ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಎಟಿಎಂ ಸ್ಥಾಪನೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್ ಗಳ ಸಹಕಾರ ಕೋರಿರುವ ರಾಜ್ಯ ಸರ್ಕಾರ, ಪಂಚಾಯಿತಿ ಮಟ್ಟದಲ್ಲಿ ಎಟಿಎಂ ಕೇಂದ್ರ ಸ್ಥಾಪಿಸಲು ಅವಕಾಶ ನೀಡುವಂತೆ ಕೋರಿದೆ. ಇದರಿಂದ ಯೋಜನೆಯಡಿ ಕಾರ್ಯನಿರ್ವಹಿಸಿದ ಜನರಿಗೆ ಶೀಘ್ರವಾಗಿ ವೇತನ ನೀಡಲು ಸಾಧ್ಯವಾಗುತ್ತದೆ ಎಂಬುದು ಸರ್ಕಾರದ ಚಿಂತನೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಉದ್ಯೋಗ ಖಾತರಿ ಯೋಜನೆಯ ಸುಮಾರು ಮೂರುವರೆ ಸಾವಿರ ಕೋಟಿ ಅನುದಾನ ಬಳಕೆಯಾಗದೆ ಕೇಂದ್ರಕ್ಕೆ ಹಿಂದಿರುಗಿತ್ತು. ಸಕಾಲಕ್ಕೆ ಕೂಲಿ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸದ್ಯ ಗ್ರಾಮೀಣ ಭಾಗಗಳಲ್ಲಿ ಜನರು ಯೋಜನೆ ಬಗ್ಗೆ ಆಸಕ್ತ ತೋರಿಸುತ್ತಿಲ್ಲ ಎಂಬುದು ಸರ್ಕಾರಕ್ಕೆ ಗಮನಕ್ಕೆ ಬಂದಿದೆ. ಆದ್ದರಿಂದ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಿದೆ.
ರಾಜ್ಯದ 5,630 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಎಟಿಎಂ ಕೇಂದ್ರಗಳನ್ನು ಸ್ಥಾಪಿಸಿ, ಆ ಮೂಲಕ ಫಲಾನುಭವಿಗಳಿಗೆ ಸಕಾಲಕ್ಕೆ ವೇತನ ಪಾವತಿ ಮಾಡಿ, ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಆದ್ದರಿಂದಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಟಿಎಂ ಸ್ಥಾಪನೆ ಮಾಡಲು ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ರವಾನಿಸಿದೆ.
ನರೇಗಾ ಯೋಜನೆ ಯಶಸ್ವಿಯಾಗಬೇಕಾದರೆ ಜನರಿಗೆ ಸಕಾಲಕ್ಕೆ ಕೂಲಿ ಪಾವತಿ ಆಗಬೇಕು. ಆದರೆ, ರಾಜ್ಯದ 3 ಸಾವಿರಕ್ಕೂ ಅಧಿಕ ಗ್ರಾಮ ಪಂಚಾಯಿತಿಗಳಲ್ಲಿ ಬ್ಯಾಂಕ್ ಶಾಖೆಗಳಿಲ್ಲ. ಗ್ರಾಮಗಳಲ್ಲಿ ಬ್ಯಾಂಕ್ ಗಳು ಬ್ಯುಸಿನೆಸ್ ಕರೆಸ್ಪಾಂಡೆಂಟ್ಸ್ ನೇಮಿಸಿ ನರೇಗಾ ಕೂಲಿ ವಿತರಣೆ ಮಾಡಲು ಕ್ರಮ ಕೈಗೊಂಡಿದ್ದವು. ಇದು ವಿಳಂಬದ ಪ್ರಕ್ರಿಯೆಯಾದ್ದರಿಂದ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿರಲಿಲ್ಲ.
ಆದ್ದರಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಟಿಎಂ ಸ್ಥಾಪಿಸಲು ಬ್ಯಾಂಕ್ ಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ. 2014ರ ಮಾರ್ಚ್ ವೇಳೆಗೆ 13,684 ಗ್ರಾಮಗಳಿಗೆ ಬ್ಯಾಂಕಿಗ್ ಸೌಲಭ್ಯ ಒದಗಿಸಲು ರಿಸರ್ವ್ ಬ್ಯಾಂಕ್ ರಾಜ್ಯಗಳಿಗೆ ಸೂಚಿಸಿದೆ. ಆದ್ದರಿಂದ ಎಟಿಎಂ ಸ್ಥಾಪನೆ ಮಾಡಲು ಅವಕಾಶ ನೀಡುವ ಸಾಧ್ಯತೆಯೂ ಇದೆ.