ಅಶ್ವಿನಿ ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಅಶ್ವಿನಿ ಪುನೀತ್ ರಾಜ್ಕುಮಾರ್ ಬಗ್ಗೆ ದರ್ಶನ್ ಫ್ಯಾನ್ ಎಂದು ಹೇಳಿಕೊಂಡು ಅವಹೇಳನಕಾರಿ ಪೋಸ್ಟ್ ಮಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪೋಸ್ಟ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಪೋಸ್ಟ್ ಡಿಲೀಟ್ ಮಾಡಲಾಗಿತ್ತು.
ಗಜಪಡೆ ಎನ್ನುವ ಎಕ್ಸ್ ಅಕೌಂಟ್ನಿಂದ ಮೊದಲು ಪೋಸ್ಟ್ ಮಾಡಲಾಗಿತ್ತು, ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಅಕೌಂಟ್ ಹೆಸರನ್ನು ಸುದೀಪ್ ಅಭಿಮಾನಿ ಎಂದು ಬದಲಾಯಿಸುವ ಮೂಲಕ ಫ್ಯಾನ್ಸ್ ವಾರ್ ಮಾಡಲು ಕಿಡಿಗೇಡಿ ಪ್ರಯತ್ನಿಸಿದ್ದ. ಬಳಿಕ ಪೋಸ್ಟ್ ಡಿಲೀಟ್ ಮಾಡಿದ್ದ.

ಪುನೀತ್ ಅಭಿಮಾನಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪೋಸ್ಟ್ ಹಾಕಿದವನ ವಿರುದ್ಧ ದೂರು ಕೂಡ ನೀಡಿದ್ದಾರೆ. ಬಳಿಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಈ ರೀತಿ ವರ್ತಿಸದಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ವಿಚಾರ ದೊಡ್ಡದಾಗುತ್ತಿದ್ದಂತೆ, ಚಿತ್ರರಂಗದ ಹಲವರು ಕೂಡ ಟ್ವೀಟ್ ಮಾಡಿ, ಖಂಡಿಸಿದ್ದರು.
ಸಿದ್ದರಾಮಯ್ಯ ಎಚ್ಚರಿಕೆ
ಇನ್ನು ಈ ವಿಚಾರ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿದ್ದು, ಎಕ್ಸ್ನಲ್ಲಿ ಪೋಸ್ಟ್ ಮಾಡುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ತಮ್ಮ ಪೋಸ್ಟ್ನಲ್ಲಿ ಎಲ್ಲಿಯೂ ಅಶ್ವಿನಿ ಪುನೀತ್ ಅವರ ಹೆಸರು ಉಲ್ಲೇಖ ಮಾಡದೇ ಇದ್ದರೂ, ಹೆಣ್ಣಿನ ಬಗ್ಗೆ ಅವಹೇಳನ ಮಾಡಿದರೆ ತಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಪೋಸ್ಟ್ನಲ್ಲಿ, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
— Siddaramaiah (@siddaramaiah) April 6, 2024
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ… pic.twitter.com/fT48QzaWD5
ಆದರೆ ಕೆಲವು ಕಿಡಿಗೇಡಿಗಳು ಮಹಿಳೆಯನ್ನು ಮತ್ತೆ ಹಿಂದಕ್ಕೆ ತಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ.
ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications