ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಕೊನೆ ದಿನ ಯಾವುದು?
ಬೆಂಗಳೂರು, ಫೆಬ್ರವರಿ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪ್ರತಿ ವರ್ಷ ಆಚರಿಸುವ ನಾಡಪ್ರಭು ಕೆಂಪೇಗೌಡ ದಿನಾಚರಣೆ ಕುರಿತು ಮಹಾಪೌರರ ಅಧ್ಯಕ್ಷತೆಯಲ್ಲಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪ್ರತಿ ವರ್ಷ ಆಚರಿಸುವ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಏಪ್ರೀಲ್ 4 ರಂದು ಆಚರಣೆ ಮಾಡಲು ನಿರ್ಧರಿಸಲಾಗಿದ್ದು, ಪ್ರಸಕ್ತ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಅರ್ಜಿಯನ್ನು ಮಾರ್ಚ್ 10 ರೊಳಗೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಸಲ್ಲಿಸಬಹುದಾಗಿದೆ ಎಂದು ಮಹಾಪೌರರು ತಿಳಿಸಿದರು.
ಪುಟ್ಪಾತ್ ಒತ್ತುವರಿದಾರರಿಗೆ ಎಚ್ಚರಿಕೆ ಕೊಟ್ಟ ಬಿಬಿಎಂಪಿ ಮೇಯರ್
ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಹಾಪೌರರು ಮಾತನಾಡಿ, ಪಾಲಿಕೆ ವತಿಯಿಂದ ಪ್ರತಿವರ್ಷವೂ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಬಾರಿ ಇನ್ನೂ ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಲು ಕ್ರಮವಹಿಸಲಾಗುವುದು. ಈ ನಿಟ್ಟಿನಲ್ಲಿ ಮಾಗಡಿ ಕೆಂಪಾಪುರ ಗ್ರಾಮದಿಂದ ಜ್ಯೋತಿ ತರುವ ಸ್ಥಳಕ್ಕೆ ಶೀಘ್ರ ಭೇಟಿ ನೀಡಿ ತಪಾಸಣೆ ನಡೆಸಲಾಗುವುದು ಎಂದು ಹೇಳಿದರು.
ಕೆಂಪೇಗೌಡ ದಿನಾಚರಣೆ ಆಚರಿಸುವ ಸಂಬಂಧ ಶೀಘ್ರ ಮತ್ತೊಂದು ಸಭೆ ನಡೆಸಿ ಕೆಂಪೇಗೌಡ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನಡೆಸಲು ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳು ಕ್ರಮವಹಿಸಲಾಗುವುದು. ಈ ಪೈಕಿ ಸ್ವಾಗತ ಮತ್ತು ಸನ್ಮಾನ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ, ವೇದಿಕೆ ಮತ್ತು ದೀಪಾಲಂಕಾರ ಸಮಿತಿ, ಕ್ರೀಡಾ, ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆ ಸಮಿತಿ, ಊಟೋಪಚಾರ ಸಮಿತಿ, ಉತ್ತಮ ಅಧಿಕಾರಿ, ನೌಕರರ ಆಯ್ಕೆ ಹಾಗೂ ಸನ್ಮಾನ ಸಮಿತಿ, ಪ್ರಶಸ್ತಿ ಪುರಸ್ಕೃತರ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದರು.