ಇಂದು ಸರ್ಕಾರಿ ಕಚೇರಿ - ಶಾಲೆ ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ
Recommended Video

ಬೆಂಗಳೂರು, ನವೆಂಬರ್ 12: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ರಾಜ್ಯದ ಎಲ್ಲ ಸರ್ಕಾರಿ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಖಾಸಗಿ ಶಾಲಾ ಕಾಲೇಜುಗಳಿಗೂ ಒಂದು ದಿನದ ರಜೆ ಘೋಷಿಸಲಾಗಿದೆ. ಅನಂತ್ ಕುಮಾರ್ ಅವರ ಗೌರವಾರ್ಥ ರಾಜ್ಯದಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮೌಲ್ಯ ಮಾಪನ ಕುಲಸಚಿವ ಎಸ್.ಬಿ. ಮಾಡಗಿ ತಿಳಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಪತಿ ಪ್ರೊ. ಪ್ರಮೋದ ಗಾಯಿ ಮಾಹಿತಿ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.ಅನಂತ್ ಕುಮಾರ್ ಅವರ ಗೌರವಾರ್ಥವಾಗಿ ರಾಜ್ಯದಲ್ಲಿನ ಎಲ್ಲ ಸರ್ಕಾರಿ ಕಚೇರಿಗಳಿಗೂ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೂ (ಅನುದಾನ ಪಡೆಯುವ ಎಲ್ಲ ವಿದ್ಯಾಸಂಸ್ಥೆಗಳು ಸೇರಿದಂತೆ) ಸೋಮವಾರ (ನ. 12) ರಜೆ ಘೋಷಿಸಲಾಗಿದೆ.
ಅಲ್ಲದೆ, ನ. 12 ನ. 14ರವರೆಗೆ ರಾಜ್ಯದಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಸಮಾರಂಭಗಳು, ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.
ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲಾಗುವ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ್ವವನ್ನು ಅರ್ಧಮಟ್ಟದಲ್ಲಿ ಏರಿಸಲಾಗುವುದು.
ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಕಾಯ್ದೆ, 1881ರ ಪ್ರಕಾರವೂ ಕೂಡ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಜನಪ್ರಿಯ ರಾಜಕಾರಣಿ, ಕೇಂದ್ರ ಸಚಿವ, ಬಿಜೆಪಿಯ ಪ್ರಮುಖ ನಾಯಕ ಅನಂತ್ ಕುಮಾರ್ (59) ಅವರು ನವೆಂಬರ್ 12ರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ಕಡೆಯ ಹಂತದಲ್ಲಿ ಲಂಡನ್ನಿಗೆ ಹೋಗಿ ಚಿಕಿತ್ಸೆ ಪಡೆದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ. ಸೋಮವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅವರು ನಗರದ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.












Click it and Unblock the Notifications