಶದಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವಂತಹ ಯಾವ ಒಬ್ಬ ಪ್ರಯಾಣಿಕ ಕೂಡ ಕ್ವಾರಂಟೈನ್ ತಪ್ಪಿಸಿಕೊಳ್ಳುವ ಹಾಗಿಲ್ಲ. ನಿಯೋಜಿತ ಅಧಿಕಾರಿಗಳು ಈ ಬಗ್ಗೆ ಬಹಳ ಎಚ್ಚರ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಮ್ಮ ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ವಿದೇಶದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಲ್ಪಿಸುವ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಯಾಣಿಕರ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ವಿದೇಶಗಳಲ್ಲಿ ಭಾರತೀಯರು: ಅತಿದೊಡ್ಡ AirLift ಗೆ ಮುಂದಾದ ಭಾರತ
ಈ ಕಾರ್ಯಕ್ಕೆ ನಿಯೋಜನೆಕೊಂಡಿರುವ ಎಲ್ಲಾ ಅಧಿಕಾರಿಗಳು ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.
ಮೂರು ತರದ ಹೋಟೆಲ್
ಮೇ 11 ರಿಂದ, ವಿದೇಶದಿಂದ ಆಗಮಿಸುವ ರಾಜ್ಯದ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಮೂರು ತರದ ಹೋಟೆಲ್ ಗಳನ್ನು ಗುರುತಿಸಲಾಗಿದ್ದು, ಪ್ರಯಾಣಿಕರು ತಮ್ಮ ಸ್ವಂತ ಖರ್ಚಿನಲ್ಲಿ ಸರ್ಕಾರ ನಿಗದಿಪಡಿಸಿರುವ ದರವನ್ನು ಭರಿಸಿ, ಇಚ್ಚಿಸುವ ಹೋಟೆಲ್ನಲ್ಲಿ 14 ದಿನಗಳ ಕ್ವಾರಂಟೈನ್ ವ್ಯವಸ್ಥೆಗೆ ಒಳಗಾಗಬಹುದು. ವಿಮಾನ ಪ್ರಯಾಣಕ್ಕೆ ಮುನ್ನ ಹಾಗೂ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಯಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ರಾಜೀವ್ ಗಾಂಧಿ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು
ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕು ಶಂಕೆ ಕಂಡುಬಂದಲ್ಲಿ, ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಕಳುಹಿಸಿಕೊಡಲಾಗುವುದು. ಹೋಟೆಲ್ಗಳಲ್ಲೂ ಸಹ ವೈದ್ಯಕೀಯ ಸಿಬ್ಬಂದಿಗಳನ್ನು ಪ್ರಯಾಣಿಕರ ಆರೋಗ್ಯ ಸೇವೆಗೆ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ನಗರದಲ್ಲಿ ಗುರುತಿಸಿರುವ ಹೋಟೆಲ್ಗಳಲ್ಲಿ
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಯಾಣಿಕರ ಕ್ವಾರಂಟೈನ್ ವ್ಯವಸ್ಥೆ ಮಾಡಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಪ್ರಯಾಣಿಕರಿಗೆ ಮೊದಲ ಬೆಂಗಳೂರು ನಗರದಲ್ಲಿ ಗುರುತಿಸಿರುವ ಹೋಟೆಲ್ಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು. ಪ್ರಯಾಣಿಕರ ಸಂಖ್ಯೆ ಹೆಚ್ಚಿದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರವಲಯದಲ್ಲಿ ಗುರುತಿಸಿರುವ ಹೋಟೆಲ್ಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಭಾರತೀಯ ಸಿಮ್ಕಾರ್ಡ್ ಗಳನ್ನು ನೀಡಲಾಗುವುದು
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸಹಾಯವಾಗುವಂತೆ ಹೆಲ್ಪ್ಡೆಸ್ಕ್ ತೆರೆಯಲಾಗಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಇಳಿದ ತಕ್ಷಣವೇ ಅವರಿಗೆ ಭಾರತೀಯ ಸಿಮ್ಕಾರ್ಡ್ ಗಳನ್ನು ನೀಡಲಾಗುವುದು. ಎಲ್ಲಾ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಿ ನಿಗದಿತ ಹೋಟೆಲ್ಳಿಗೆ ಅಧಿಕಾರಿ ನೇತೃತ್ವದಲ್ಲಿ ಕೇವಲ 20 ಪ್ರಯಾಣಿಕರನ್ನು ಬಸ್ಗಳ ಮೂಲಕ ಗುರುತಿಸಿರುವ ಹೋಟೆಲ್ಗಳಿಗೆ ಕರೆದುಕೊಂಡು ಹೋಗಲಾಗುವುದು. ಪ್ರತಿ ಹೋಟೆಲ್ಗೆ ಒಬ್ಬ ಅಧಿಕಾರಿಯನ್ನು ಉಸ್ತುವಾರಿ ನೋಡಿಕೊಳ್ಳಲು ನೇಮಿಸಲಾಗಿದೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.