ಬೆಂಗಳೂರು ಹಿಂಸಾಚಾರಕ್ಕೆ ಬಳಸಿದ ಮಾರಕಾಸ್ತ್ರಗಳು ಜಪ್ತಿ
ಬೆಂಗಳೂರು, ಆಗಸ್ಟ್.21: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
Recommended Video
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಗಲಭೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಎಲ್ಲಿ ಬಚ್ಚಿಟ್ಟಿದ್ದರು ಎನ್ನುವುದರ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗಿತ್ತು.
ಶುಕ್ರವಾರ ಬೆಳ್ಳಂಬೆಳಗ್ಗೆ ಫೀಲ್ಡ್ ಗೆ ಇಳಿದ ಡಿ.ಜೆ.ಹಳ್ಳಿ ಠಾಣೆ ಪೊಲೀಸರ ತಂಡ, ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದರು. ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಗೆ ಬಳಸಿದ್ದ 10ಕ್ಕೂ ಹೆಚ್ಚು ದೊಣ್ಣೆ, ರಾಡ್ ಮತ್ತು ತಲ್ವಾರ್ ಗಳನ್ನು ಜಪ್ತಿ ಮಾಡಿಕೊಂಡರು.

ತನಿಖಾ ಹಂತದಲ್ಲಿ ಮಾರಕಾಸ್ತ್ರಗಳೇ ಸಾಕ್ಷಿ:
ಡಿ.ಜೆ.ಹಳ್ಳಿ ಮತ್ತು ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಗಳು ಬಳಸಿ ಮಾರಕಾಸ್ತ್ರಗಳನ್ನೇ ಸಾಕ್ಷಿ ಎಂದು ಪರಿಗಣಿಸಲಾಗುತ್ತದೆ. ಈ ಹಿಂದೆ ಸ್ಥಳ ಪರಿಶೀಲನೆ ನಡೆಸಿದ ಎಫ್ಎಸ್ಎಲ್ ಅಧಿಕಾರಿಗಳ ತಂಡದ ಮಾಹಿತಿ ಮತ್ತು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ಮಾರಕಾಸ್ತ್ರಗಳಿಂದ ಕಿಡಿಗೇಡಿಗಳು ದಾಳಿ ನಡೆಸಿರುವುದು ಬೆಳಕಿಗೆ ಬಂದಿತ್ತು.
ಕಳೆದ ಆಗಸ್ಟ್.11ರ ರಾತ್ರಿ 8 ಗಂಟೆ ವೇಳೆಗೆ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಕಾವಲ್ ಬೈರಸಂದ್ರದ ನಿವಾಸದ ಎದುರು ನೂರಾರು ಮಂದಿ ಉದ್ರಿಕ್ತರ ಗುಂಪು ಗಲಾಟೆ ಶುರು ಮಾಡಿತು. ನೋಡನೋಡುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಶಾಸಕರ ಮನೆ ಗಾಜುಗಳಿಗೆ ಕಲ್ಲುತೂರಿದ ಉದ್ರಿಕ್ತರು ಮನೆ ಎದುರಿಗಿದ್ದ ವಾಹನಗಳನ್ನು ಪುಡಿಗಟ್ಟಿದರು. ಸ್ಥಳಕ್ಕೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆ ಪೊಲೀಸರು ಆಗಮಿಸುತ್ತಿದ್ದಂತೆ ಕೆರಳಿದ ಉದ್ರಿಕ್ತರ ಮತ್ತೊಂದು ಗುಂಪು ಪೊಲೀಸ್ ಠಾಣೆಗೆ ನುಗ್ಗಿತು. ಠಾಣೆಯ ಎದುರಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.












Click it and Unblock the Notifications