ಮಾದಕ ವ್ಯಸನಿಗಳಾಗಬೇಡಿ, ಆರೋಗ್ಯವಂತರಾಗಿ:ಪರಮೇಶ್ವರ್
Recommended Video
ಬೆಂಗಳೂರು, ಜೂನ್ 26: ಆರೋಗ್ಯಕರ ಜೀವನ ನಡೆಸಬೇಕಾದರೆ ಮಾದಕ ಸೇವನೆಯನ್ನು ತ್ಯಜಿಸಬೇಕು, ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಣಕ್ಕೆ ತರಬೇಕು ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವನ್ನು ಜನರಲ್ಲಿ ಅರಿವು ಮೂಡಿಸುವ ಮೂಲಕ ಆಚರಿಸಬೇಕು. ಇಡೀ ವಿಶ್ವದಲ್ಲಿ ಮಾದಕ ವಸ್ತುಗಳನ್ನು ಕಾನೂನು ಬಾಹಿರವಾಗಿ ಬಳಕೆ ಮಾಡುತ್ತಿದ್ದಾರೆ. ಇದು ಅಪರಾಧವಾಗಿದ್ದು ಅವರಿಗೆ ಶಿಕ್ಷೆಯಾಗಲಿದೆ ಎಂದರು.
ಬಜೆಟ್ನಲ್ಲಿ ಹೊಸ ಪೊಲೀಸ್ ಠಾಣೆಗಳ ಘೋಷಣೆ: ಪರಮೇಶ್ವರ್
ಯುವಜನ, ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದು, ತಮ್ಮ ಸುಂದರ ಜೀವನವನ್ನೇ ಬಲಿಕೊಡುತ್ತಿದ್ದಾರೆ. ಇದರಿಂದ ಅವರ ಇಡೀ ಕುಟುಂಬ ಕೂಡ ನೋವಿನಲ್ಲಿ ನರಳುವಂತೆ ಮಾಡುತ್ತಿದ್ದಾರೆ. ಕೆಲವೇ ನಿಮಿಷದ ಸುಖಕ್ಕಾಗಿ ಇಡೀ ಜೀವನವನ್ನು ಹಾಳು ಮಾಡಿಕೊಳ್ಳುವ ಕೆಲಸಕ್ಕೆ ಯುವಕರು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ.
ಶಾಲಾ ಕಾಲೇಜುಗಳಲ್ಲಿ ಕಾನೂನು ಬಾಹಿರವಾಗಿ ಯಾರಾದರೂ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದರೆ ಅಂಥವರ ಬಗ್ಗೆ ಸಾರ್ವಜನಿಕರು ದೂರು ನೀಡಲಿ. ಇದರಿಂದ ಯುವಕರ ಭವಿಷ್ಯ ಹಾಳಾಗುವುದನ್ನು ತಡೆಯುವುದರ ಜತೆಗೆ , ಆರೋಪಿಗಳಿಗೆ ಶಿಕ್ಷೆಯಾಗಲಿದೆ.
ನೇರ ಬಂದು ದೂರು ನೀಡಲು ಸಾಧ್ಯವಾಗದಿದ್ದರೆ ನಗರ ಸಂಚಾರ ಪೊಲೀಸರು ತೆರೆದಿರುವ 1908 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ, ಮಾಹಿತಿ ನೀಡಬಹುದು ಎಂದರು.
ಪ್ರತಿ ವರ್ಷ ಮಾದಕ ವಸ್ತು ವಿರೋಧಿ ದಿನವನ್ನು ಕೇವಲ ಆಚರಿಸಿ ಸುಮ್ಮನಾದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸುವ ಆಂದೋಲನವಾಗಬೇಕು. ಯಾರೂ ಕೂಡ ಮಾದಕ ವ್ಯಸನಿಗಳಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಸಲಹೆ ನೀಡಿದರು.