ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಶ್ರೀರಾಮುಲು ಎಚ್ಚರಿಕೆ!
ಬೆಂಗಳೂರು, ಮೇ 30: ಪಾದರಾಯನಪುರ ವಾರ್ಡ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಮತ್ತೆ ಚರ್ಚೆಗೆ ಕಾರಣವಾಗಿದ್ದಾರೆ. ಈ ಮೊದಲು ಪಾದರಾಯನಪುರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಕೊಟ್ಟಿದ್ದ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.
ಇದೀಗ ಅವರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಮಹಾಮಾರಿ ಕೋವಿಡ್ ಸೋಂಕಿರುವುದು ದೃಢಪಟ್ಟ ಬಳಿಕವೂ ಆಸ್ಪತ್ರೆಗೆ ತೆರಳದೇ ಮನೆಯಲ್ಲಿದ್ದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ.
ಬಿಬಿಎಂಪಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರ ಈ ನಡವಳಿಕೆಯನ್ನು ಸರ್ಕಾರ ಸಹಿಸುವುದಿಲ್ಲ ಎಂದು ಶ್ರೀರಾಮುಲು ಎಚ್ಚರಿಸಿದ್ದಾರೆ. ಅವರಿಗೆ ಕೊರೊನಾ ವೈರಸ್ ದೃಢಪಟ್ಟ ಬಳಿಕ ಸಹಕರಿಸಬೇಕು. ತಕ್ಷಣ ಆಸ್ಪತ್ರೆಗೆ ಸೇರಿಕೊಂಡು ಚಿಕಿತ್ಸೆ ಪಡೆಯಬೇಕಿತ್ತು, ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವುದು ಸರಿಯಲ್ಲ. ಹೀಗೆ ಮಾಡಿದ್ರೆ ಸರ್ಕಾರದಿಂದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೋವಿಡ್ ಸೋಂಕು ದೃಢಪಟ್ಟ ಬಳಿಕ ಮುಚ್ಚಿಟ್ಟುಕೊಂಡರೆ ಅವರಿಂದ ಎಲ್ಲರಿಗೂ ಸಮಸ್ಯೆ ಆಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ.
ಇದೀಗ ಸರ್ಕಾರದ ಎಚ್ಚರಿಕೆ ಬಳಿಕ ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಕಾರ್ಪೊರೇಟರ್ ಇಮ್ರಾನ್ ಪಾಷಾ ಮನವೊಲಿಸಿ ಆಸ್ಪತ್ರೆಗೆ ದಾಖಲ ಆಗುವಂತೆ ಮಾಡಿದ್ದಾರೆ. ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಆಂಬುಲೆನ್ಸ್ನಲ್ಲಿ ಪಾಷಾ ಅವರನ್ನು ಕರೆದುಕೊಂಡು ಹೋಗಿದ್ದಾರೆ.

ಕಾರ್ಪೊರೇಟರ್ ಆಗಿದ್ದುಕೊಂಡು ಈ ರೀತಿ ಕೊರೊನಾ ವೈರಸ್ ಚಿಕಿತ್ಸೆಗೆ ನಿರಾಕರಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.












Click it and Unblock the Notifications