ಬೆಂಗಳೂರಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಬಿಬಿಎಂಪಿ ಆಯುಕ್ತರ ಸೂಚನೆ
ಬೆಂಗಳೂರು, ಮೇ. 16: ಪ್ರಸಕ್ತ ಸಾಲಿನಲ್ಲಿ ಬೆಂಗಳೂರಿನಲ್ಲಿ 331 ಡೆಂಗ್ಯು ಪ್ರಕರಣ ಪತ್ತೆಯಾಗಿವೆ. ನಗರದಲ್ಲಿ ಪ್ರಕರಣ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಬೇಸಿಗೆಯಲ್ಲಿ ಎಳನೀರು ಕುಡಿದು ಎಲ್ಲೆಂದರೆ ತೆಂಗಿನ ಚಿಪ್ಪುಗಳನ್ನು ಬಿಸಾಡಲಾಗಿದೆ. ಇದೀಗ ಮಳೆ ಬರುತ್ತಿದ್ದು, ಡೆಂಗ್ಯು ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ತಮಿಳುನಾಡಿನಲ್ಲಿ 2361 ಪ್ರಕರಣ ವರದಿಯಾಗಿದ್ದು ದೇಶದಲ್ಲಿ ಮೊದಲ ಸ್ಥಾನ ಪಡೆದಿದೆ.
ಕರ್ನಾಟಕದಲ್ಲಿ 1417 ಡೆಂಗ್ಯು ಪ್ರಕರಣ ವರದಿಯಾಗಿದ್ದು ಎರಡನೇ ಸ್ಥಾನದಲ್ಲಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಡೆಂಗ್ಯು ನಿಯಂತ್ರಣ ಮಾಡಲು ಬಿಬಿಎಂಪಿ ಸಕಲ ತಯಾರಿ ನಡೆಸಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 331 ಪ್ರಕರಣಗಳು ಪತ್ತೆಯಾಗಿದ್ದು, ಪ್ರಕರಣಗಳು ಹೆಚ್ಚಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ಮಳೆ ನೀರು ಎಲ್ಲೂ ನಿಲ್ಲದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗದ ಹರಡುವಿಕೆ ಹಾಗೂ ನಿಯಂತ್ರಣದ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸಿ ಜೊತೆಗೆ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್ ಗಳಲ್ಲಿ ಧ್ವನಿ ವರ್ಧಕಗಳ ಮೂಲಕ ಡೆಂಗ್ಯು ನಿಯಂತ್ರಿಸುವ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಅರಿವು: ಪಾಲಿಕೆಯ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಎ. ಎನ್. ಎಂ ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ಆಗುವ ತಾಣಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಲಾರ್ವಾ ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸುವ ಕೆಲಸ ಮಾಡುತ್ತಾರೆ. ಆ ಬಳಿಕ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗ್ಯಾಂಗ್ ಮ್ಯಾನ್ ಗಳು ಸ್ಥಳಕ್ಕೆ ಭೇಟಿ ನೀಡಿ ನಾಶಪಡಿಸುತ್ತಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಆಯುಕ್ತರಿಗೆ ಮಾಹಿತಿ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಔಷಧಗಳು ಹಾಗೂ ಅದರಿಂದ ಬರುವ ಖಾಯಿಲೆಗೆ ಚಿಕಿತ್ಸೆ ನೀಡಲು ಬೇಕಾಗುವ ಅಗತ್ಯ ಔಷಧಗಳು ಲಭ್ಯವಿರಬೇಕು. ರಸ್ತೆ ಬದಿ ಮಾರಾಟ ಮಾಡುವ ಎಳನೀರು ಅಂಗಡಿಯವರಿಗೆ ತೆಂಗಿನ ಚಿಪ್ಪುಗಳನ್ನು ಕೂಡಲೇ ತೆರವು ಮಾಡಲು ಸೂಚನೆ ನೀಡಬೇಕು ಎಂದು ತಿಳಿಸಿದರು.
ಜಲಮಂಡಳಿ ಕುಡಿಯುವ ನೀರು ಸಂಗ್ರಹಿಸುವ ಸ್ಥಳದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕುಡಿಯುವ ನೀರು ಹರಿಯುವ ಪೈಪ್ ಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರು ಸಂಪರ್ಕಕ್ಕಾಗಿ ರಸ್ತೆ ಬದಿಯಲ್ಲಿ ಇರಿಸಿರುವ ಪೈಪ್ ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಎಲ್ಲೆಲ್ಲಿ ನೀರು ನಿಂತಿದೆ ಎಂಬುದನ್ನು ಪರಿಶೀಲಿಸಿ ಅದನ್ನು ಸ್ವಚ್ಛ ಮಾಡಬೇಕೆಂದು ಮುಖ್ಯ ಆಯುಕ್ತರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Recommended Video