ವಿಪಕ್ಷ ನಾಯಕನ ಸ್ಥಾನಕ್ಕೆ ತೀವ್ರ ಪೈಪೋಟಿ: ಬಿಎಸ್ವೈರನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ
ಬೆಂಗಳೂರು, ಜೂನ್ 2: ಹಲವು ಕಗ್ಗಂಟುಗಳನ್ನು ಬಿಡಿಸಿಕೊಂಡ ಕಾಂಗ್ರೆಸ್ ಸರ್ಕಾರ ರಚನೆ ಮಾಡುವಯಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕ ಯಾರು ಎಂದು ತೀರ್ಮಾನ ಮಾಡಿಲ್ಲ. ಹಲವು ಮುಖಂಡರು ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದು ಲಾಬಿ ಮಾಡುತ್ತಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ವಿಪಕ್ಷ ನಾಯಕನ ಸ್ಥಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ವರದಿಯಾಗಿದೆ.

ವಿಪಕ್ಷ ನಾಯಕನ ಆಯ್ಕೆ ಮಾಡಲು ಬಿಜೆಪಿಯ ರಾಷ್ಟ್ರೀಯ ನಾಯಕರು ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಣೆ ಮಾಡಿದ್ದಾರೆ. ಸದ್ಯಕ್ಕೆ ವಿರೋಧ ಪಕ್ಷದ ನಾಯಕನ ಆಯ್ಕೆ ಅಂತಿಮವಾಗುವ ಸಾಧ್ಯತೆ ಕಡಿಮೆ ಇದೆ, ಜುಲೈನಲ್ಲಿ ನಡೆಯಲಿರುವ ಬಜೆಟ್ ಅಧಿವೇಶಕ್ಕೆ ಮುನ್ನ ವಿರೋಧ ಪಕ್ಷದ ನಾಯಕನ ಹೆಸರು ಘೋಷಣೆ ಮಾಡುವ ಸಾಧ್ಯತೆ ಇದೆ.
ವಿಪಕ್ಷ ನಾಯಕನಾಗಲು ಬಿಜೆಪಿಯ ಹಿರಿಯ ನಾಯಕರು ಪೈಪೋಟಿಗೆ ಬಿದ್ದಿರುವುದು ವರಿಷ್ಠರ ತಲೆನೋವಿಗೆ ಕಾರಣವಾಗಿದೆ. ರಾಜ್ಯದಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿಗೆ ಲೋಕಸಭಾ ಚುನಾವಣೆ ಮುಖ್ಯವಾಗಿದ್ದು, ಪಕ್ಷದಲ್ಲಿ ಗೊಂದಲ ಅಸಮಾಧಾನ ಉಂಟಾಗದಂತೆ ಎಚ್ಚರಿಕೆ ವಹಿಸುತ್ತಿದೆ. ಚುನಾವಣೆಯಲ್ಲಿ ಸೋಲಿನ ಬಳಿಕ ಹಲವು ಹಿರಿಯ ಬಿಜೆಪಿ ನಾಯಕರು , ಕೇಂದ್ರ ನಾಯಕರು, ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಹಲವು ಹೆಸರುಗಳು ಮುಂಚೂಣಿಯಲ್ಲಿ
ಬಿಜೆಪಿಯಲ್ಲಿ ಹಿರಿಯ ಶಾಸಕರು ವಿಪಕ್ಷ ನಾಯಕನಾಗಲು ಹಠ ಹಿಡಿದಿದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ, ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.
ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಪ್ರಶ್ನೆ ಮಾಡಲು, ಮಾಡುವ ಪ್ರತಿ ತಪ್ಪುಗಳನ್ನು ಜನರ ಗಮನಕ್ಕೆ ತರುವುದು ಬಿಜೆಪಿಗೆ ಮುಖ್ಯವಾಗಿದೆ. ಮುಂದಿನ ವರ್ಷವೇ ಲೋಕಸಭಾ ಚುನಾವಣೆ ಇರುವುದರಿಂದ ವಿಪಕ್ಷ ನಾಯಕನ ಸ್ಥಾನ ಕೂಡ ಮುಖ್ಯವೆಂದು ಬಿಜೆಪಿ ನಾಯಕರಿಗೆ ತಿಳಿದಿದ್ದು, ಅಳೆದು ತೂಗಿ ತೀರ್ಮಾನ ಮಾಡಲು ನಿರ್ಧರಿಸಿದ್ದಾರೆ.
ವಿರೋಧ ಪಕ್ಷಗಳಿಗೆ ಖಡಕ್ಕಾಗಿ ಉತ್ತರ ನಡುವ ಹಲವು ಘಟಾನುಘಟಿ ನಾಯಕರು ಕಾಂಗ್ರೆಸ್ನಲ್ಲಿದ್ದು ಅವರನ್ನು ಹಣಿಯಲು ಸಮರ್ಥವಾದ ನಾಯಕನನ್ನು ಆಯ್ಕೆ ಮಾಡಲು ವರಿಷ್ಠರು ನಿರ್ಧಾರ ಮಾಡಿದ್ದು, ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಮಾಡಲು ನಿರ್ಧರಿಸಿದ್ದಾರೆ.












Click it and Unblock the Notifications