Bengaluru Property Tax: ಹೊಸ ಆಸ್ತಿದಾರರ ಪರಿಶೀಲನೆ, ತೆರಿಗೆ ಸಂಗ್ರಹಕ್ಕೆ ಬಿಬಿಎಂಪಿ ಸೂಚನೆ
ಬೆಂಗಳೂರು, ಜನವರಿ 12: ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ ಸ್ವಾಧೀನಾನುಭವ ಪತ್ರ ಹೊಂದಿರುವ ಸ್ವತ್ತುಗಳನ್ನು ಗುರುತಿಸಿ, ಅಂತಹ ಸ್ವತ್ತುಗಳ ಮಾಲೀಕರಿಂದ ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಗುರುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ ಸ್ವಾಧೀನಾನುಭವ ಪತ್ರ ಹೊಂದಿರುವ ಸ್ವತ್ತುಗಳನ್ನು ಅಧಿಕಾರಿಗಳು ಕೂಡಲೇ ಗುರುತಿಸಬೇಕು. ಅಂತಹ ಸ್ವತ್ತುಗಳಿಗೆ ತೆರಿಗೆಯನ್ನು ನಿಗದಿಪಡಿಸಿ ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು. ನಂತರ ಅವರಿಂದ ತೆರಿಗೆಯನ್ನು ಸಂಗ್ರಹಿಸಬೇಕು ಎಂದು ಸೂಚಿಸಿದರು.
ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲೂ ಮೊದಲ 10 ಡಿಫಾಲ್ಟರ್ಸ್ ಗಳಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಕಂದಾಯ ಅಧಿಕಾರಿಗಳಿಗೆ ನೀಡಿರುವ ವಾರದ ಗುರಿಯನ್ನು ತಪ್ಪದೆ ತಲುಪಬೇಕು. ಈ ಕುರಿತು ಆಯಾ ವಲಯ ಆಯುಕ್ತರು ಪ್ರತಿನಿತ್ಯ ಪರಿಶೀಲನಾ ಸಭೆ ನಡೆಸಿ ಆಸ್ತಿ ತೆರಿಗೆ ಗುರಿ ತಲುಪಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಗುಡುವಿನೊಳಗೆ ಆಸ್ತಿ ತೆರಿಗೆ ಸಂಗ್ರಹದ ಗುರಿ ತಲುಪಲು ಬೇಕಾದರೆ ಅಗತ್ಯ ನಿಯಮಳನ್ನು ಪಾಲಿಸಬೇಕು ಎಂದು ಹೇಳಿದರು.
ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ಕೋಶ ವಿಭಾಗದ ಜೊತೆ ಕಡ್ಡಾಯವಾಗಿ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಬಾಕಿ ತೆರಿಗೆ ಸಂಗ್ರಹಿಸಬೇಕು.
ಬೆಂಗಳೂರು ವಿದ್ಯುತ್ ಸರಬರಾಜ ಕಂಪನಿ ನಿಯಮಿತ (BESCOM) ನೀಡುರುವ ಅಂಕಿ ಅಂಶಗಳ ಆಧಾರದಲ್ಲಿ ಹೊಸದಾಗಿ ಸ್ವಾಧೀನಾನುಭವ ಪತ್ರ ಹೊಂದಿದವರನ್ನು ಪರಿಶೀಲಿಸಲಾಗುತ್ತಿದೆ. ಬಿಬಿಎಂಪಿ ಆಸ್ತಿ ತೆರಿಗೆ ದತ್ತಾಂಶದಲ್ಲಿ ವ್ಯತ್ಯಾಸ ಕಂಡುಬಂದಂತಹ ಸ್ವತ್ತುಗಳಿಗೆ ನೋಟಿಸ್ ಜಾರಿಗೊಳಿಸಿ. ನಂತರ ಸ್ವತ್ತಿನ ಮಾಲೀಕರಿಂದ ವ್ಯತ್ಯಾಸದ ತೆರಿಗೆ ದಂಡ ಹಾಗೂ ಬಡ್ಡಿ ಸಹಿತ ಸಂಗ್ರಹಿಸಲು ಅಧಿಕಾರಿಗಳಿಗೆ ತಿಳಿಸಿದರು.
2,757 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ
ಪ್ರಸಕ್ತ ಸಾಲಿನಲ್ಲಿ 4,189.78 ಕೋಟಿ ರೂ. ಆಸ್ತಿತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದುವರೆಗೆ (ಜ.11) 2,766.55 (ಶೇ.66.03) ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ. ಪ್ರಸಕ್ತ ಸಾಲಿನ ಗುರಿಯಂತೆ 1,423.23 ಕೋಟಿ ರೂ. ಸಂಗ್ರಹಿಸಬೇಕಿದೆ. ಎಲ್ಲಾ ಕಂದಾಯ ಅಧಿಕಾರಿಗಳು ನಿಗದಿತ ಗುರಿಯನ್ನು ತಲುಪುವ ಸಲುವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಆಯುಕ್ತರು ತಾಕೀತು ಮಾಡಿದರು.
ಸಭೆಯಲ್ಲಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ವಲಯ ಆಯುಕ್ತರಾದ ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಪಿ.ಎನ್.ರವೀಂದ್ರ, ಡಾ. ತ್ರಿಲೋಕ್ ಚಂದ್ರ, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.