ಮಂಗಳವಾರ ಬೆಂಗಳೂರಲ್ಲಿ 10 ಸಾವಿರ ರೈತರಿಂದ ಬಾರುಕೋಲು ಚಳವಳಿ
ಬೆಂಗಳೂರು, ಡಿಸೆಂಬರ್ 07: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ಭಾರತ್ ಬಂದ್ಗೆ ರೈತರು ಕರೆ ನೀಡಿದ್ದಾರೆ. ಕರ್ನಾಟಕದಲ್ಲಿಯೂ ಬಂದ್ಗೆ ಬೆಂಬಲ ನೀಡಲಾಗಿದೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಬೆಂಬಲ ನೀಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ.
ಬೆಂಗಳೂರು ನಗರಕ್ಕೂ ಡಿಸೆಂಬರ್ 8ರಂದು ಬಂದ್ ಬಿಸಿ ತಟ್ಟಲಿದೆ. ಡಿಸೆಂಬರ್ 5ರಂದು ಕನ್ನಡ ಒಕ್ಕೂಟ ಕರೆ ನಿಡಿದ್ದ ಬಂದ್ ವೇಳೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಮಂಗಳವಾರ ಬಂದ್ ನಡೆಯಲಿದೆ.
ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ರೈತರು ಹೇಳಿದ್ದಾರೆ. ಆಟೋ, ಕ್ಯಾಬ್ ಚಾಲಕರು ರೈತರಿಗೆ ಬೆಂಬಲ ನೀಡಿದ್ದು, ಬಂದ್ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಾರುಕೋಲು ಪ್ರತಿಭಟನೆ
ಮಂಗಳವಾರ ವಿವಿಧ ಜಿಲ್ಲೆಗಳಿಂದ 10 ಸಾವಿರ ರೈತರು ಬೆಂಗಳೂರು ನಗರಕ್ಕೆ ಬರಲಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ತನಕ ಬಾರುಕೋಲು ಚಳವಳಿಯನ್ನು ನಡೆಸಲಿದ್ದಾರೆ. ಇದರಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗಲಿದೆ. ರಸ್ತೆಗಳು ಹಲವು ಗಂಟೆಗಳ ಕಾಲ ಬಂದ್ ಆಗುವ ನಿರೀಕ್ಷೆ ಇದೆ.

ವಿಧಾನಸೌಧಕ್ಕೆ ಮುತ್ತಿಗೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಈ ಕುರಿತು ಮಾಹಿತಿ ನೀಡಿದ್ದಾರೆ. "10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ. ನಾವು ಹಿಂಸಾತ್ಮಕ ಪ್ರತಿಭಟನೆ ಮಾಡಲ್ಲ. ನಮ್ಮದು ಶಾಂತಿಯುತ ಬಂದ್" ಎಂದು ಅವರು ಹೇಳಿದ್ದಾರೆ. ಮೆಜೆಸ್ಟಿಕ್ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ ತನಕ ಬೃಹತ್ ಜಾಥಾ ನಡೆಯಲಿದೆ.

ಜಿಲ್ಲೆಗಳಲ್ಲೂ ಹೋರಾಟ ಮಾಡುತ್ತೇವೆ
"ಕೇಂದ್ರ ಸರ್ಕಾರ ರೈತರು ದೆಹಲಿ ತಲುಪದಂತೆ ತಡೆದಿದೆ. ರೈತರ ವಿರೋಧಿಯಾದ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಹೊಸ ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ರೈತರು ಬಂದ್ ಕರೆ ನೀಡಿದ್ದಾರೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಬಂದ್ ಮಾಡುತ್ತೇವೆ" ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
Recommended Video

ಹೆದ್ದಾರಿ ತಡೆ ನಡೆಸಲಾಗುತ್ತದೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ಬಾರುಕೋಲು ಚಳವಳಿ ನಡೆದರೆ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಯಲಿದೆ. ಬೆಂಗಳೂರು ಸಂಪರ್ಕಿಸುವ ಹೆದ್ದಾರಿಗಳನ್ನು ಬಂದ್ ಮಾಡಲಾಗುತ್ತದೆ ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.












Click it and Unblock the Notifications