Ambedkar Statue: ಬೆಂಗಳೂರಿನಲ್ಲಿ ದೇಶದ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಿಎಂ
ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ? ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಕರೆ ನೀಡಿದರು. ಅಲ್ಲದೆ ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಂ ಸ್ಥಾಪಿಸಲಾಗುವುದು. ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಘೋಷಿಸಿದರು.
ಆರ್.ಎಸ್.ಎಸ್ ಮತ್ತು ಬಿಜೆಪಿ ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿನಿಂತು, ಸತ್ಯ ಹೇಳುವ ಎದೆಗಾರಿಕೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಕಾರಣ ಸೈದ್ಧಾಂತಿಕ ಹೋರಾಟವನ್ನು ನಾವು ನೀವೆಲ್ಲ ಈ ದೇಶದ ಭವಿಷ್ಯಕ್ಕಾಗಿ ಮುನ್ನಡೆಸಬೇಕಾಗಿದೆ. ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದಿದ್ದಾಗಿ ಅಂಬೇಡ್ಕರ್ ಹೇಳಿದ ಮಾತು ಅವರ ಆಶಯ ಎಂಥದ್ದು ಎನ್ನುವುದನ್ನು ತೋರಿಸುತ್ತದೆ ಎಂದು ಸ್ಮರಿಸಿದ್ದಾರೆ.

1952ರ ಜನವರಿ 18ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಈ ಸತ್ಯ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಎಲ್ಲ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನೀಡಿದ ಅಂಬೇಡ್ಕರ್ ಬೇಕು, ಇವರು ನಮಗೆ ಬೇಕು ಎಂದು ಹೇಳಿದ್ದಾರೆ. ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ ನರೇಂದ್ರ ಮೋದಿ ಅವರೇ? ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಕೂಡ ಹಾಕಿದ್ದಾರೆ.

ಸಾರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರುಗಳಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ. ಇಂದಿನಿಂದ 32 ಜಿಲ್ಲೆಗಳಲ್ಲಿ ಒಟ್ಟು 33 ಡಿಸಿಆರ್ಇ ಪೊಲೀಸ್ ಠಾಣೆಗಳು ಕಾರ್ಯಾರಂಭ ಮಾಡಲಿವೆ. ಸಾಂಕೇತಿಕವಾಗಿ ಒಂದು ಕೇಂದ್ರ ಡಿಸಿಆರ್ಇ ಠಾಣೆಯನ್ನು ಉದ್ಘಾಟಿಸಿದ್ದೇನೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications