ಒಂದು ವಾರ್ಡ್ಗೆ ಒಂದು ಗಣೇಶ; ನಿಯಮ ಬದಲಿಸಿದ ಬಿಬಿಎಂಪಿ
ಬೆಂಗಳೂರು, ಸೆಪ್ಟೆಂಬರ್ 09; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಇಡುವ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಮೊದಲು ಮಾರ್ಗಸೂಚಿ ಹೊರಡಿಸಲಾಗಿತ್ತು.
ಗುರುವಾರ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಈ ಕುರಿತು ಮಾತನಾಡಿದ್ದಾರೆ, "ಒಂದು ವಾರ್ಡ್ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ" ಎಂದು ಹೇಳಿದ್ದಾರೆ.
ವಾರ್ಡ್ಗೊಂದು ಗಣೇಶ ಕೂರಿಸುವುದಕ್ಕೆ ಗಣೇಶೋತ್ಸವ ಸಮಿತಿಗಳು ವಿರೋಧ ವ್ಯಕ್ತಪಡಿಸಿದ್ದವು. ಗಣೇಶಮೂರ್ತಿ ತಯಾರಕರು ಸಹ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯನ್ನು ಮಾಡಿದ್ದರು.

ಗಣೇಶೋತ್ಸವ ಸಮಿತಿ ಮತ್ತು ಗಣೇಶಮೂರ್ತಿ ತಯಾರಕರ ಪ್ರತಿಭಟನೆ ಬಳಿಕ ಬಿಬಿಎಂಪಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಇದ್ದ ನಿಯಮ ಬದಲಾವಣೆ ಮಾಡಿದೆ. ಈ ಕುರಿತು ಅಧಿಕೃತ ಆದೇಶ ಇನ್ನೂ ಹೊರ ಬಿದ್ದಿಲ್ಲ.
3 ದಿನದ ಆದೇಶವೂ ವಾಪಸ್; ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸುವುದು ಮಾತ್ರವಲ್ಲ ಕೇವಲ 3 ದಿನ ಗಣೇಶ ಕೂರಿಸಬೇಕು ಎಂಬ ನಿಯಮವನ್ನು ಸಹ ಬಿಬಿಎಂಪಿ ವಾಪಸ್ ಪಡೆದಿದೆ.
ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿಗೂ ಮೀರಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು ಎಂಬ ಆದೇಶವನ್ನು ಸಹ ಬದಲಾವಣೆ ಮಾಡಲಾಗಿದೆ. ಚೌತಿಯಿಂದ ಚತುರ್ಥಿ ತನಕ ಗಣೇಶ ಕೂರಿಸಲು ಅನುಮತಿ ನೀಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ಗಳಲ್ಲಿರುವ ಎಲ್ಲಾ ಸಮಿತಿಗಳಿಗೂ ಗಣೇಶಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಿದೆ. ಕಲ್ಯಾಣಿಗಳಲ್ಲಿ ಮೂರ್ತಿ ವಿಸರ್ಜನೆ ಮಾಡಲು ಸಹ ಅನುಮತಿ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿಗೂ ಮೀರಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು ಎಂಬ ಆದೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ವಿರೋಧ ವ್ಯಕ್ತಪಡಿಸಿದ್ದರು.
ಗುರುವಾರ ಡಿ. ಕೆ. ಶಿವಕುಮಾರ್ ಮಾವಳ್ಳಿಯ ಆರ್. ವಿ. ರಸ್ತೆಯಲ್ಲಿ ನಡೆದ ಗೌರಿ-ಗಣೇಶ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಮೂರ್ತಿ ತಯಾರಕರ ಜೊತೆ ಮಾತುಕತೆಯನ್ನು ನಡೆಸಿದ್ದರು.
ಮಾರ್ಗಸೂಚಿ ಪ್ರಮುಖ ಅಂಶಗಳು; ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿತ್ತು. ಕೋವಿಡ್ ಸಂದರ್ಭದಲ್ಲಿ ಹೆಚ್ಚಿನ ಜನರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಆಯೋಜಕರಿಗೆ ತಿಳಿಸಿತ್ತು. ಮಾರ್ಗಸೂಚಿಯ ಪ್ರಮುಖ ಅಂಶಗಳು
* ಗಣೇಶಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆ ಮಾಡುವಂತಿಲ್ಲ.
* ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸ್ ಮಾಡಬೇಕು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಿರಬೇಕು.
* ದರ್ಶನಕ್ಕಾಗಿ ಬರುವ ಭಕ್ತಾದಿಗಳಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗಣೇಶ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
* ಗಣೇಶ ಮೂರ್ತಿ ಪ್ರತಿಷ್ಠಪನೆ ಮಾಡಿದ ಸ್ಥಳದಲ್ಲಿಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿಜೆ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ.
* ಗಣೇಶ ಪ್ರತಿಷ್ಠಾಪನಾ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು ಮತ್ತು ಒಮ್ಮೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವುದು.
* ಗಣೇಶೋತ್ಸವ ಆಚರಣೆಯ ಆಯೋಜಕರು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.












Click it and Unblock the Notifications