ಕೊರೊನಾ ಕಥೆ: ಬೆಂಗಳೂರಿಗರಿಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ
ಬೆಂಗಳೂರು, ಏಪ್ರಿಲ್ 12: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ರೋಗದ ವಿರುದ್ಧ ಹೋರಾಡಬೇಕಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿಕೊಂಡಿದ್ದಾರೆ.
ಇಡೀ ದೇಶ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿದ್ದೇವೆ. ಬೆಂಗಳೂರು ನಗರದಲ್ಲೂ ಸೋಂಕಿತರ ಸಂಖ್ಯೆಯ ಹೆಚ್ಚಿತ್ತಿದೆ. ಕಳೆದ ವರ್ಷ ಇಂಥ ಪರಿಸ್ಥಿತಿಯನ್ನು ಪೊಲೀಸರು ಸಮರ್ಥವಾಗಿ ಎದುರಿಸಿದ್ದಾರೆ ಎಂದು ಹೇಳುವುದಕ್ಕೆ ಸಂತೋಷವಾಗುತ್ತದೆ ಎಂದು ತಿಳಿಸಿದರು.
ಕೊರೊನಾವೈರಸ್ ಸೋಂಕನ್ನು ತಡೆಗಟ್ಟಲು ಈ ವರ್ಷವೂ ಕೂಡಾ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕಿದೆ. ನಿಮ್ಮ ಸಹಕಾರದಿಂದ ಸಾಮಾಜಿಕ ಅಂತರ, ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಅನುಸರಿಸುತ್ತೇವೆ. ಸೋಂಕಿನ ಹರಡುವಿಕೆಯನ್ನು ತಡೆಗಟ್ಟುತ್ತೇವೆ ಎಂಬ ಬಗ್ಗೆ ಸಂಪೂರ್ಣ ನಂಬಿಕೆಯಿದೆ. ಈ ನಿಟ್ಟಿನಲ್ಲಿ ನಿಮ್ಮಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ಕಮಲ್ ಪಂತ್ ಹೇಳಿದ್ದಾರೆ.

10 ಸಾವಿರ ಗಡಿ ದಾಟಿದ್ದ ಕೊರೊನಾವೈರಸ್:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ದಿನದಲ್ಲೇ 10 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಒಂದೇ ದಿನ 10250 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1065290ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 40 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12889ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 2638 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೂ 983157 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 69225 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲೇ 7584 ಮಂದಿಗೆ ಕೊವಿಡ್-19:
ಕರ್ನಾಟಕದಲ್ಲಿ ದೃಢಪಟ್ಟಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇ.75ರಷ್ಟು ಪ್ರಕರಣಗಳು ಸಿಲಿಕಾನ್ ಸಿಟಿಯಲ್ಲಿ ಪತ್ತೆಯಾಗಿವೆ. ಒಂದೇ ದಿನ ಬೆಂಗಳೂರಿನಲ್ಲಿ 7584 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಹಾಮಾರಿಗೆ 29 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 4769ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿಯೊಂದರಲ್ಲೇ 42525 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.












Click it and Unblock the Notifications