ಡ್ರಗ್ಸ್ ಕಿಂಗ್ಪಿನ್ಗಳನ್ನು ಬಂಧಿಸಿ: ಬಸವರಾಜ್ ಬೊಮ್ಮಾಯಿ
ಬೆಂಗಳೂರು, ಸೆ. 06: ಎಗ್ಗಿಲ್ಲದೆ ಸಾಗಿದ್ದ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಡ್ರಗ್ಸ್ ಮಾಫಿಯಾದೊಂದಿಗೆ ನಂಟಿರುವವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಪೊಲೀಸರು ನಿರಂತರವಾಗಿ ಡ್ರಗ್ಸ್ ಪೆಡ್ಲರ್ಗಳ ಮೇಲೆ ರೇಡ್ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಹತ್ವದ ಸೂಚನೆಯನ್ನು ಕೊಟ್ಟಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದವನ್ನು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಡೆಸಿದ್ದಾರೆ. ಮಾದಕ ವಸ್ತು ಜಾಲವನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತು ಹಾಕಿ ಎಂಬ ಖಡಕ್ ಸೂಚನೆಯನ್ನು ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ಕೊಟ್ಟಿದ್ದಾರೆ. ರಾಜ್ಯದ ಗಡಿ ಭಾಗದಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಎಲ್ಲವನ್ನೂ ಸಂಪೂರ್ಣವಾಗಿ ತಡೆಯಬೇಕು. ಡ್ರಗ್ಸ್ ಜಾಲದ ಕಿಂಗ್ ಪಿನ್ಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ ಎಂದಿದ್ದಾರೆ.

ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಪೊಲೀಸ್ ಮುಖ್ಯಸ್ಥರೊಂದಿಗೆ ಚರ್ಚಿಸಿ ಮಾದಕವಸ್ತು ಸಾಗಿಸುವವರನ್ನು ಪತ್ತೆಮಾಡಿ ಬಂಧಿಸಿ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಇದೇ ಸಂದರ್ಭದಲ್ಲಿ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈಗಾಗಲೇ ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ಅಪರಾಧಿಗಳ ಮೇಲೆ ತೀವ್ರ ನಿಗಾ ಇಡಿ. ರಾಜ್ಯಾದ್ಯಂತ ಹಲವೆಡೆ ಗಾಂಜಾ ಬೆಳೆಯಲಾಗುತ್ತಿದೆ. ಗಾಂಜಾ ಬೆಳೆಯುವವರನ್ನು ಬಂಧಿಸಿ, ಸಿಗುವ ಗಾಂಜಾವನ್ನು ಸಂಪೂರ್ಣವಾಗಿ ನಾಶ ಮಾಡಿ. ಮಾದಕ ವಸ್ತುಗಳ ಸಾಗಾಣಿಕೆದಾರರನ್ನು ಬಂಧಿಸಿ ಗೂಂಡಾ ಕಾಯಿದೆಯಡಿ ಕ್ರಮ ಕೈಗೊಳ್ಳಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.












Click it and Unblock the Notifications