ಕನ್ನಡ ಸಂಘಟನೆಗಳಿಂದ ಜು.31ಕ್ಕೆ ಬೆಂಗಳೂರು ಬಂದ್
ಬೆಂಗಳೂರು, ಜು. 23 : ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟವು ಜು.26ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅದನ್ನು ಮುಂದೂಡಲಾಗಿದೆ. ಜು.31ರ ಗುರುವಾರದಂದು ಬಂದ್ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಶಾಲಾ-ಕಾಲೇಜುಗಳು, ಸಾರಿಗೆ, ಸಿನಿಮಾ, ಆಟೋರಿಕ್ಷಾ, ಅಂಗಡಿ-ಮುಂಗಟ್ಟುಗಳು, ಐಟಿ-ಬಿಟಿ ಕಚೇರಿ ಒಳಗೊಂಡಂತೆ ಎಲ್ಲ ಸಾರ್ವಜನಿಕ ವಹಿವಾಟನ್ನು ಜು.31ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ತನಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಅತ್ಯಾಚಾರಿಗಳನ್ನು ಗೂಂಡಾ ಕಾಯ್ದೆ ಸೇರಿಸದೆ ಗಲ್ಲು ಶಿಕ್ಷೆ ವಿಧಿಸಬೇಕು. ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಒಂದು ತಿಂಗಳ ಅವಧಿಯಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಂಡು ತೀರ್ಪು ಪ್ರಕಟಿಸುವ ರೀತಿಯಲ್ಲಿ ನೂತನ ಕಾಯ್ದೆ ಜಾರಿಗೊಳಿಸಬೇಕು ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಬಂದ್ ಗೆ ಕರೆ ನೀಡಲಾಗಿದೆ. [ರಾಜ್ಯದ ಅತ್ಯಾಚಾರ ಪ್ರಕರಣಗಳು]
ಮೊದಲು ಬಂದ್ ಅನ್ನು ಜು.26ರ ಶನಿವಾರ ನಡೆಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ, ಸದ್ಯ ದಿನಾಂಕವನ್ನು ಮುಂದೂಡಲಾಗಿದ್ದು, ಜು.31ರ ಗುರುವಾರ ಬಂದ್ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಎರಡು ಗುಂಪುಗಳಾಗಿ ಗುರುವಾರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಒಂದು ಗುಂಪು ಟೌನ್ ಹಾಲ್ನಿಂದ ಮೆರವಣಿಗೆ ಹೊರಟು ಸ್ಟೇಟ್ ಬ್ಯಾಂಕ್ ವೃತ್ತ ತಲುಪಿ ನಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುತ್ತದೆ. ಮತ್ತೊಂದು ಗುಂಪು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications