ನಮ್ಮ ನಡೆ ಮತಗಟ್ಟೆ ಕಡೆ: ರಾಜ್ಯಾದ್ಯಂತ 58,000 ಬೂತ್ಗಳಲ್ಲಿ ಜಾಗೃತಿ ಅಭಿಯಾನ
ಬೆಂಗಳೂರು, ಮೇ. 02: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ತಮ್ಮ ಮತಗಟ್ಟೆಗಳ ಬಗ್ಗೆ ಅರಿವು ಮೂಡಿಸಲು 'ನಮ್ಮ ನಡೆ ಮತಗಟ್ಟೆಯ ಕಡೆ' ಎಂಬ ವಿಶೇಷ ಕಾರ್ಯಕ್ರಮವನ್ನು ರಾಜ್ಯಾದ್ಯಂತ 58 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಈ ಮೂಲಕ ತಮ್ಮ ತಮ್ಮ ಕ್ಷೇತ್ರದ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸಲು ಕರೆ ನೀಡಲಾಯಿತು.
ಬೆಂಗಳೂರು ಉತ್ತರದ ಜಕ್ಕೂರಿನಲ್ಲಿರುವ ತಮ್ಮ ಮತಗಟ್ಟೆಗೆ ಭೇಟಿ ನೀಡುವ ಮೂಲಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮತಗಟ್ಟೆಗಳಲ್ಲಿ 'ಮೇ 10 ರಂದು ಪ್ರಜಾಪ್ರಭುತ್ವದ ಮತದಾನದ ಹಬ್ಬ' ಎಂಬ ಧ್ಯೇಯವಾಕ್ಯದೊಂದಿಗೆ ಧ್ವಜಾರೋಹಣ ಮತ್ತು ವಾಕಥಾನ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯ ಕುರಿತು ಜನರು ತಮ್ಮ ದೂರುಗಳನ್ನು ಸಲ್ಲಿಸಬಹುದಾದ ಸಹಾಯವಾಣಿ (1950) ಮತ್ತು ಸಿ-ವಿಜಿಲ್ನಂತಹ ಮೊಬೈಲ್ ಅಪ್ಲಿಕೇಶನ್ಗಳನ್ನು ವಿವರಿಸುವ ಕರಪತ್ರಗಳನ್ನು ಸಹ ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಇದೇ ವೇಳೆ, 'ಮನೆಯಿಂದಲೇ ಮತ ಚಲಾಯಿಸಿ' ಎಂಬ ಆಯ್ಕೆಯನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ 103 ವರ್ಷದ ಮಹಾದೇವ ಮಹಾಲಿಂಗ ಆರಂಭಿಸಿ ತಮ್ಮ ಹಕ್ಕು ಚಲಾಯಿಸಿದರು. ಅವರು ಚಿಕ್ಕೋಡಿಯ ಸದಲಗಾ ವಿಧಾನಸಭಾ ಕ್ಷೇತ್ರದ ಹಿರಿಯ ಮತದಾರರಾಗಿದ್ದು, ಮತದಾನದ ಮಹತ್ವದ ಕುರಿತು ಮಾತನಾಡಿದ್ದಾರೆ.

"ರಾಷ್ಟ್ರದ ಜವಾಬ್ದಾರಿಯುತ ನಾಗರಿಕರಾಗಿ, ನಾವು ನಮ್ಮ ಮತಗಳನ್ನು ಕಡ್ಡಾಯವಾಗಿ ಚಲಾಯಿಸಬೇಕು" ಎಂದ ಅವರು, 80 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಿದ ಭಾರತದ ಚುನಾವಣಾ ಆಯೋಗವನ್ನು ಶ್ಲಾಘಿಸಿದ್ದಾರೆ.
ಇನ್ನು, ಚುನಾವಣಾ ಆಯೋಗ ಮೇ 10ರಂದು ನಡೆಯುವ ಮತದಾನಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತವು ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ. ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್. ಲತಾ ಚುನಾವಣಾ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
'ಜಿಲ್ಲೆಯಲ್ಲಿ ಹೊಸಕೋಟೆ, ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಗಳಿವೆ. ಚುನಾವಣಾ ಕಣದಲ್ಲಿ ಒಟ್ಟು 56 ಅಭ್ಯರ್ಥಿಗಳಿದ್ದಾರೆ. ಮೇ 10 ರಂದು ಮತದಾನ ಪ್ರಕ್ರಿಯೆ ಮುಗಿದ ನಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಭದ್ರತಾ ಕೊಠಡಿಗಳನ್ನು ಹಾಗೂ ಮತ ಎಣಿಕಾ ಕೊಠಡಿಗಳನ್ನು ದೇವನಹಳ್ಳಿ ತಾಲ್ಲೂಕಿನ ಪ್ರಸನ್ನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ನಿಗದಿಪಡಿಸಲಾಗಿದೆ' ಎಂದಿದ್ದಾರೆ.












Click it and Unblock the Notifications